ಐಪಿಎಸ್ ಅಧಿಕಾರಿ ಡಿ. ರೂಪಾ ಅವರು ತಮ್ಮ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ನಿರ್ಧಾರದಿಂದಾಗಿ, ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಮುಂದುವರಿಯಲಿದೆ.
ಬೆಂಗಳೂರು (ಫೆ.21): ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ತಮ್ಮ ವಿರುದ್ಧ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಡಿ.ರೂಪ ಸಲ್ಲಿಸಿದ್ದ ಮಾನನಷ್ಟ ಕೇಸ್ನ ವಿಚಾರಣೆ ಮುಂದುವರಿಯಲಿದೆ ಎಂದು ಹೈಕೋರ್ಟ್ ತಿಳಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಈ ಕೇಸ್ಅನ್ನು ರದ್ದು ಮಾಡುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ಸಲ್ಲಿಸಿದ್ದರು. ಆದರೆ, ಇದಕ್ಕೆ ಹೈಕೋರ್ಟ್ ನಿರಾಕರಿಸಿದೆ. ಇದರಿಂದಾಗಿ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಈ ಪ್ರಕರಣದ ವಿಚಾರಣೆ ಮುಂದುವರಿಯಲು ಇದ್ದ ಅಡೆತಡೆ ದೂರವಾಗಿದೆ.
ಏನಿದು ಕೇಸ್?
2023ರ ಫೆಬ್ರವರಿಯಲ್ಲಿ ಡಿ. ರೂಪಾ ಅವರು ರೋಹಿಣಿ ಸಿಂಧೂರಿ ವಿರುದ್ಧ ಖಾಸಗಿ ದೂರು (PCR) ದಾಖಲಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ರೋಹಿಣಿ ಅವರು ತಮ್ಮ ವಿರುದ್ಧ ಅವಹೇಳನಕಾರಿ ಪೋಸ್ಟ್ಗಳನ್ನು ಹಾಕುವ ಮೂಲಕ ಮಾನಹಾನಿ ಮಾಡಿದ್ದಾರೆ ಎಂದು ರೂಪಾ ಆರೋಪಿಸಿದ್ದರು.
"ಜವಾಬ್ದಾರಿಯುತ ಸ್ಥಾನದಲ್ಲಿರುವ ಡಿ. ರೂಪಾ ಅವರು ಮಾನಸಿಕ ಸ್ವಾಸ್ಥ್ಯ ಮತ್ತು ಸ್ಥಿಮಿತತೆ ಕಳೆದುಕೊಂಡವರಂತೆ ವರ್ತಿಸುತ್ತಿದ್ದಾರೆ. ಮಾಧ್ಯಮಗಳ ಗಮನ ಸೆಳೆಯಲು ಮತ್ತು ದ್ವೇಷಿಸುವವರ ವಿರುದ್ಧ ಹಗೆ ಸಾಧಿಸಲು ಆಧಾರರಹಿತ ಆರೋಪ ಮಾಡುವುದು ಅವರಿಗೆ ಅಭ್ಯಾಸವಾಗಿದೆ" ಎಂದು ರೋಹಿಣಿ ಪೋಸ್ಟ್ ಮಾಡಿದ್ದರು. ಜೊತೆಗೆ ಡಿ. ರೂಪಾಗೆ 'ಗೆಟ್ ವೆಲ್ ಸೂನ್' (Get Well Soon) ಎಂದು ಹೇಳುವ ಮೂಲಕ ವ್ಯಂಗ್ಯವಾಡಿದ್ದರು.
ರೋಹಿಣಿ ಸಿಂಧೂರಿ ಪೋಸ್ಟ್ಗೆ ಸಿಟ್ಟಾಗಿದ್ದ ರೂಪ
ಈ ಪೋಸ್ಟ್ಗಳ ಮೂಲಕ ತಮ್ಮನ್ನು 'ಮಾನಸಿಕ ಅಸ್ವಸ್ಥೆ' ಎನ್ನುವಂತೆ ಬಿಂಬಿಸಲು ರೋಹಿಣಿ ಪ್ರಯತ್ನಿಸಿದ್ದಾರೆ. ಇದರಿಂದಾಗಿ ಸರ್ಕಾರವು ತಮಗೆ ಹಲವು ತಿಂಗಳುಗಳಿಂದ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿದೆ ಮತ್ತು ತಮ್ಮ ಕುಟುಂಬದ ಸದಸ್ಯರಿಗೆ ತೀವ್ರ ಮಾನಸಿಕ ನೋವು ಉಂಟಾಗಿದೆ ಎಂದು ಡಿ. ರೂಪಾ ನ್ಯಾಯಾಲಯದ ಮೊರೆ ಹೋಗಿದ್ದರು. ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಇದರ ವಿಚಾರಣೆ ನಡೆಯುತ್ತಿದ್ದ ಹಂತದಲ್ಲಿಯೇ, ವಿಚಾರಣೆಯನ್ನು ರದ್ದುಗೊಳಿಸುವಂತೆ ರೋಹಿಣಿ ಸಿಂಧೂರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಉಭಯ ಪಕ್ಷಗಳ ವಾದ-ಪ್ರತಿವಾದಗಳನ್ನು ಆಲಿಸಿದ್ದ ಹೈಕೋರ್ಟ್ ಶನಿವಾರ ತನ್ನ ತೀರ್ಪು ನೀಡಿದೆ.
2023ರ ಫೆಬ್ರವರಿ 19 ರಂದು ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆ ನೀಡಿದ್ದರು. ನಂತರ ಅದನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದಾರೆ. ಈ ಹೇಳಿಕೆಯನ್ನು 1.8 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ರೋಹಿಣಿ ಸಿಂಧೂರಿ ಅವರ ಅವಹೇಳನಕಾರಿ ಹೇಳಿಕೆ ನಂತರ ತಮ್ಮ ವರ್ಗಾವಣೆ ಆಗಿದೆ. 6 ತಿಂಗಳವರೆಗೆ ಸಂಬಳ ನೀಡದೇ ಹುದ್ದೆ ಇಲ್ಲದೇ ವರ್ಗಾಯಿಸಿದ್ದರು. ಹೇಳಿಕೆಯಿಂದ, ತಂಗಿ, ಪತಿ, ಮಕ್ಕಳಿಗೂ ಮಾನಸಿಕ ಯಾತನೆ ಆಗಿತ್ತ. ಈ ಎಲ್ಲಾ ಈ ಕಾರಣ ನೀಡಿ ಡಿ.ರೂಪಾ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.


