ಕೊಡಗಿನ ನಾಪೋಕ್ಲುವಿನಲ್ಲಿ 'ಹಿಂದೂ ಸಂಗಮ'ದ ಪ್ರಚಾರ ಮಾಡುತ್ತಿದ್ದ ಗೌತಮ್ ಎಂಬ ಯುವಕನ ಮೇಲೆ ಅನ್ಯಕೋಮಿನ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ ಭಾಗಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಕಾಂಗ್ರೆಸ್ ಮುಖಂಡನ ಪುತ್ರನಿಂದಲೇ ಹಲ್ಲೆ?

ಕೊಡಗು (ಫೆ.27): ಶಿವಮೊಗ್ಗದಲ್ಲಿ ಅಪ್ರಾಪ್ತ ಹಿಂದೂ ಯುವಕನ ಬರ್ಬರ ಕೊಂದ ಘಟನೆ ಬೆನ್ನಲ್ಲೇ ಇದೀಗ ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಾಳೆ ನಡೆಯಲಿರುವ 'ಹಿಂದೂ ಸಂಗಮ' ಕಾರ್ಯಕ್ರಮದ ಕುರಿತು ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಬಲ್ಲಮಾವಟಿಯ ಯುವಕ ಗೌತಮ್ ಎಂಬುವವರ ಮೇಲೆ ಅನ್ಯಕೋಮಿನ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಪ್ರಚಾರದ ವಿಚಾರವಾಗಿ ಶುರುವಾದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಕೊನೆಗೆ ಮಾರಣಾಂತಿಕವಾಗಿ ಹಿಂದು ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಗೌತಮ್‌ನ ಕೂಡಲೇ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಹಲ್ಲೆಯಲ್ಲಿ ಕಾಂಗ್ರೆಸ್ ಮುಖಂಡನ ಪುತ್ರನ ಭಾಗಿ?

ಈ ಹಲ್ಲೆ ಪ್ರಕರಣದಲ್ಲಿ ನಾಪೋಕ್ಲು ಭಾಗದ ಪ್ರಭಾವಿ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ ಭಾಗಿಯಾಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಕೆರಳಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮತ್ತು ಮುಖಂಡರು ನಾಪೋಕ್ಲು ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹಲ್ಲೆ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಸಾವಿರಾರು ಕಾರ್ಯಕರ್ತರು ನಾಪೋಕ್ಲು ಪೊಲೀಸ್ ಠಾಣೆಯ ಮುಂಭಾಗ ಜಮಾಯಿಸಿ ಧರಣಿ ಕುಳಿತಿದ್ದಾರೆ.

ಸ್ಥಳಕ್ಕೆ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಭೇಟಿ

ಘಟನೆಯ ಗಂಭೀರತೆಯನ್ನು ಅರಿತ ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಅವರು ತಕ್ಷಣವೇ ನಾಪೋಕ್ಲು ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಪ್ರತಿಭಟನಾ ನಿರತ ಕಾರ್ಯಕರ್ತರನ್ನು ಭೇಟಿ ಮಾಡಿ ಮಾಹಿತಿ ಪಡೆದ ಅವರು, ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಪೊಲೀಸ್ ವಶದಲ್ಲಿ ಆರೋಪಿಗಳು: ನ್ಯಾಯಕ್ಕಾಗಿ ಆಗ್ರಹ

ಪ್ರಾಥಮಿಕ ಮಾಹಿತಿಯ ಪ್ರಕಾರ, ಪೊಲೀಸರು ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ ವಶಕ್ಕೆ ಪಡೆಯಲಾಗಿದೆ. ಹಲ್ಲೆ ನಡೆಸಿದ ಎಲ್ಲಾ ಆರೋಪಿಗಳನ್ನು ಬಂಧಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಹಿಂದೂ ಮುಖಂಡರು ಪಟ್ಟು ಹಿಡಿದಿದ್ದಾರೆ.

YouTube video player