ಪ್ರತಿಯೊಬ್ಬರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಗೃಹ ಆರೋಗ್ಯ ಯೋಜನೆ’ಯನ್ನು ಕೋಲಾರದಲ್ಲಿ ಪ್ರಯೋಗಿಕವಾಗಿ ಅನುಷ್ಠಾನಗೊಳಿಸಿ ಯಶಸ್ವಿಯಾಗಿದೆ.

ಪುತ್ತೂರು (ಡಿ.22): ಪ್ರತಿಯೊಬ್ಬರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಗೃಹ ಆರೋಗ್ಯ ಯೋಜನೆ’ಯನ್ನು ಕೋಲಾರದಲ್ಲಿ ಪ್ರಯೋಗಿಕವಾಗಿ ಅನುಷ್ಠಾನಗೊಳಿಸಿ ಯಶಸ್ವಿಯಾಗಿದೆ. ಮುಂದಿನ ಫೆಬ್ರವರಿ ತಿಂಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು. ಈ ಯೋಜನೆಯಡಿ ಮನೆ ಮನೆಗೆ ತೆರಳಿ ಬಿಪಿ, ಶುಗರ್ ಹಾಗೂ ಮಾನೋವ್ಯಾಧಿಗಳ ಬಗ್ಗೆ ತಪಾಸಣೆ ನಡೆಸಿ ಔಷಧಿ ವಿತರಣೆ ಮಾಡಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

Add Asianetnews Kannada as a Preferred SourcegooglePreferred

ಅವರು ಪುತ್ತೂರು ಸರ್ಕಾರಿ ಆಸ್ಪತ್ರೆಯ ಬಿ.ಪಿ.ಎಚ್ ಲ್ಯಾಬ್ ಕಟ್ಟಡ ಹಾಗೂ ಇತರ ಕಾಮಗಾರಿಗಳಿಗೆ ಮತ್ತು ಪುತ್ತೂರು ತಾಲೂಕಿನ ಹಿರೇಬಂಡಾಡಿ, ಬಡಗನ್ನೂರು, ಕರ್ನೂರು, ಕೆಮ್ಮಿಂಜೆ ಆರೋಗ್ಯ ಉಪಕೇಂದ್ರಗಳ ಕಟ್ಟಡ ಕಾಮಗಾರಿಗಳಿಗೆ ಶನಿವಾರ ಶಿಲಾನ್ಯಾಸ ನೆರವೇರಿಸಿ ನಗರದ ಪುರಭವನದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಅಶೋಕ್‌ ಕುಮಾರ್ ರೈ ಮಾತನಾಡಿ, ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಇಷ್ಟೊಂದು ದೊಡ್ಡ ಮೊತ್ತ ಬಂದಿರುವುದು ಇಲ್ಲಿನ ಇತಿಹಾಸದಲ್ಲೇ ಪ್ರಥಮ. ಪುತ್ತೂರಿನ ಅಭಿವೃದ್ಧಿ ಹಾಗೂ ಯುವಜನತೆಯ ಕೈಗೆ ಉದ್ಯೋಗ ನೀಡುವುದು ನಮ್ಮ ಕಲ್ಪನೆಯಾಗಿದೆ ಎಂದರು.

ಬಿಜೆಪಿಯವರಿಗೆ ಮಾನ ಮರ್ಯಾದೇ ಏನೂ ಇಲ್ಲವೇ: ಶಾಸಕ ಪ್ರದೀಪ್ ಈಶ್ವರ್ ಆಕ್ರೋಶ

ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ, ಮಂಗಳೂರು ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಜಿಲ್ಲಾ ಕುಷ್ಟರೋಗ ನಿಯಂತ್ರಣ ಅಧಿಕಾರಿ ಡಾ. ಸುದರ್ಶನ್ ಸಿ.ಎಂ., ಪುತ್ತೂರು ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಆಶಾಜ್ಯೋತಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿಂಧ್ಯಾ ನಾಯಕ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ಸ್ವಾಗತಿಸಿದರು. ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ವಂದಿಸಿದರು. ಶಿಕ್ಷಕ ಆದಿತ್ಯ ಹೆಬ್ಬಾರ್ ನಿರೂಪಿಸಿದರು.

ಆಹಾರ ಸುರಕ್ಷತೆ, ಔಷಧ ನಿಯಂತ್ರಣ ಇಲಾಖೆಗಳು ವಿಲೀನ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ವಿಲೀನಗೊಳಿಸಿ ‘ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ’ (ಎಫ್‌ಡಿಎ) ಎಂದು ಪದನಾಮೀಕರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಬಳ್ಳಾರಿ ಬಾಣಂತಿಯರ ಸರಣಿ ಸಾವಿನ ಪ್ರಕರಣ ಬಳಿಕ ಇಲಾಖೆ ಈ ನಿರ್ಧಾರ ತೆಗೆದುಕೊಂಡಿದೆ. ಈ ಎರಡೂ ಇಲಾಖೆಗಳ ಕಾರ್ಯವೈಖರಿಗಳು ಬಹುತೇಕ ಒಂದೇ ರೀತಿಯಲ್ಲಿವೆ. ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಆಹಾರ ಮತ್ತು ಔಷಧಿಗಳು ಲಭ್ಯವಾಗುವಂತೆ ಮಾಡುವುದು ಈ ಇಲಾಖೆಗಳ ಕೆಲಸ. ವಿಲೀನದಿಂದ ಜನರಿಗೆ ಪರಿಣಾಮಕಾರಿ ಗುಣಾತ್ಮಕ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗುತ್ತದೆ. 

ಈಶ ಫೌಂಡೇಶನ್ ಮೈದಾನದಲ್ಲಿ ಗ್ರಾಮೋತ್ಸವದಲ್ಲಿ ಪಾಲ್ಗೊಂಡ ನಟಿ ಶ್ರೀನಿಧಿ ಶೆಟ್ಟಿ

ಈಗಾಗಲೇ ಮಹಾರಾಷ್ಟ್ರ, ತಮಿಳುನಾಡು ಸೇರಿ ವಿವಿಧ ರಾಜ್ಯಗಳಲ್ಲಿ ಈ ಎರಡು ಇಲಾಖೆಗಳು ಒಂದೇ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿವೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರನ್ನು ಹೊಸದಾಗಿ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ (ಎಫ್‌ಡಿಎ) ಇಲಾಖೆ ಆಯುಕ್ತರಾಗಿ ನೇಮಿಸಿ ಆದೇಶಿಸಲಾಗಿದೆ. ಇವರ ಆಡಳಿತಾತ್ಮಕ ನಿಯಂತ್ರಣದಲ್ಲಿ ಎರಡು ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ, ಔಷಧಿ ಹಾಗೂ ಆಹಾರ ಗುಣಮಟ್ಟ ಮತ್ತು ಸುರಕ್ಷತೆಗಾಗಿ ಎರಡು ಇಲಾಖೆಗಳನ್ನು ವಿಲೀನಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.