ಧಾರವಾಡದಲ್ಲಿ ಚಿಗರಿ ಬಸ್ ಮತ್ತೊಂದು ಅಪಘಾತಕ್ಕೆ ಈಡಾಗಿದೆ. ಬ್ರೇಕ್ ವೈಫಲ್ಯದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ. ದುರಸ್ತಿ ಮತ್ತು ನಿರ್ವಹಣೆಯ ಕೊರತೆಯಿಂದಾಗಿ ಅಪಘಾತಗಳು ಹೆಚ್ಚುತ್ತಿವೆ ಎಂಬ ಆರೋಪ ಕೇಳಿಬಂದಿದೆ.

ಧಾರವಾಡ (ಆ.10): ಹುಬ್ಬಳ್ಳಿ-ಧಾರವಾಡ ನಡುವೆ ಸಂಚರಿಸುವ ಬಿಆರ್‌ಟಿಎಸ್‌ನ ಚಿಗರಿ ಬಸ್ ಮತ್ತೊಂದು ಅಪಘಾತಕ್ಕೆ ಈಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ನೇರವಾಗಿ ರಸ್ತೆ ಬದಿಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ದೊಡ್ಡ ದುರಂತ ತಪ್ಪಿದಂತಾಗಿದೆ.

Add Asianetnews Kannada as a Preferred SourcegooglePreferred

ಘಟನೆಯು ಧಾರವಾಡದ ಜೆಎಸ್‌ಎಸ್ ಕಾಲೇಜು ಮುಂಭಾಗ ನಡೆದಿದೆ. ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಬಸ್‌ನ ಬ್ರೇಕ್ ಕಟ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬಸ್ ವೇಗವಾಗಿ ಕಾಂಪೌಂಡ್‌ಗೆ ನುಗ್ಗಿದ ಪರಿಣಾಮ ಕಾಂಪೌಂಡ್ ಗೋಡೆ ಜಖಂ ಆಗಿದೆ. ಘಟನಾ ಸ್ಥಳಕ್ಕೆ ತಕ್ಷಣವೇ ಧಾರವಾಡ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ?

ಕಳೆದ ಕೆಲವು ತಿಂಗಳಿಂದ ಚಿಗರಿ ಬಸ್‌ಗಳ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಸರಿಯಾದ ಸಮಯಕ್ಕೆ ಬಸ್‌ಗಳ ದುರಸ್ತಿ ಮತ್ತು ನಿರ್ವಹಣೆ ಮಾಡದೇ ಇರುವುದು ಇಂತಹ ಅಪಘಾತಗಳಿಗೆ ಮುಖ್ಯ ಕಾರಣ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಬ್ರೇಕ್ ವೈಫಲ್ಯ ಮತ್ತು ಇತರ ತಾಂತ್ರಿಕ ದೋಷಗಳಿಂದಾಗಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿರುವುದರಿಂದ ಚಾಲಕರು ಕೂಡ ಭಯದಿಂದ ವಾಹನ ಚಲಾಯಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಕುರಿತು ಗಮನ ಹರಿಸಿ, ಬಸ್‌ಗಳ ತಾಂತ್ರಿಕ ಗುಣಮಟ್ಟವನ್ನು ಸುಧಾರಿಸಬೇಕು ಮತ್ತು ಸಮರ್ಪಕ ನಿರ್ವಹಣೆಯನ್ನು ಖಚಿತಪಡಿಸಬೇಕು ಎಂದು ಜನರು ಆಗ್ರಹಿಸಿದ್ದಾರೆ. ಈ ಕುರಿತು ಶೀಘ್ರವೇ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಮತ್ತಷ್ಟು ಅಪಾಯಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.