ಹುಣಸೂರು ಚುನಾವಣೆ - ದಸರಾ ಮೇಲೆ ಪರಿಣಾಮವಿಲ್ಲ: ಡೀಸಿ
ಮೈಸೂರು ದಸರಾ ಮೇಲೆ ಹುಣಸೂರು ಕ್ಷೇತ್ರದ ಉಪ ಚುನಾವಣೆ ಯಾವುದೇ ಪರಿಣಾಮ ಬೀರಲ್ಲ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಮೈಸೂರು [ಸೆ.23]: ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾದ ನೀತಿ ಸಂಹಿತೆಯಿಂದ ನಾಡಹಬ್ಬ ದಸರಾ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸ್ಪಷ್ಟಪಡಿಸಿದ್ದಾರೆ.
ನಾಡಹಬ್ಬ ದಸರಾ ಮಹೋತ್ಸವ ನಡೆಯುತ್ತಿರುವುದರಿಂದ ನೀತಿ ಸಂಹಿತೆಯಿಂದ ವಿನಾಯಿತಿ ನೀಡುವಂತೆ ಚುನಾವಣಾ ಆಯೋಗವನ್ನು ಕೋರಿದ್ದರು. ಈ ಬಗ್ಗೆ ಸ್ಪಷ್ಟಪಡಿಸಿರುವ ಚುನಾವಣಾ ಆಯೋಗ ನೀತಿ ಸಂಹಿತೆ ಚುನಾವಣೆ ನಡೆಯುತ್ತಿರುವ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಅನ್ವಯಿಸುತ್ತದೆಯೇ ಹೊರತು, ಇಡೀ ಜಿಲ್ಲೆಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಈ ಹಿನ್ನೆಲೆಯಲ್ಲಿ ನೀತಿ ಸಂಹಿತೆಯಿಂದ ದಸರಾ ಮೇಲೆ ಯಾವುದೇ ಕರಿನೆರಳು ಬೀಳುವುದಿಲ್ಲ. ಎಂದಿನಂತೆ ಕಾರ್ಯಕ್ರಮಗಳು ಜನಪ್ರತಿನಿಧಿಯೊಡನೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಆದರೆ, ಗ್ರಾಮೀಣ ದಸರಾ ವೇಳೆ ಹುಣಸೂರು ಕ್ಷೇತ್ರದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.