ಪೌರತ್ವ ತಿದ್ದುಪಡಿ ಕಾಯ್ದೆ: ಗ್ರೂಪ್ ಆಡ್ಮಿನ್ಗಳೇ ಎಚ್ಚರ..!
ಮಂಗಳೂರಿನಲ್ಲಿ ಕರ್ಫ್ಯೂ ಹೇರಲಾಗಿದ್ದು,ನಿಷೇಧಾಜ್ಞೆ ಮುಂದುವರಿದಿದೆ. ಸಾಮಾಜಿಕ ಜಾಲತಾಣಗಳ ಮೇಲೆಯೂ ತೀವ್ರ ನಿಗಾ ಇಡಲಾಗಿದೆ. ಯಾವುದೇ ಗ್ರೂಪ್ಗಳಲ್ಲಿಯೂ ಸುಳ್ಳು ಸುದ್ದಿ, ಪ್ರಚೋದನಾತ್ಮಕ ವಿಚಾರಗಳು ಕಂಡು ಬಂದಲ್ಲಿ ಪೊಲೀಸರು ಗ್ರೂಪ್ ಅಡ್ಮಿನ್ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ.
ಮಂಗಳೂರು(ಡಿ.23): ಪೌರತ್ವ ತಿದ್ದುಪಡಿ ಕಾಯ್ದೆ ಕುರಿತಂತೆ ಸಾಮಾಜಿಕ ಜಾಲತಾಲದಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ.ಪಿ. ಎಸ್. ಹರ್ಷ ಎಚ್ಚರಿಕೆ ನೀಡಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆಗೆ ವಿರುದ್ಧವಾಗಿ ನಡೆದ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶ ಕಳುಹಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಕೆಲವರು ಹೊರದೇಶದಿಂದ, ದೇಶದ ಇತರ ಭಾಗಗಳಿಂದ ಹಾಗೂ ನಗರದಲ್ಲಿ ಕೂಡ ಈ ಮಸೂದೆಯ ವಿರುದ್ಧ ಧ್ವನಿ ಎತ್ತಲು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚೋದನಕಾರಿ ಸಂದೇಶಗಳನ್ನು ರವಾನಿಸುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಚಟುವಟಿಕೆಗಳನ್ನು ಪೊಲೀಸ್ ಇಲಾಖೆ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
'ಮಂಗ್ಳೂರು ಗೋಲಿಬಾರ್ ಹಿಂದಿನ ದಿನ ಕಲ್ಲಡ್ಕ ಪ್ರಭಾಕರ್ ಭಟ್ ಮನೆಯಲ್ಲಿ ಪೊಲೀಸ್ರು'
ಸಾಮಾಜಿಕ ಜಾಲತಾಣಗಳ ಮೂಲಕ ಕೋಮು ದ್ವೇಷವನ್ನು ಹರಡುವುದರ ವಿರುದ್ಧ ಪೊಲೀಸ್ ನೋಟಿಸ್ ಜಾರಿಗೊಳಿಸಲಾಗಿದೆ. ಹೀಗಾಗಿ ವಾಟ್ಸಾಪ್, ಟೆಲಿಗ್ರಾಂ , ಫೇಸ್ಬುಕ್ ಮುಂತಾದ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೂಕ್ಷ್ಮ ಸಂದೇಶಗಳನ್ನು ಹರಡಿದರೆ ಅಂತಹ ಗ್ರೂಪ್ ಅಡ್ಮಿನ್ಗಳ ವಿರುದ್ಧ ಎಫ್ಐಆರ್ ದಾಖಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು: ಗುಂಡೇಟಿಗೆ ಬಲಿಯಾದ ಇಬ್ಬರ ಕುಟುಂಬಸ್ಥರಿಗೆ ಸಿಎಂ ಪರಿಹಾರ ಘೋಷಣೆ
ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಸಂದೇಶಗಳು ಕೆಲವು ಮೊಬೈಲ್ ಸಂಖ್ಯೆಯಿಂದ ಹರಿದಾಡುತ್ತಿರುವುದು ಕಂಡುಬಂದಿರುತ್ತದೆ. ಇಂತಹ ಸಂದೇಶಗಳ ಮೇಲೆ ಪೊಲೀಸ್ ಇಲಾಖೆಯು ತೀವ್ರ ನಿಗಾ ವಹಿಸಿರುತ್ತದೆ. ನೀವು ಇಂತಹ ಸಂದೇಶಗಳನ್ನು ರವಾನಿಸಿದಲ್ಲಿ ಕಲಂ 153(ಎ), 295 ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಗ್ರೂಪ್ ಅಡ್ಮಿನ್ಗಳನ್ನು ನೇರವಾಗಿ ಹೊಣೆಗಾರಿಕೆ ಮಾಡಿ ಅವರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.