ಬಿಡುಗಡೆಗೆ ವಾರ ಇರುವಾಗ ಶಶಿಕಲಾಗೆ ತೀವ್ರ ಅನಾರೋಗ್ಯ : ಆಸ್ಪತ್ರೆಗೆ!
ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಪರಮಾಪ್ತೆ ಶಶಿಕಲಾ ಬಿಡುಗಡೆಗೆ ಒಂದು ವಾರ ಇರುವಾಗಲೇ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರು (ಜ.21): ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಬುಧವಾರ ದಿಢೀರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ದಿನಗಳಿಂದ ಜ್ವರ ಮತ್ತು ಕಫದಿಂದ ಬಳಲುತ್ತಿದ್ದ ಶಶಿಕಲಾ ಅವರಿಗೆ ಬೆನ್ನುನೋವು ಹೆಚ್ಚಾಗಿತ್ತು. ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ ಜ್ವರ ಕಡಿಮೆಯಾಗಿರಲಿಲ್ಲ. ಜ್ವರ ಹೆಚ್ಚಾದ ಹಿನ್ನೆಲೆಯಲ್ಲಿ ಬುಧವಾರ ಸಂಜೆ ಐದು ಗಂಟೆ ಸುಮಾರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಉಸಿರಾಟದ ಸಮಸ್ಯೆ ಕೂಡ ಕಾಣಿಸಿಕೊಂಡಿತ್ತು. ಹೀಗಾಗಿ ಆಕ್ಸಿಜನ್ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರು ಜೈಲಿಂದ ಜ.27ರಂದು ಶಶಿಕಲಾ ಬಿಡುಗಡೆ: ವಕೀಲ ...
ಶಶಿಕಲಾ ಅವರಿಗೆ ಉಸಿರಾಟದ ಸಮಸ್ಯೆ ಇರುವುದರಿಂದ ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಆ್ಯಂಟಿಜೆನ್ ವರದಿ ನೆಗೆಟಿವ್ ಬಂದಿದೆ. ಆರ್ಟಿಪಿಸಿಆರ್ ವರದಿಗಾಗಿ ಕಾಯಲಾಗುತ್ತಿದೆ. ವರದಿ ಬಂದ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು. ಶಶಿಕಲಾ ಅವರಿಗೆ ಆಕ್ಸಿಜನ್ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಬೌರಿಂಗ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಜ.27ರಂದು ಜೈಲಿನಿಂದ ಬಿಡುಗಡೆಯಾಗಲಿರುವ ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರದಿಂದ ತಮಿಳುನಾಡಿನ ಚೆನ್ನೈವರೆಗೂ ಅದ್ಧೂರಿ ಮೆರವಣಿಗೆಗೆ ಸಿದ್ಧತೆ ನಡೆಸಲಾಗಿದ್ದು, ಲಕ್ಷಾಂತರ ಮಂದಿ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಈ ನಡುವೆ ‘ಚಿನ್ನಮ್ಮನ’ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿರುವುದು ಅವರ ಅಭಿಮಾನಿಗಳು ಮತ್ತು ಪಕ್ಷದ ಮುಖಂಡರಲ್ಲಿ ಆತಂಕ ಉಂಟುಮಾಡಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ 2017ರಲ್ಲಿ ಶಶಿಕಲಾ ನಟರಾಜನ್ ಮತ್ತು ಅವರ ಆಪ್ತೆ ಇಳವರಸಿ ಸೇರಿ ನಾಲ್ವರಿಗೆ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ, 10 ಕೋಟಿ ರು. ದಂಡ ವಿಧಿಸಿತ್ತು.