4 ವರ್ಷದ ಬಳಿಕ ಶಶಿಕಲಾ ‘ಜೈಲಿಂದ’ ರಿಲೀಸ್
ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಪರಮಾಪ್ತೆ ಶಶಿಕಲಾ ನಟರಾಜನ್ ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಬೆಂಗಳೂರು(ಜ.27): ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪದ ಮೇಲೆ ಬಂಧಿತರಾಗಿ ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಆಪ್ತೆ ವಿ.ಕೆ. ಶಶಿಕಲಾ ನಟರಾಜನ್ ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಶಶಿಕಲಾ ಜತೆ ಅವರ ಆಪ್ತೆ ಇಳವರಸಿ ಹಾಗೂ ಸೋದರ ಸಂಬಂಧಿ ಸುಧಾಕರನ್ ಕೂಡ ಬಿಡುಗಡೆಯಾಗಲಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಕೊರೋನಾ ಸೋಂಕಿಗೆ ಒಳಗಾಗಿರುವ ಶಶಿಕಲಾ ಬೆಂಗಳೂರಿನ ವಿಕ್ಟೋರಿಯಾ ಆಸ್ಪತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಎಂದಿನಂತೆ ಊಟ ಸೇವನೆ ಮಾಡುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ನ್ಯಾಯಾಲಯದ ಆದೇಶದನ್ವಯ ಶಶಿಕಲಾ ಜ.27ರಂದು ಬಿಡುಗಡೆಯಾಗಲಿದ್ದಾರೆ. ಆಸ್ಪತ್ರೆಯಲ್ಲಿದ್ದರೂ ಜೈಲು ಸಿಬ್ಬಂದಿ ಬಿಡುಗಡೆ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ. ಜೈಲು ಸಿಬ್ಬಂದಿಯೇ ಆಸ್ಪತ್ರೆಗೆ ಭೇಟಿ ನೀಡಿ ಶಶಿಕಲಾ ಬಿಡುಗಡೆ ಪ್ರಕ್ರಿಯೆ ಪೂರ್ಣಗೊಳಿಸಲಿದ್ದಾರೆ. ಬಳಿಕ ಅಗತ್ಯ ಬಿದ್ದರೆ ಸ್ಥಳೀಯ ಪೊಲೀಸರು ಭದ್ರತೆ ಒದಗಿಸಲಿದ್ದಾರೆ ಎಂದು ಹಿರಿಯ ಜೈಲು ಅಧಿಕಾರಿಯೊಬ್ಬರು ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿದರು.
ಜ್ವರ ಮತ್ತು ಕಫದಿಂದ ಬಳಲುತ್ತಿದ್ದ ಶಶಿಕಲಾ ಅವರನ್ನು ಜ.20ರಂದು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ನಡುವೆ ಅವರಿಗೆ ಕೊರೋನಾ ಇರುವುದು ದೃಢಪಟ್ಟಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
10 ಕೋಟಿ ರು.ಪಾವತಿಸಿದ ಶಶಿಕಲಾ : ತಿಂಗಳ ಮೊದಲೇ ರಿಲೀಸ್..? ..
ಪೊಲೀಸ್ ಸರ್ಪಗಾವಲು: ಜೈಲಿನಿಂದ ಶಶಿಕಲಾ ಬಿಡುಗಡೆಯಾಗಲಿರುವ ಹಿನ್ನೆಲೆಯಲ್ಲಿ ತಮಿಳುನಾಡಿನಿಂದ ಅವರ ಅಪಾರ ಅಭಿಮಾನಿಗಳು ಬೆಂಗಳೂರಿಗೆ ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆ ಬಳಿ 20ಕ್ಕೂ ಹೆಚ್ಚಿನ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಬಿಡುಗಡೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಹೆಚ್ಚಿನ ಭದ್ರತೆ ಕಲ್ಪಿಸಲಾಗುವುದು ಎಂದು ವಿವಿಪುರಂ ಪೊಲೀಸರು ತಿಳಿಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ 2017ರಲ್ಲಿ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ, ಶಶಿಕಲಾ ನಟರಾಜನ್ ಮತ್ತು ಅವರ ಆಪ್ತೆ ಇಳವರಸಿ ಸೇರಿ ನಾಲ್ವರಿಗೆ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ, . 10 ಕೋಟಿ ದಂಡ ವಿಧಿಸಿತ್ತು. ನ್ಯಾಯಾಲಯದ ಆದೇಶದ ಅನ್ವಯ ಜ.27ಕ್ಕೆ ಅವರ ಶಿಕ್ಷೆ ಪೂರ್ಣಗೊಳ್ಳಲಿದೆ.