ನಮ್ಮ ಸಮಾಜದ ನಾಯಕರನ್ನು ಷಡ್ಯಂತ್ರದ ಮೂಲಕ ರಾಜಕೀಯವಾಗಿ ಹತ್ತಿಕ್ಕಲಾಗುತ್ತಿದೆ. ಬಿಜೆಪಿ ವರಿಷ್ಠರ ಮೌನ ನಡೆ, ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಹೀಗೆ, ನಿರ್ಲಕ್ಷ್ಯ ವಹಿಸಿದರೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ 

ಬೆಳಗಾವಿ(ಜ.03): ಪಂಚಮಸಾಲಿ ಮೀಸಲಾತಿ ಹೋರಾಟದ ಮುಂಚೂಣಿ ನಾಯಕರನ್ನು ಷಡ್ಯಂತ್ರದ ಮೂಲಕ ರಾಜಕೀಯವಾಗಿ ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಬಿಜೆಪಿಯಲ್ಲಿ ಕುತಂತ್ರಿಗಳ ಮಾತು ಕೇಳಿ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ ಯತ್ನಾಳ ಅವರನ್ನು ರಾಜಕೀಯವಾಗಿ ಹತ್ತಿಕ್ಕಲಾಗುತ್ತಿದೆ ಎಂದು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿಕಾರಿದರು.

Add Asianetnews Kannada as a Preferred SourcegooglePreferred

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದ ನಾಯಕರನ್ನು ಷಡ್ಯಂತ್ರದ ಮೂಲಕ ರಾಜಕೀಯವಾಗಿ ಹತ್ತಿಕ್ಕಲಾಗುತ್ತಿದೆ. ಬಿಜೆಪಿ ವರಿಷ್ಠರ ಮೌನ ನಡೆ, ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಹೀಗೆ, ನಿರ್ಲಕ್ಷ್ಯ ವಹಿಸಿದರೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮೀಸಲಾತಿಗಾಗಿ ಮತ್ತೆ ಹೋರಾಟಕ್ಕೆ ಅಣಿಯಾದ ಪಂಚಮಸಾಲಿ ಸಮಾಜ..!

ಬಿಜೆಪಿ ಪಕ್ಷವನ್ನು ಕಟ್ಟಿರುವರಲ್ಲಿ ಬಸನಗೌಡ ಪಾಟೀಲ ಯತ್ನಾಳ ಕೂಡ ಒಬ್ಬರು. ಹಿಂದೆ ಕೇಂದ್ರದಲ್ಲಿ ಸಚಿವರಾಗಿದ್ದವರು. ಆದರೆ, ಬಿಜೆಪಿಯಲ್ಲಿ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬ ಭಾವನೆ ನಮ್ಮ ಸಮಾಜದಲ್ಲಿ ಮೂಡಿದೆ.ಯತ್ನಾಳ ಅವರು ನೋವಿನಿಂದ ಹೇಳಿಕೆ ನೀಡಿದ್ದಾರೆ. ಅದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅ‍ವರು ಕೂಡಲೇ, ಯತ್ನಾಳ ಅವರೊಂದಿಗೆ ಮಾತುಕತೆ ನಡೆಸಿ, ಅನ್ಯಾಯವನ್ನು ಸರಿಪಡಿಸಬೇಕು. ಈ ಸಂಬಂಧ ಅಗತ್ಯ ಬಿದ್ದರೆ ನಡ್ಡಾ ಅವರ ಬಳಿಗೆ ಸಮಾಜದ ನಿಯೋಗವೊಂದನ್ನು ಕಳುಹಿಸಲಾಗುವುದು ಎಂದರು.

ನಮ್ಮ ಸಮಾಜದ ಸಾಮಾನ್ಯಕಾರ್ಯಕರ್ತರಿಂದ ಹಿಡಿದು ನಾಯಕರಿಗೆ ಅನ್ಯಾಯವಾದ ವೇಳೆ ಅವರ ಬೆಂಬಲಕ್ಕೆ ನಾವು ನಿಲ್ಲುತ್ತೇವೆ. ಬಿಜೆಪಿಯಲ್ಲಿ ಕುತಂತ್ರಿಗಳ ಮಾತು ಕೇಳಿ, ಯತ್ನಾಳ ಅವರನ್ನು ಪಕ್ಷದಿಂದ ಉಚ್ಛಾಟಿಸಿದರೆ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆ. ಯತ್ನಾಳ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡಿರುವುದು ತಪ್ಪೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ಸರ್ಕಾರದಲ್ಲಿಯೂ ನಮ್ಮ ಹೋರಾಟದ ಮುಂಚೂಣಿ ನಾಯಕರಿಗೆ ಸಚಿವ ಸ್ಥಾನ ಸಿಗದಿರುವುದರಿಂದ ನಮಗೆ ನೋವಾಗಿದೆ. ಅವರ ಬೆಳವಣಿಗೆಗೆ ಶಕ್ತಿ ತುಂಬುವ ಕೆಲಸವನ್ನು ನಾವು ಮಾಡುತ್ತೇವೆ ಎಂದರು. ಗೋಷ್ಠಿಯಲ್ಲಿ ಪಂಚಮಸಾಲಿ ಸಮಾಜದ ಮುಖಂಡರಾದ ಮಲ್ಲಿಕಾರ್ಜುನ ಅಕ್ಕರೆ, ಆರ್.ಕೆ.ಪಾಟೀಲ, ರುದ್ರಗೌಡ ಪಾಟೀಲ, ಅಡಿವೇಶ ಇಟಗಿ, ಗುಂಡು ಪಾಟೀಲ ಮೊದಲಾದವರು ಇದ್ದರು.