ಮುಖ್ಯಮಂತ್ರಿಗಳು 2ಎ ಮೀಸಲಾತಿ ಕೊಡುವ ಭರವಸೆ ನೀಡಿದ್ದರಿಂದ ಉಪವಾಸ ಸತ್ಯಾಗ್ರಹ ಹಿಂಪಡೆದಿದ್ದೇವೆ| ಡಿ.23ರವರೆಗೆ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲವಾದಲ್ಲಿ ಮುಂದಿನ ರೂಪುರೇಷೆ ತಯಾರಿ ಮಾಡಿಕೊಳ್ಳುತ್ತೇವೆ: ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ| 

ಇಂಡಿ(ಡಿ.05): ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ 2ಎ ಮೀಸಲಾತಿ ನೀಡುವುದರ ಜೊತೆಗೆ ಲಿಂಗಾಯತ 72 ಉಪಪಂಗಡಗಳನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸಬೇಕು. ನಮ್ಮ ಈ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿ.23ರಿಂದ ಬೆಂಗಳೂರು ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

ಪಟ್ಟಣದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಶ್ರೀಗಳು ಮಾತನಾಡಿದರು. ಈ ಕುರಿತು ಆ.28ರಂದು ಬೆಳಗಾವಿಯ ಸುವರ್ಣಸೌಧದ ಮುಂದೆ ನಮ್ಮ ನೇತೃತ್ವದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಅಂದು ಮುಖ್ಯಮಂತ್ರಿಗಳು 2ಎ ಮೀಸಲಾತಿ ಕೊಡುವ ಭರವಸೆ ನೀಡಿದ್ದರಿಂದ ಉಪವಾಸ ಸತ್ಯಾಗ್ರಹ ಹಿಂಪಡೆದಿದ್ದೇವೆ. ಡಿ.23ರವರೆಗೆ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲವಾದಲ್ಲಿ ಮುಂದಿನ ರೂಪುರೇಷೆ ತಯಾರಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದೇವೆ. ಇದುವರೆಗೂ ನಮ್ಮ ಬೇಡಿಕೆ ಈಡೇರಿಲ್ಲ. ಹೀಗಾಗಿ ಡಿ.6ರಂದು ವಿಜಯಪುರದ ನಾಗೂರ ಕ್ಯಾಂಪಸ್‌ ಆವರಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದ್ದು ಜಿಲ್ಲೆಯ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಸಲಹೆ-ಸೂಚನೆ ನೀಡಬೇಕು ಎಂದು ಹೇಳಿದರು. ಪಂಚಮಸಾಲಿ ಯುವಘಟಕದ ಜಿಲ್ಲಾಧ್ಯಕ್ಷ ಸೋಮಶೇಖರ ದೇವರ, ಪ್ರಭು ಹೊಸಮನಿ, ಶರಣಗೌಡ ಬಂಡಿ, ಉಮೇಶ ಬಳಬಟ್ಟಿ ಅನೇಕರಿದ್ದರು.

ಲಿಂಗಾಯತರ 2 ಬೇಡಿಕೆ ಒಪ್ಪಲು ಡಿ.23ರ ಗಡುವು: ಜಯಮೃತ್ಯಂಜಯ ಸ್ವಾಮೀಜಿ

ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ಕ್ರಮ ಕೈಗೊಳ್ಳಬೇಕು.ಇಲ್ಲವಾದರೆ ಡಿ.23ರಿಂದ ಕೂಡಲಸಂಗಮದಿಂದ ಬೆಂಗಳೂರಿನ ವಿಧಾನಸೌಧದವರೆಗೆ 10 ಲಕ್ಷ ಜನರೊಂದಿಗೆ ಪಾದಯಾತ್ರೆ ನಡೆಸುತ್ತೇವೆ. ಅಲ್ಲಿಯೇ ಆಮರಣ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆ. ನಮ್ಮ ಬೇಡಿಕೆ ಈಡೇರುವವರೆಗೆ ಮಾಡು ಇಲ್ಲವೆ ಮಡಿ ಹೋರಾಟ ಮುಂದುವರಿಸುತ್ತೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ತಿಳಿಸಿದ್ದಾರೆ.