ಬೆಂಗಳೂರು ನಗರ ಜಿಲ್ಲೆಯಲ್ಲಿ ನೋಂದಣಿಯಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸದ ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ತೆಗೆದುಹಾಕಲು ಚುನಾವಣಾ ಆಯೋಗ ನಿರ್ಧರಿಸಿದೆ. ಸೆಪ್ಟೆಂಬರ್ 1, 2025 ರಂದು ವಿಚಾರಣೆ ನಡೆಸಲಾಗುವುದು. ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಸ್ಪರ್ಧಿಸದ ಪಕ್ಷಗಳಿಗೆ ನೋಟಿಸ್ ಜಾರಿ.

ಬೆಂಗಳೂರು (ಆ.16) : ಬೆಂಗಳೂರು ನಗರ ಜಿಲ್ಲೆಯಲ್ಲಿ ನೋಂದಣಿಯಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸದೇ ಇರುವ ರಾಜಕೀಯ ಪಕ್ಷಗಳನ್ನು ನೋಂದಣಿ ಪಟ್ಟಿಯಿಂದ ತೆಗೆದು ಹಾಕಲು ಭಾರತ ಚುನಾವಣಾ ಆಯೋಗ ನಿರ್ಧರಿಸಿದ್ದು, ಈ ಬಗ್ಗೆ ವಿಚಾರಣೆಯನ್ನು ಸೆಪ್ಟೆಂಬರ್ 01, 2025 ರಂದು ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ, ಇವರ ಕಛೇರಿಯಲ್ಲಿ ನಡೆಸಲಾಗುವುದು ಎಂದು ಬೆಂಗಳೂರು ನಗರ ಅಪರ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಜಗದೀಶ.ಜಿ ಅವರು ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾರತ ಚುನಾವಣಾ ಆಯೋಗವು ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಪ್ರಕರಣ 29(ಎ)ರಡಿ ರಾಜಕೀಯ ಪಕ್ಷಗಳು ನೋಂದಣಿ ಮಾಡಿಕೊಂಡಿದ್ದರೂ, ಸಕ್ರಿಯವಾಗಿ ಕಾರ್ಯನಿರ್ವಹಿಸದ ಹಾಗೂ ವಿಳಾಸ ಪತ್ತೆ ಹಚ್ಚಲು ಸಾಧ್ಯವಿಲ್ಲದ ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷವಾದ 'ಪ್ರಜಾ ಪರಿವರ್ತನ ಪಾರ್ಟಿ' ಕಳೆದ 6 ವರ್ಷಗಳಿಂದ ಯಾವುದೇ ಲೋಕಸಭೆ, ವಿಧಾನಸಭೆ ಹಾಗೂ ಉಪ ಚುನಾವಣೆಗಳಲ್ಲಿ ಸ್ಪರ್ಧಿಸದೇ ಇರುವ ಹಿನ್ನಲೆಯಲ್ಲಿ ಪ್ರಜಾ ಪ್ರಾತಿನಿಧ್ಯಕಾಯ್ದೆ 1951ರಡಿಯಲ್ಲಿ ನೋಂದಣಿಯಾದ ರಾಜಕೀಯ ಪಕ್ಷಗಳ ಪಟ್ಟಿಯಿಂದ ತೆಗೆದು ಹಾಕಲು ಮುಖ್ಯ ಚುನಾವಣಾಧಿಕಾರಿ ವಿ.ಅನ್ಬು ಕುಮಾರ್ ಅವರು ಕಾರಣ ಕೇಳುವ ನೋಟಿಸನ್ನು ಜಾರಿಗೊಳಿಸಿರುತ್ತಾರೆ.

ಈ ಪಕ್ಷವನ್ನು ಮಾನ್ಯ ಪಡೆದ ಪಕ್ಷಗಳ ಪಟ್ಟಿಯಿಂದ ತೆಗದು ಹಾಕುವ ಮುನ್ನ ಈ ರಾಜಕೀಯ ಪಕ್ಷಕ್ಕೆ ತಮ್ಮ ಹೇಳಿಕೆ ದಾಖಲಿಸಲು ಒಂದು ಅವಕಾಶವನ್ನು ಕಲ್ಪಿಸಲಾಗಿದೆ. ದಿನಾಂಕ: 01-09-2025 ರಂದು ಪಕ್ಷದ ಅಧ್ಯಕ್ಷರು/ ಪ್ರಧಾನ ಕಾರ್ಯದರ್ಶಿಗಳ ಪ್ರಮಾಣ ಪತ್ರ, ಇತರೆ ದಾಖಲೆಗಳು ಹಾಗೂ ಮನವಿಯೊಂದಿಗೆ ವಿಚಾರಣೆಗೆ ಪಕ್ಷದ ಮುಖ್ಯಸ್ಥರು/ ಅಧ್ಯಕ್ಷರು/ ಪ್ರಧಾನ ಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ.

ಒಂದು ವೇಳೆ ನಿಗದಿತ ಸಮಯದೊಳಗೆ ಪಕ್ಷದಿಂದ ಯಾವುದೇ ಲಿಖಿತ ಮನವಿ ಸ್ವೀಕೃತವಾಗದೇ ಇದ್ದಲ್ಲಿ ಪಕ್ಷದ ಯಾವುದೇ ಹೇಳಿಕೆ ಇರುವುದಿಲ್ಲವೆಂದು ಪರಿಗಣಿಸಿ, ಪಕ್ಷವನ್ನು ಸಂಪರ್ಕಿಸದೇ ಚುನಾವಣಾ ಆಯೋಗದಿಂದ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿ ಜಗದೀಶ.ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.