ಬೆಂಗಳೂರಿನಲ್ಲಿ ಕೊರೋನಾ ಪರಿಸ್ಥಿತಿ ದಿನದಿಂದ ದಿನಕ್ಕೆ  ತೀರಾ ಗಂಭೀರವಾಗುತ್ತಿದೆ. ಇದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಎರಡು ಹೊಸ ಕಾರ್ಯ ತಂಡಗಳನ್ನು ರಚಿಸಿದೆ.

ಬೆಂಗಳೂರು, (ಜೂನ್.28): ಬೆಂಗಳೂರಿನಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದ್ದು, ಪರಿಸ್ಥಿತಿ ದಿನ ಕಳೆದಂತೆ ಕೈಮೀರುತ್ತಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ರಾಜ್ಯ ಸರ್ಕಾರ ಎರಡು ಹೊಸ ಕಾರ್ಯತಂಡಗಳನ್ನು ರಚಿಸಿ ಆದೇಶ ಹೊರಡಿಸಿದೆ.

Add Asianetnews Kannada as a Preferred SourcegooglePreferred

ಕೋವಿಡ್ 19 ರೋಗಿಗಳ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಮತ್ತು ಚಿಕಿತ್ಸೆ ವ್ಯವಸ್ಥೆ ಮಾಡಲು ಎರಡು ಹೊಸ ಕಾರ್ಯತಂಡವನ್ನು ರಚಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಇಂದು (ಭಾನುವಾರ) ಆದೇಶ ಹೊರಡಿಸಿದ್ದಾರೆ.

ಕರ್ನಾಟಕದಲ್ಲಿ ಕೊರೋನಾ ಸ್ಫೋಟ: ಭಾನುವಾರ ಒಂದೇ ದಿನ 1267 ಕೇಸ್

ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್‌ ಕುಮಾರ್ ಮತ್ತು ಬೆಂಗಳೂರು ‌ಜಲಮಂಡಳಿ ಅಧ್ಯಕ್ಷರಾದ ಎನ್.ಜಯರಾಮ್‌ ನೇತೃತ್ವದಲ್ಲಿ ಎರಡು ತಂಡ ರಚನೆ ಮಾಡಲಾಗಿದ್ದು, ಈ ಎರಡು ಕಾರ್ಯ ತಂಡಗಳು ಪ್ರತಿನಿತ್ಯ ಬಿಬಿಎಂಪಿ ಆಯುಕ್ತರಿಗೆ ವರದಿ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವೈದ್ಯಕೀಯ ಸಿಬ್ಬಂದಿ ವ್ಯವಸ್ಥೆ ತಂಡ 1
ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಜೋಡಿಸಲಾದ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಮತ್ತು ಚಿಕಿತ್ಸೆಯ ವ್ಯವಸ್ಥೆ, ಕೋವಿಡ್ ಆರೋಗ್ಯ ಕೇಂದ್ರಗಳಿಗೆ ವೈದ್ಯಕೀಯ/ಅರೇ ವೈದ್ಯಕೀಯ ಸಿಬ್ಬಂದಿ ವ್ಯವಸ್ಥೆ ‌ಮಾಡಲು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್‌ ಕುಮಾರ್ ನೇತೃತ್ವದಲ್ಲಿ ಕಾರ್ಯತಂಡವನ್ನು ರಚಿಸಲಾಗಿದೆ.

ಈ ಕಾರ್ಯ ತಂಡದಲ್ಲಿ ಜಿಕೆವಿಕೆ ಉಪಕುಲಪತಿ ಡಾ.ಸಚ್ಚಿದಾನಂದ, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಗಿರೀಶ್, ಆಯುಷ್ ಇಲಾಖೆ ಆಯಕ್ತರಾದ ಮೀನಾಕ್ಷಿ ನೇಗಿ ಸದಸ್ಯರಾಗಿರಲಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ವ್ಯವಸ್ಥೆಗೆ ಟೀಂ 2
ಇನ್ನು ಎಲ್ಲಾ ಇತರೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ವ್ಯವಸ್ಥೆ ‌ಮಾಡಲು ಬೆಂಗಳೂರು ‌ಜಲಮಂಡಳಿ ಅಧ್ಯಕ್ಷರಾದ ಎನ್.ಜಯರಾಮ್‌ ನೇತೃತ್ವದಲ್ಲಿ ಕಾರ್ಯ ತಂಡವನ್ನು ರಚಿಸಲಾಗಿದೆ. 

ಈ ಕಾರ್ಯತಂಡದಲ್ಲಿ ಬೆಸ್ಕಾಂ ಎಂಡಿ ರಾಜೇಶ್ ಗೌಡ, ಬೆಂ.ನಗರ ಡಿಸಿ ಶಿವಮೂರ್ತಿ, ಬೆಂಗಳೂರು ಗ್ರಾಮಾಂತರ ಡಿಸಿ ರವೀಂದ್ರ, ಸಂಬಂಧಿತ ವಿಭಾಗದ ಡಿಸಿಪಿಗಳು, ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ, ಬೆಂ.ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಸದಸ್ಯರಾಗಿರಲಿದ್ದಾರೆ.