ರಾಜ್ಯದ ಮಲೆನಾಡು ಭಾಗವಾದ ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಸಾಗರ ಮತ್ತು ಸಕಲೇಶಪುರ ತಾಲೂಕುಗಳ ಶಾಲೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.
ಶಿವಮೊಗ್ಗ/ಹಾಸನ (ಜು.07): ರಾಜ್ಯದ ಮಲೆನಾಡು ಭಾಗದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ (ಜುಲೈ 07) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸಾಗರ ತಾಲೂಕಿನಲ್ಲಿ ರಜೆ:
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಂದ ಪ್ರೌಢಶಾಲೆಯವರೆಗೆ ರಜೆ ಘೋಷಿಸಲಾಗಿದೆ. ಸಾಗರ ತಹಸಿಲ್ದಾರ್ ಪ್ರತಿಭಾ ಅವರ ಸೂಚನೆಯ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಸದಾನಂದ ಸ್ವಾಮಿ ಅವರು ಈ ಅಧಿಕೃತ ಆದೇಶ ಹೊರಡಿಸಿದ್ದಾರೆ. ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿರುವುದರಿಂದ ಪೋಷಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
School holiday: ಕರ್ನಾಟಕ ಮಳೆ ಆರ್ಭಟ: ಉತ್ತರ ಕನ್ನಡ, ಬೆಳಗಾವಿ ಸೇರಿ ಈ ಜಿಲ್ಲೆಗಳ ಶಾಲೆಗಳಿಗೆ ನಾಳೆ ರಜೆ ಘೋಷಣೆ
ಸಕಲೇಶಪುರ ತಾಲೂಕಿನಲ್ಲೂ ರಜೆ:
ಇತ್ತ ಹಾಸನ ಜಿಲ್ಲೆಯ ಮಲೆನಾಡು ಭಾಗವಾದ ಸಕಲೇಶಪುರ ತಾಲೂಕಿನಲ್ಲೂ ವರುಣನ ಅಬ್ಬರ ಜೋರಾಗಿದೆ. ಸಕಲೇಶಪುರ ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಕಾರಣ, ಶಾಲಾ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ನಾಳೆ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ನೀಡಿ ತಹಸಿಲ್ದಾರ್ ಸುಪ್ರೀತಾ ಅವರು ಆದೇಶಿಸಿದ್ದಾರೆ. ಸಕಲೇಶಪುರದ ಗುಡ್ಡಗಾಡು ಪ್ರದೇಶಗಳಲ್ಲಿ ಮಣ್ಣು ಕುಸಿಯುವ ಭೀತಿ ಇರುವುದರಿಂದ ಮತ್ತು ರಸ್ತೆ ಸಂಪರ್ಕಕ್ಕೆ ಅಡ್ಡಿಯಾಗುವ ಸಾಧ್ಯತೆ ಇರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ: Shivamogga Heavy Rain: ಶಿವಮೊಗ್ಗದಲ್ಲಿ ಮಳೆಯ ಆರ್ಭಟ: ಮಾಲತಿ ನದಿಯಲ್ಲಿ ಕೊಚ್ಚಿಹೋದ ವೃದ್ಧ, ಶವಕ್ಕಾಗಿ ಶೋಧ!


