Asianet Suvarna News Asianet Suvarna News

ಕೆಜೆ ಹಳ್ಳಿ, ಡಿಜೆ ಹಳ್ಳಿ ಪ್ರಕರಣ ವಾಪಸ್‌ ಪಡೆಯಲ್ಲ: ಸಚಿವ ಎಂ.ಬಿ.ಪಾಟೀಲ್‌

ಕೆಜೆ ಹಳ್ಳಿ, ಡಿಜೆ ಹಳ್ಳಿ ಅಪರಾಧಿಗಳ ಮೇಲಿನ ಪ್ರಕರಣ ವಾಪಸ್‌ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಸ್ಪಷ್ಟಪಡಿಸಿದರು. 

KJ Halli DJ Halli case not withdrawn Says Minister MB Patil gvd
Author
First Published Jul 27, 2023, 11:21 PM IST

ವಿಜಯಪುರ (ಜು.27): ಕೆಜೆ ಹಳ್ಳಿ, ಡಿಜೆ ಹಳ್ಳಿ ಅಪರಾಧಿಗಳ ಮೇಲಿನ ಪ್ರಕರಣ ವಾಪಸ್‌ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಸ್ಪಷ್ಟಪಡಿಸಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಜೆ ಹಳ್ಳಿ, ಡಿಜೆ ಹಳ್ಳಿ, ಹುಬ್ಬಳ್ಳಿ ಹಾಗೂ ಮಂಗಳೂರಿನ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಅಪರಾಧಿಗಳನ್ನು ರಕ್ಷಿಸುವುದಿಲ್ಲ. ಆದರೆ, ನಿರಪರಾಧಿಗಳಿಗೆ ಶಿಕ್ಷೆಯಾಗದಂತೆಯೂ ನೋಡಿಕೊಳ್ಳಬೇಕಾದುದು ಸರ್ಕಾರದ ಕರ್ತವ್ಯವಾಗಿದೆ ಎಂದರು.

ಯಾವುದೇ ಜಾತಿ, ಧರ್ಮ ಆಧರಿಸಿ ಕೇಸ್‌ ಹಿಂಪಡೆಯುವುದಿಲ್ಲ. ನಿಜವಾದ ಅಪರಾಧಿಗಳು ಯಾವುದೇ ಧರ್ಮ, ಜಾತಿಯವರಿದ್ದರೂ ಶಿಕ್ಷೆ ಆಗಲೇಬೇಕು. ತಪ್ಪಿತಸ್ಥರಿಗೆ ಖಂಡಿತ ಶಿಕ್ಷೆಯಾಗುತ್ತದೆ. ನಮ್ಮ ಸರ್ಕಾರ ಅಪರಾಧಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿಲ್ಲ. ತಮ್ಮ ಸರ್ಕಾರದಲ್ಲಿ ಪೊಲೀಸರನ್ನು ಗೌರವದಿಂದ ನಡೆಸಿಕೊಳ್ಳಲಾಗುತ್ತಿದೆ. ಬಿಜೆಪಿ ಸರ್ಕಾರದ ಕಾಲಾವಧಿಯಲ್ಲಿ ಪೊಲೀಸರನ್ನು ಅಗೌರವದಿಂದ ಕಾಣಲಾಗುತ್ತಿತ್ತು. ಆದರೆ, ಕಾಂಗ್ರೆಸ್‌ ಸರ್ಕಾರ ಪೊಲೀಸರ ಆಶೋತ್ತರಗಳಿಗೆ ಸ್ಪಂದಿಸುತ್ತದೆ ಎಂದರು.

ರೇಷ್ಮೆ ಉತ್ಪನ್ನಗಳ ಪ್ರಮಾಣ ದ್ವಿಗುಣಗೊಳಿಸಿ: ಸಚಿವ ವೆಂಕಟೇಶ್‌

ಕುಡಿಯುವ ನೀರಿನ ಸಮಸ್ಯೆಯಾಗದಿರಲಿ: ಎಲ್ಲ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುವ ಮೂಲಕ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳುವಂತೆ ಬೃಹತ್‌ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಬುಧವಾರ ಜರುಗಿದ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ನಿಮ್ಮ ಹಂತದಲ್ಲಿ ಸಾಧ್ಯವಾಗದೇ ಇದ್ದಾಗ ಮೇಲಧಿಕಾರಿಗಳ ಗಮನಕ್ಕೆ ತಂದು ಶೀಘ್ರ ಪರಿಹಾರ ಕೈಗೊಂಡು ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಈಗಾಗಲೇ ನೀರಿನ ಕೊರತೆ ಇರುವ ಗ್ರಾಮಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ. ಜಿಲ್ಲೆಯ 20 ಗ್ರಾಮ ಪಂಚಾಯಿತಿಯ 29 ಗ್ರಾಮಗಳಲ್ಲಿ 38 ಟ್ಯಾಂಕರ್‌ ಮೂಲಕ ಪ್ರತಿ ದಿನ 90 ಟ್ರಿಪ್‌ ಮೂಲಕ ಹಾಗೂ ಖಾಸಗಿ 17 ಕೊಳವೆ ಬಾವಿ ನೀರು ಪೂರೈಕೆ ಆಗುತ್ತಿದ್ದು, ಜಿಲ್ಲೆಯ ಇಂಡಿ, ಚಡಚಣ, ತಿಕೋಟಾ, ಸಿಂದಗಿ, ಆಲಮೇಲ, ವಿಜಯಪುರ, ತಾಳಿಕೋಟೆ ತಾಲೂಕಿನ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಸುವ ಕಾರ್ಯ ಗ್ರಾಮ ಪಂಚಾಯಿತಿ ಅನುದಾನದಲ್ಲಿ ನಿರ್ವಹಣೆ ಮಾಡಲಾಗುತ್ತಿದೆ. ಆರ್‌ಡಿಪಿಆರ್‌ ಇಲಾಖೆಯಿಂದ ಸಹಾಯಧನ ಒದಗಿಸಲು ವ್ಯವಸ್ಥೆ ಮಾಡುವಂತೆ ಅವರು ಸೂಚಿಸಿದರು. 3 ಲಕ್ಷ ಕ್ಯುಸೆಕ್‌ಗೂ ಹೆಚ್ಚಿನ ಪ್ರಮಾಣದ ನೀರು ಹರಿದರೆ ಮಾತ್ರ ಪ್ರವಾಹ ಪರಿಸ್ಥಿತಿ ಎದುರಾಗಲಿದ್ದು, ಪ್ರವಾಹಕ್ಕೆ ಒಳಗಾಗುವ ಪ್ರದೇಶಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಕ್ತದಾನದ ಬಗ್ಗೆ ಮೂಢನಂಬಿಕೆ, ತಪ್ಪು ಕಲ್ಪನೆಗಳಿವೆ: ಮಾಜಿ ಸಚಿವ ಸುಧಾಕರ್‌

ಸಂಕನಾಳ-ಟಕ್ಕಳಕಿ ಕೆರೆ ತುಂಬಿಸುವ ಕಾರ್ಯ ಪೂರ್ಣಗೊಳಿಸಬೇಕು. 1.4 ಕಿ.ಮೀ. ಪೈಪ್‌ಲೈನ್‌ ಕಾಮಗಾರಿ ಬಾಕಿ ಉಳಿದಿದ್ದು, 3 ತಿಂಗಳ ಅವಧಿಯಲ್ಲಿ ಈ ಕಾಮಗಾರಿ ಪೂರ್ಣಗೊಳಿಸಬೇಕು. ಯಂಕಂಚಿ- ಪುರದಾಳ ಕೆರೆ ತುಂಬಿಸುವ ಕಾಮಗಾರಿ ಒಂದು ವಾರದೊಳಗೆ ಪೂರ್ಣಗೊಳಿಸಬೇಕು. ಜಿಲ್ಲೆಯಲ್ಲಿನ ಓವರ್‌ ಟ್ಯಾಂಕ್‌ಗಳ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಬೇಕು. ಬಸವನಬಾಗೇವಾಡಿಯಿಂದ ಹಂಗರಗಿ ಲಿಂಕ್‌ ಕಾಮಗಾರಿ ಬೇಗ ನಿರ್ವಹಿಸಬೇಕು. ಹೂವಿನಹಿಪ್ಪರಗಿಯ 110 ಕೆವಿ ವಿದ್ಯುತ್‌ ವಿತರಣಾ ಕೇಂದ್ರ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಬೇಕು ಎಂದು ಸೂಚಿಸಿದರು.

Follow Us:
Download App:
  • android
  • ios