ಕೊಡವರಿಗೆ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಸ್ಥಾನಮಾನ ಕಲ್ಪಿಸುವಂತೆ ಕೊಡವ ನ್ಯಾಷನಲ್‌ ಕೌನ್ಸಿಲ್‌ (ಸಿಎನ್‌ಸಿ) ಸಲ್ಲಿಸಿರುವ ಬೇಡಿಕೆ ಬಗ್ಗೆ ಪರಿಶೀಲಿಸಲು ಆಯೋಗವೊಂದನ್ನು ರಚಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗೆ ನಾಲ್ಕು ವಾರಗಳಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಚ್‌ ಬುಧವಾರ ನಿರ್ದೇಶಿಸಿದೆ.

ಬೆಂಗಳೂರು (ಜೂ.15) ಕೊಡವರಿಗೆ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಸ್ಥಾನಮಾನ ಕಲ್ಪಿಸುವಂತೆ ಕೊಡವ ನ್ಯಾಷನಲ್‌ ಕೌನ್ಸಿಲ್‌ (ಸಿಎನ್‌ಸಿ) ಸಲ್ಲಿಸಿರುವ ಬೇಡಿಕೆ ಬಗ್ಗೆ ಪರಿಶೀಲಿಸಲು ಆಯೋಗವೊಂದನ್ನು ರಚಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗೆ ನಾಲ್ಕು ವಾರಗಳಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ಬುಧವಾರ ನಿರ್ದೇಶಿಸಿದೆ.

Add Asianetnews Kannada as a Preferred SourcegooglePreferred

ಈ ಕುರಿತಂತೆ ಬಿಜೆಪಿ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿತು.

ಇದಕ್ಕೂ ಮುನ್ನ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ನ್ಯಾಯಾಲಯ ಕಳೆದ ಬಾರಿ ನೀಡಿದ್ದ ನಿರ್ದೇಶನದಂತೆ ಅರ್ಜಿಯಲ್ಲಿ ಕೊಡವ ನ್ಯಾಷನಲ್‌ ಕೌನ್ಸಿಲ್‌ ಅನ್ನು ಪಕ್ಷಗಾರರನ್ನಾಗಿ ಮಾಡಲಾಗಿದೆ. ಆ ಕುರಿತು ಅರ್ಜಿಯಲ್ಲಿ ತಿದ್ದುಪಡಿ ಮಾಡಿ ಅದರ ಪ್ರತಿಯನ್ನು ಪ್ರತಿವಾದಿಗಳಿಗೆ ತಲುಪಿಸಲಾಗಿದೆ ಎಂದರು. ಸಿಎನ್‌ಸಿ ಪರ ವಕೀಲರು, ತಾವು ಅರ್ಜಿದಾರರ ವಾದವನ್ನು ಬೆಂಬಲಸಲಿದ್ದೇವೆ. ಆ ಕುರಿತು ಪ್ರಮಾಣಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಅಂತಿಮವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪರ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ಕೋರಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಆ.3ಕ್ಕೆ ಮುಂದೂಡಿದ ನ್ಯಾಯಪೀಠ, ಅಷ್ಟರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು.

ಕೊಡವರಿಗೆ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಸ್ಥಾನಮಾನ ನೀಡುವಂತೆ ಸಿಎನ್‌ಸಿ ಮನವಿ ಮಾಡಿದೆ. ಈ ಸಂಬಂಧ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಈ ಬಗ್ಗೆ ಆಯೋಗವೊಂದನ್ನು ರಚಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.