ಬೇಸಿಗೆ ರಜೆಗೆಂದು ತಾತನ ಮನೆಗೆ ಬಂದಿದ್ದ ಇಬ್ಬರು ಪುಟ್ಟ ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.

ಕೋಲಾರ (ಮೇ.25): ಜಿಲ್ಲೆಯಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಬೇಸಿಗೆ ರಜೆಗೆಂದು ತಾತನ ಮನೆಗೆ ಬಂದಿದ್ದ ಇಬ್ಬರು ಪುಟ್ಟ ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.

Add Asianetnews Kannada as a Preferred SourcegooglePreferred

ಮೃತರನ್ನು 12 ವರ್ಷದ ದೇವಕಿರಣ್ ಹಾಗೂ 9 ವರ್ಷದ ವಿನುತ್ ಎಂದು ಗುರುತಿಸಲಾಗಿದೆ. ಇಬ್ಬರೂ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ರಜೆ ಹಿನ್ನೆಲೆ ತಾತನ ಮನೆಗೆ ಬಂದಿದ್ದರು. ಆಟವಾಡುವ ವೇಳೆ ಕೃಷಿ ಹೊಂಡದ ಬಳಿ ಕಾಲು ಜಾರಿ ಬಿದ್ದ ಪರಿಣಾಮ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಾಸ್ತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳ ಅಕಾಲಿಕ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.

ಗಮನಾರ್ಹ ಸಂಗತಿ ಎಂದರೆ, ಕಳೆದ ಕೇವಲ 15 ದಿನಗಳಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಅಳವಡಿಸಿ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದರೂ, ಮತ್ತೊಂದು ಅಮಾಯಕ ಜೀವ ಬಲಿಯಾಗಿರುವುದು ಆತಂಕ ಹೆಚ್ಚಿಸಿದೆ.

ದುರಂತದ ಬಳಿಕ ಪ್ರಶ್ನೆ ಒಂದೇ

ಕೃಷಿ ಹೊಂಡಗಳ ಸುರಕ್ಷತೆ ಕುರಿತು ಆದೇಶಗಳು ಕಾಗದಕ್ಕೆ ಮಾತ್ರ ಸೀಮಿತವಾಗಿದೆಯೇ? ಅಮಾಯಕ ಮಕ್ಕಳ ಜೀವ ಹೋಗುವ ಮುನ್ನ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಯಾವಾಗ? ಎಂಬ ಪ್ರಶ್ನೆ ಮೂಡಿದೆ.