ಸಿದ್ದರಾಮಯ್ಯ ಭೇಟಿಯಾಗಿ ಚರ್ಚೆ ನಡೆಸಿದ ಕುಸುಮಾ
ಸೋಲಿನಿಂದ ಧೃತಿಗೆಡುವ ಅಗತ್ಯವಿಲ್ಲ. ಮೊದಲ ಸ್ಪರ್ಧೆಯಲ್ಲೇ ಉತ್ತಮ ಪೈಪೋಟಿ ನೀಡಿದ್ದೀರಿ. ಕ್ಷೇತ್ರದ ಸಾವಿರಾರು ಜನ ವಿಶ್ವಾಸವಿಟ್ಟು ತಮಗೆ ಮತ ಹಾಕಿದ್ದಾರೆ. ಹಾಗಾಗಿ ಕ್ಷೇತ್ರದಲ್ಲಿ ತಮ್ಮ ರಾಜಕೀಯ ಮುಂದುವರೆಸಿ ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ತೊಡಗಿಕೊಳ್ಳುವಂತೆ ಸಲಹೆ ನೀಡಿದ ಸಿದ್ದರಾಮಯ್ಯ
ಬೆಂಗಳೂರು(ನ.12): ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನ ಪರಾಜಿತ ಅಭ್ಯರ್ಥಿ ಕುಸುಮಾ ಬುಧವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಉಪಚುನಾವಣೆ ಸೋಲಿನ ಕುರಿತು ಚರ್ಚೆ ನಡೆಸಿದ್ದಾರೆ.
ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿದ ಕುಸುಮಾ, ಕ್ಷೇತ್ರದಾದ್ಯಂತ ತಮ್ಮ ಪರ ಪ್ರಚಾರ ನಡೆಸಿ ಉತ್ತಮ ಪ್ರತಿಸ್ಪರ್ಧೆಗೆ ಕಾರಣವಾಗಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು ಸೋಲಿನಿಂದ ಧೃತಿಗೆಡುವ ಅಗತ್ಯವಿಲ್ಲ. ಮೊದಲ ಸ್ಪರ್ಧೆಯಲ್ಲೇ ಉತ್ತಮ ಪೈಪೋಟಿ ನೀಡಿದ್ದೀರಿ. ಕ್ಷೇತ್ರದ ಸಾವಿರಾರು ಜನ ವಿಶ್ವಾಸವಿಟ್ಟು ತಮಗೆ ಮತ ಹಾಕಿದ್ದಾರೆ. ಹಾಗಾಗಿ ಕ್ಷೇತ್ರದಲ್ಲಿ ತಮ್ಮ ರಾಜಕೀಯ ಮುಂದುವರೆಸಿ ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ತೊಡಗಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
'ಕುಸುಮಾಗೆ ಶಾಸಕಿ ಪಟ್ಟ ಸಿಗುತ್ತದೆ'
ಇದಕ್ಕೆ ಕುಸುಮಾ ಪ್ರತಿಕ್ರಿಯಿಸಿ, ಸೋಲಿನಿಂದ ಎದೆಗುಂದುವುದಿಲ್ಲ. ಕ್ಷೇತ್ರದಲ್ಲಿ ಜನರು ನನಗೆ ತೋರಿದ ಪ್ರೀತಿ ವಿಶ್ವಾಸವನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇನೆ. ಸದಾ ಜನರ ಜೊತೆಗಿದ್ದು ಅವರ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು ಎಂದು ಮೂಲಗಳು ತಿಳಿಸಿವೆ. ಈ ವೇಳೆ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮತ್ತಿತರು ಇದ್ದರು.