ತೆಂಕುತಿಟ್ಟು ಯಕ್ಷಗಾನ ರಂಗದ ಮೇರು ಕಲಾವಿದ, 'ನಡೆದಾಡುವ ವಿಶ್ವಕೋಶ' ಖ್ಯಾತಿಯ ಸೂರಿಕುಮೇರು ಕೆ.ಗೋವಿಂದ ಭಟ್ (90) ಅವರು ವಯೋಸಹಜ ಅನಾರೋಗ್ಯದಿಂದ ನಿಧನ. ಸುಮಾರು 70 ವರ್ಷ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು. ಧರ್ಮಸ್ಥಳ ಮೇಳದಲ್ಲಿ 54 ವರ್ಷ ಕಾಲ ತಿರುಗಾಟ ನಡೆಸಿ ದಾಖಲೆ ನಿರ್ಮಿಸಿದ್ದರು.
ಬಂಟ್ವಾಳ (ಮಾ.21): ತೆಂಕುತಿಟ್ಟು ಯಕ್ಷಗಾನ ರಂಗದ ಮೇರು ಕಲಾವಿದ, ಆಟ-ಕೂಟಗಳ ಸರದಾರ, ಯಕ್ಷರಂಗದ ಸವ್ಯಸಾಚಿ ಸೂರಿಕುಮೇರು ಕೆ.ಗೋವಿಂದ ಭಟ್ (90) ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ತಮ್ಮ ಹಿರಿಯ ಪುತ್ರನ ನಿವಾಸದಲ್ಲಿ ನಿಧನ ಹೊಂದಿದರು. ಅವರು ಮೂವರು ಪುತ್ರರನ್ನು ಅಗಲಿದ್ದಾರೆ.
ಯಕ್ಷಗಾನ ಕ್ಷೇತ್ರದ ‘ನಡೆದಾಡುವ ವಿಶ್ವಕೋಶ’, ‘ದಶಾವತಾರಿ’ ಎಂದೇ ಖ್ಯಾತರಾಗಿದ್ದ ಗೋವಿಂದ ಭಟ್ ತೆಂಕುತಿಟ್ಟು ಯಕ್ಷಗಾನ ಇದುವರೆಗೆ ಕಂಡ ಸರ್ವಶ್ರೇಷ್ಠ ಕಲಾವಿದರು ಎನಿಸಿಕೊಂಡಿದ್ದರು. ಅವರು ಯಕ್ಷಗಾನ ಗುರುಗಳೂ ಆಗಿದ್ದರು.
ಯಕ್ಷಗಾನ ಕ್ಷೇತ್ರದಲ್ಲಿ ಸುಮಾರು 70 ವರ್ಷ ಸೇವೆ ಸಲ್ಲಿಸಿದ ಇವರು, ಧರ್ಮಸ್ಥಳ ಯಕ್ಷಗಾನ ಮೇಳದ ಪ್ರಮುಖ ಕಲಾವಿದರಾಗಿ, ಒಂದೇ ಮೇಳದಲ್ಲಿ 54 ವರ್ಷಗಳಿಗೂ ಹೆಚ್ಚು ಕಾಲ ತಿರುಗಾಟ ನಡೆಸಿ ದಾಖಲೆ ಮೆರೆದವರು. ಜೊತೆಗೆ ಮೂಲ್ಕಿ, ಕೂಡ್ಲು, ಸುರತ್ಕಲ್ (ಕೆಳಗಿನ ಮಾರಿಗುಡಿ) ಇರಾ ಸೋಮನಾಥೇಶ್ವರ ಮೇಳಗಳಲ್ಲಿ ತಿರುಗಾಟ ನಡೆಸಿದ್ದಾರೆ.
ಛಂದೋಬದ್ಧವಾದ ಮಾತಿನ ಜತೆಗೆ ನೃತ್ಯದಲ್ಲೂ ಪ್ರಾವೀಣ್ಯ ಪಡೆದಿದ್ದರು. ಅವರಿಗೆ 2008ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 2016ರಲ್ಲಿ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪುರಸ್ಕಾರ, ಕನ್ನಡ ಸಾಹಿತ್ಯ ಪರಿಷತ್ತ್ ಪುರಸ್ಕಾರ, ಕರ್ನಾಟಕ ಜಾನಪದ ಅಕಾಡೆಮಿ ಸಾಧನಾ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಗೌರವ ಸನ್ಮಾನಗಳು ದೊರೆತಿವೆ.


