Asianet Suvarna News Asianet Suvarna News

ಕೇಂದ್ರ ಸರ್ಕಾರ ಹೊಸ ಕಾಯ್ದೆ ವಾಪಸ್ ಪಡೆಯಲಿ : ಲಾರಿ ಚಾಲಕರು, ಕ್ಲೀನರ್‌ ಸಂಘ

ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ಭಾರತೀಯ ನ್ಯಾಯ ಸಂಹಿತೆ-2023ರಲ್ಲಿ ಹಿಟ್ ಅಂಡ್ ರನ್ ಕೇಸಿಗೆ ಚಾಲಕರಿಗೆ 7ಲಕ್ಷ ರು. ದಂಡ ಹಾಗೂ 10 ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಖಂಡಿಸಿ, ಕಾಯ್ದೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ತುಮಕೂರು ಜಿಲ್ಲಾ ಲಾರಿ ಚಾಲಕರು ಮತ್ತು ಕ್ಲೀನರ್‌ಗಳ ಸಂಘ ಹಾಗೂ ಜಿಲ್ಲಾ ಲಾರಿ ಮಾಲೀಕರ ಸಂಘ, ತುಮಕೂರು ತಾಲೂಕು ಲಾರಿ ಮಾಲೀಕರು ಮತ್ತು ಚಾಲಕರ ಸಂಘದ ವತಿಯಿಂದ ಬೃಹತ್ ಪಾದಯಾತ್ರೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Let the central government withdraw the new act: Lorry drivers, cleaners union snr
Author
First Published Jan 19, 2024, 9:59 AM IST

 ತುಮಕೂರು :  ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ಭಾರತೀಯ ನ್ಯಾಯ ಸಂಹಿತೆ-2023ರಲ್ಲಿ ಹಿಟ್ ಅಂಡ್ ರನ್ ಕೇಸಿಗೆ ಚಾಲಕರಿಗೆ 7ಲಕ್ಷ ರು. ದಂಡ ಹಾಗೂ 10 ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಖಂಡಿಸಿ, ಕಾಯ್ದೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ತುಮಕೂರು ಜಿಲ್ಲಾ ಲಾರಿ ಚಾಲಕರು ಮತ್ತು ಕ್ಲೀನರ್‌ಗಳ ಸಂಘ ಹಾಗೂ ಜಿಲ್ಲಾ ಲಾರಿ ಮಾಲೀಕರ ಸಂಘ, ತುಮಕೂರು ತಾಲೂಕು ಲಾರಿ ಮಾಲೀಕರು ಮತ್ತು ಚಾಲಕರ ಸಂಘದ ವತಿಯಿಂದ ಬೃಹತ್ ಪಾದಯಾತ್ರೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ತುಮಕೂರು ಜಿಲ್ಲಾ ಲಾರಿ ಚಾಲಕರು ಮತ್ತು ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಮತ್ತು ಕಾರ್ಯದರ್ಶಿ ಮೆಹಬೂಬ್ ಪಾಷ ಅವರ ನೇತೃತ್ವದಲ್ಲಿ, ಜಿಲ್ಲಾ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್, ಕಾರ್ಯದರ್ಶಿ ಶೌಕತ್, ತುಮಕೂರು ತಾಲೂಕು ಲಾರಿ ಚಾಲಕರು ಮತ್ತು ಮಾಲೀಕರ ಸಂಘ ಹಾಗೂ ವಿವಿಧ ಆಟೋ ಚಾಲಕರ ಸಂಘಗಳ ಸದಸ್ಯರು ಮತ್ತು ಆಟೋ ಮಾಲೀಕರು ನಗರದ ಟೌನ್‌ಹಾಲ್ ವೃತ್ತದಿಂದ ಅಶೋಕ ರಸ್ತೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಾ, ಕಾಯ್ದೆ ವಾಪಸ್ ಪಡೆಯಲು ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ತುಮಕೂರು ಜಿಲ್ಲಾ ಲಾರಿ ಚಾಲಕರು ಮತ್ತು ಕ್ಲೀನರ್‌ಗಳ ಸಂಘದ ಜಿಲ್ಲಾ ಕಾರ್ಯದರ್ಶಿ ಮೆಹಬೂಬ್ ಪಾಷ, ಕೇಂದ್ರ ಸರ್ಕಾರ ಹೊಸದಾಗಿ ತಂದಿರುವ ಹಿಟ್ ಅಂಡ್ ರನ್ ಕೇಸು ಕಾಯ್ದೆಯಿಂದ ಇಡೀ ಚಾಲಕರ ವಲಯದ ಮೇಲೆ ಗಂಭೀರ ಪರಿಣಾಮಗಳನ್ನು ಬೀರಲಿದೆ. ಉದ್ದೇಶಪೂರ್ವಕವಾಗಿ ಅಪಘಾತಗಳು ಸಂಭವಿಸುವುದಿಲ್ಲ. ಒಂದು ವೇಳೆ ಚಾಲಕನ ನಿರ್ಲಕ್ಷತೆಯಿಂದ ಅಪಘಾತ ಸಂಭವಿಸಿದರೆ 7 ವರ್ಷ ಜೈಲು ಶಿಕ್ಷೆ,ಎರಡು ಲಕ್ಷ ರೂ ದಂಡ, ಹಾಗೂ ಅಪಘಾತ ಮಾಡಿಯೂ ವಾಹನ ನಿಲ್ಲಿಸಿ ಓಡಿ ಹೋದರೆ 10 ವರ್ಷ ಜೈಲು, ಏಳು ಲಕ್ಷ ರು. ದಂಡ ವಿಧಿಸುವ ಹೊಸ ಕಾಯ್ದೆ ಚಾಲಕರಿಗೆ ಮರಣ ಶಾಸನವಾಗಿದೆ ಎಂದರು.

ಹಾಗಾಗಿ ಕೇಂದ್ರ ಸರಕಾರ ಕೂಡಲೇ ರದ್ದು ಪಡಿಸಿ, ಈ ಹಿಂದಿನಂತೆ ಕಲಂ 304(ಎ) ಅಡಿಯಲ್ಲಿ ತಂದು, ವಿಚಾರಣೆ ನಂತರ ಶಿಕ್ಷೆ ವಿಧಿಸುವ ಕಾಯ್ದೆ ಮರುಜಾರಿ ಮಾಡಬೇಕೆಂಬುದು ನಮ್ಮ ಆಗ್ರಹವಾಗಿದೆ. ಸರ್ಕಾರ ಒಂದು ವೇಳೆ ನಮ್ಮ ಮನವಿಗೆ ಸ್ಪಂದಿಸದಿದ್ದರೆ, ಮುಂದಿನ ದಿನಗಳಲ್ಲಿ ದ್ವಿಚಕ್ರ ವಾಹನ ಚಾಲಕರು ಸೇರಿದಂತೆ ಎಲ್ಲಾ ಬಗೆಯ ವಾಹನ ಚಾಲಕರ ಸೇರಿ ಬೀದಿಗಿಳಿದು ಉಗ್ರ ಪ್ರತಿಭಟನೆ ಕೈಗೊಳ್ಳುವುದಾಗಿ ಮೆಹಬೂಬ್ ಪಾಷ ಹೇಳಿದರು.

ಲಾರಿ ಚಾಲಕರು ಮತ್ತು ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಯ ಸಹ ಚಾಲಕರು ಮತ್ತು ಮಾಲೀಕರಿಗೆ ಅತ್ಯಂತ ಕರಾಳ ನಿಯಮಗಳಾಗಿದ್ದು, ಕೇಂದ್ರ ಸರ್ಕಾರ ಕೂಡಲೇ ಈ ನಿಯಮಗಳನ್ನು ವಾಪಸ್ ಪಡೆಯಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಈಗಾಗಲೇ ದೇಶದಾದ್ಯಂತ ಲಾರಿ ಚಾಲಕರು ಮತ್ತು ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಉಗ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದರು.

ಲಾರಿ ಮಾಲೀಕರು ಮತ್ತು ಚಾಲಕರ ಸಂಘದ ಜಿಲ್ಲಾ ಕಾರ್ಯದರ್ಶಿ ಶೌಕತ್ ಮಾತನಾಡಿ, ಸರ್ಕಾರದ ಹೊಸ ಕಾಯ್ದೆಯಿಂದ ಇದುವರೆಗೆ ವಾಹನದ ಮೇಲಿದ್ದ ಇನ್ಸೂರೆನ್ಸ್‌ನಿಂದ ಕಟಾವು ಆಗುತ್ತಿದ್ದ ಪರಿಹಾರದ ಹಣವನ್ನು ಚಾಲಕನೇ ಕಟ್ಟಬೇಕೆಂದಿರುವುದು ನಿಜಕ್ಕೂ ಚಾಲಕರನ್ನು ಸಂಕಷ್ಟಕ್ಕೀಡು ಮಾಡಿದೆ. ಹಾಗಾಗಿ ಸರ್ಕಾರ ಈ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂದರು.

ನೂರಾರು ಜನರು ಲಾರಿ ಚಾಲಕರು, ಮಾಲೀಕರು, ಆಟೋ ಚಾಲಕರು ಮತ್ತು ಮಾಲೀಕರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಚಾಲಕರು ಉದ್ದೇಶ ಪೂರ್ವಕವಾಗಿ ಯಾರು ಅಪಘಾತ ಮಾಡಿ ಓಡಿ ಹೋಗುವುದಿಲ್ಲ. ಸಾರ್ವಜನಿಕರು ಮತ್ತು ಅಪಘಾತದಲ್ಲಿ ಗಾಯಗೊಂಡವರ, ಇಲ್ಲವೇ ಮೃತಪಟ್ಟವರು ಸಂಬಂಧಿಕರು ನಡೆಸುವ ಹಲ್ಲೆಗಳಿಂದ ಪ್ರಾಣ ಉಳಿಸಿಕೊಳ್ಳಲು ಅನಿವಾರ್ಯವಾಗಿ ಗಾಡಿ ಬಿಟ್ಟು ಓಡಿ ಹೋಗುವುದೋ, ಇಲ್ಲವೇ ಗಾಡಿಯೊಂದಿಗೆ ಓಡಿ ಹೋಗುತ್ತಾರೆ. ಪ್ರಾಣ ರಕ್ಷಣೆಯ ಉದ್ದೇಶದಿಂದ ಮಾಡುವ ಕೆಲಸ ಇದಾಗಿದೆ.

ಮೆಹಬೂಬ್ ಪಾಷ, ತುಮಕೂರು ಜಿಲ್ಲಾ ಲಾರಿ ಚಾಲಕರು ಮತ್ತು ಕ್ಲೀನರ್‌ ಸಂಘದ ಜಿಲ್ಲಾ ಕಾರ್ಯದರ್ಶಿ

Latest Videos
Follow Us:
Download App:
  • android
  • ios