*  ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಡೆದ ಘಟನೆ*  ಸುಮಾರು 4 ದಿನಗಳ ಹಿಂದೆ ನಡೆದಿರುವ ಘಟನೆ*  ಈ ಬಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು  

ಭದ್ರಾವತಿ(ಸೆ.08): ಹಾಸನ ಜಿಲ್ಲೆಯ ಆಲೂರಿನಲ್ಲಿ ಮಂಗಗಳ ಸಾಮೂಹಿಕ ಸಾವು ಪ್ರಕರಣ ಮಾಸುವ ಮುನ್ನವೇ 150ಕ್ಕೂ ಹೆಚ್ಚು ನಾಯಿಗಳನ್ನು ಜೀವಂತವಾಗಿ ಹೂತು ಹಾಕಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಾಲೂಕಿನ ಸಿಂಗನಮನೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಂಬದಾಳಲು- ಹೊಸೂರು ಗ್ರಾಮ ಪಂಚಾಯಿತಿಗೆ ಒಳಪಡುವ ರಂಗನಾಥಪುರದಲ್ಲಿ ಕಳೆದ ಸುಮಾರು 4 ದಿನಗಳ ಹಿಂದೆ ಘಟನೆ ನಡೆದಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. 
ಎಂಪಿಎಂ ಅರಣ್ಯ ವ್ಯಾಪ್ತಿಯ ತಮ್ಮಡಿಹಳ್ಳಿಯಲ್ಲಿ 150ಕ್ಕೂ ಹೆಚ್ಚಿನ ನಾಯಿಗಳನ್ನು ಜೀವಂತವಾಗಿ ಹೂಳಲಾಗಿದೆ. ಈ ವೇಳೆ ನಾಯಿಗಳು ಬೊಗಳುವ ಶಬ್ದ ಸ್ಥಳೀಯರಿಗೆ ಕೇಳಿಸಿದೆ. ಅನಂತರ ಈ ಭಾಗದಲ್ಲಿ ನಿಶಬ್ದ ಕಂಡುಬಂದಿದೆ. ಬಳಿಕ ಪ್ರಾಣಿ ದಯಾ ಸಂಘದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಆದರೆ ಕಾರಣವೇನೆಂಬುದು ಇನ್ನೂ ಸ್ಪಷ್ಟವಾಗಿ ತಿಳಿದಿಲ್ಲ. ಈ ಬಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ; ಮೂಕ ಪ್ರಾಣಿಗಳ ಮೇಲೆ ದೌರ್ಜನ್ಯ, ಮಂಗಗಳ ಮಾರಣ ಹೋಮ

ಒಂದು ಮೂಲದ ಪ್ರಕಾರ ಇಲ್ಲಿನ ಗ್ರಾಮ ಪಂಚಾಯ್ತಿ ವತಿಯಿಂದ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಿ ಪುನಃ ಅವುಗಳನ್ನು ವಾಸಿಸುತ್ತಿದ್ದ ಸ್ಥಳದಲ್ಲಿಯೇ ಬಿಡಲಾಗುತ್ತದೆ. ಈ ಸಂಬಂಧ ಗ್ರಾಮ ಪಂಚಾಯಿತಿ ವತಿಯಿಂದ ಟೆಂಡರ್‌ ಸಹ ನೀಡಲಾಗಿತ್ತು ಎನ್ನಲಾಗುತ್ತಿದೆ. ಟೆಂಡರ್‌ದಾರರು ಶಸ್ತ್ರಚಿಕಿತ್ಸೆ ಹಣ ಉಳಿಸುವ ಉದ್ದೇಶದಿಂದ ಈ ರೀತಿಯ ಕೃತ್ಯ ನಡೆಸಿರಬಹುದು ಎಂಬ ಆರೋಪ ಸಹ ಸ್ಥಳೀಯರಿಂದ ಕೇಳಿಬರುತ್ತಿವೆ.

ನಾಯಿಗಳನ್ನು ಹೂತಿಟ್ಟಿರುವ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ಗ್ರಾಮ ಪಂಚಾಯಿತಿ ಮಾಹಿತಿ ಪ್ರಕಾರ ನಾಯಿಗಳನ್ನು ಜನವಸತಿ ಪ್ರದೇಶಗಳಿಂದ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡುವುದು ವಾಡಿಕೆಯಾಗಿದೆ. ಆದರೆ ನಾಯಿಗಳನ್ನು ಕೊಲ್ಲುವ ಬಗ್ಗೆ ಎಲ್ಲೂ ಸೂಚಿಸಲಾಗಿಲ್ಲ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಜೆ.ಪಿ.ಯೋಗೇಶ್‌ ತಿಳಿಸಿದ್ದಾರೆ.