ನೆಲಮಂಗಲದಲ್ಲಿ, ಪ್ರೀತಿಯನ್ನು ನಿರಾಕರಿಸಿದ ಯುವತಿಯನ್ನು ಕೊಲ್ಲಲು ಬಿಹಾರ ಮೂಲದ ಯುವಕನೊಬ್ಬ ಆನ್‌ಲೈನ್‌ನಲ್ಲಿ ಖರೀದಿಸಿದ ಗನ್‌ನೊಂದಿಗೆ ಬಂದಿದ್ದ. ಯುವತಿಯ ಸಮಯಪ್ರಜ್ಞೆಯಿಂದ 112ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ ಪರಿಣಾಮ, ಆರೋಪಿಯನ್ನು ಬಂಧಿಸಲಾಗಿದ್ದು, ದೊಡ್ಡ ಅನಾಹುತ ತಪ್ಪಿದೆ.

ನೆಲಮಂಗಲ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಹಾಡಹಗಲೇ ಗನ್ ಹಿಡಿದು ಓಡಾಡಿದ ಯುವಕನೊಬ್ಬ ಯುವತಿಯನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ ಘಟನೆ ಬೆಳಕಿಗೆ ಬಂದಿದೆ. ಪ್ರೇಮಕ್ಕೆ ಯುವತಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಆಕೆಯನ್ನು ಹತ್ಯೆ ಮಾಡುವ ಉದ್ದೇಶದಿಂದ ಆನ್‌ಲೈನ್ ಮೂಲಕ ಗನ್ ಖರೀದಿಸಿ ಗ್ರಾಮಕ್ಕೆ ಬಂದಿದ್ದ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.

Add Asianetnews Kannada as a Preferred SourcegooglePreferred

ಬಿಹಾರ ಮೂಲದ ಯುವಕ

ಆರೋಪಿಯು ಬಿಹಾರ ಮೂಲದವನಾಗಿದ್ದು, ಯುವತಿಯನ್ನು ಕೊಲ್ಲುವ ನಿಟ್ಟಿನಲ್ಲಿ ಪೂರ್ವಯೋಜನೆಯೊಂದಿಗೆ ನೆಲಮಂಗಲಕ್ಕೆ ಆಗಮಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗನ್ ಹಿಡಿದು ಸಾರ್ವಜನಿಕವಾಗಿ ಓಡಾಡುತ್ತಿದ್ದ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಈ ದೃಶ್ಯಗಳು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ತೀವ್ರಗೊಳಿಸಿವೆ.

ಯುವತಿಯ ಸಮಯಪ್ರಜ್ಞೆ ಈ ಘಟನೆಯಲ್ಲಿ ಮಹತ್ವದ ಪಾತ್ರವಹಿಸಿದೆ. ಆರೋಪಿ ಸಂಶಯಾಸ್ಪದವಾಗಿ ವರ್ತಿಸುತ್ತಿರುವುದನ್ನು ಗಮನಿಸಿದ ಯುವತಿ ತಕ್ಷಣವೇ 112 ತುರ್ತು ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾಳೆ. ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ, ಗನ್ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ತಕ್ಷಣದ ಕಾರ್ಯಾಚರಣೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ.

ಆನ್‌ಲೈನ್ ಮೂಲಕ ಅಕ್ರಮವಾಗಿ ಗನ್ ಖರೀದಿ

ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಆನ್‌ಲೈನ್ ಮೂಲಕ ಅಕ್ರಮವಾಗಿ ಗನ್ ಖರೀದಿ ಮಾಡಿದ ಹಿನ್ನೆಲೆ ಹಾಗೂ ಸಾರ್ವಜನಿಕ ಸುರಕ್ಷತೆಗೆ ಉಂಟಾದ ಅಪಾಯದ ಬಗ್ಗೆ ಪೊಲೀಸರು ಆಳವಾದ ತನಿಖೆ ನಡೆಸುತ್ತಿದ್ದಾರೆ.

ಹಗಲು ಹೊತ್ತಲ್ಲೇ ಶಸ್ತ್ರಾಸ್ತ್ರದೊಂದಿಗೆ ಸಂಚರಿಸಿದ ಘಟನೆ ಗ್ರಾಮಸ್ಥರಲ್ಲಿ ಭೀತಿಯನ್ನು ಮೂಡಿಸಿದ್ದು, ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವೂ ವ್ಯಕ್ತವಾಗಿದೆ. ಯುವತಿಯ ಸಮಯಪ್ರಜ್ಞೆ ಮತ್ತು ಪೊಲೀಸರ ತ್ವರಿತ ಕ್ರಮದಿಂದ ಒಂದು ಜೀವ ಉಳಿದಿದೆ.