ಮಂಡ್ಯ ನಗರವನ್ನು ಸ್ಮಾರ್ಟ್‌ ಸಿಟಿ ಯೋಜನೆಗೆ ಒಳಪಡಿಸಿ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದ ದಿನೇಶ್‌ ಗೂಳಿಗೌಡ ಹಾಗೂ ಮಧು ಜಿ.ಮಾದೇಗೌಡ.

ಮದ್ದೂರು(ಮಾ.11): ಮಾ.12 ರಂದು ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿಧಾನಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಹಾಗೂ ಮಧು ಜಿ.ಮಾದೇಗೌಡ ಮೋದಿ ಅವರಿಗೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪಟ್ಟಣದ ಶಿವಪುರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಂಡ್ಯ ನಗರವನ್ನು ಸ್ಮಾರ್ಟ್‌ ಸಿಟಿ ಯೋಜನೆಗೆ ಒಳಪಡಿಸಿ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.
ಮಂಡ್ಯ ನಗರದಲ್ಲಿ ಸುಮಾರು 1.52 ಲಕ್ಷ ಜನಸಂಖ್ಯೆ ಇದ್ದು, ಸಮರ್ಪಕವಾದ ರಸ್ತೆ, ಚರಂಡಿ, ಯುಜಿಡಿ ವ್ಯವಸ್ಥೆ ಇಲ್ಲ. ಸಮಪರ್ಕವಾದ ಕುಡಿಯುವ ನೀರಿನ ವ್ಯವಸ್ಥೆ, ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ, ಸೋಲಾರ್‌ ಬೀದಿ ದೀಪಗಳು ಹಾಗೂ ನಗರದಲ್ಲಿರುವ ಉದ್ಯಾನವನಗಳ ನಿರ್ವಹಣೆ ದೃಷ್ಟಿಯಿಂದ ಮಂಡ್ಯ ನಗರವನ್ನು ಸ್ಮಾರ್ಟ್‌ ಸಿಟಿ ಯೋಜನೆಗೆ ಒಳಪಡಿಸಬೇಕು. ಈ ಮೂಲಕ ಆರೋಗ್ಯ, ಶಿಕ್ಷಣ, ಕೃಷಿ, ಉದ್ದಿಮೆ, ಉದ್ಯೋಗ ಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

PARTY ROUNDS: ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಮಾತ್ರ, ಸೇರ್ಪಡೆ ಯಾಕಿಲ್ಲ?

ಮೈಸೂರು-ಬೆಂಗಳೂರು ನಡುವೆ ಬರುವ ಮಂಡ್ಯ ನಗರದ ಅಭಿವೃದ್ಧಿಗೆ ಸಹಕಾರಿಯಾಗುವಂತೆ ಹೊರವರ್ತುಲ ರಸ್ತೆ ನಿರ್ಮಾಣ ಮಾಡಬೇಕಿದೆ. ಜೊತೆಗೆ ಮಂಡ್ಯ ಮೆಡಿಕಲ್‌ ಕಾಲೇಜನ್ನು ದೆಹಲಿಯ ಏಮ್ಸ್‌ ಮಾದರಿಯಲ್ಲಿ ಮೇಲ್ದರ್ಜೆಗೇರಿಸಿ ಜಿಲ್ಲೆಯ 18 ಲಕ್ಷ ಜನರ ವೈದ್ಯಕೀಯ ಸೇವೆಗೆ ಆದ್ಯತೆ ನೀಡಬೇಕಿದೆ, ಮದ್ದೂರು ಬಳಿ ಟ್ರಾಮಾ ಕೇರ್‌ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಾಣ ಮಾಡಬೇಕಿದೆ ಎಂದು ಸಲಹೆ ನೀಡಿದ್ದಾರೆ.

ಜಿಲ್ಲೆಯ ಕೆ.ಆರ್‌.ಪೇಟೆ, ಪಾಂಡವಪುರ ಮತ್ತು ನಾಗಮಂಗಲ ತಾಲೂಕುಗಳಲ್ಲಿ ತೋಟಗಾರಿಕೆ ಬೆಳೆಗಳು, ತರಕಾರಿಗಳನ್ನು ಹೆಚ್ಚಾಗಿ ಬೆಳೆಯುತ್ತಾರೆ. ದರ ಕುಸಿತದ ಸಂದರ್ಭದಲ್ಲಿ ರೈತರಿಗೆ ತುಂಬಾ ನಷ್ಟಉಂಟಾಗುತ್ತಿದೆ. ಕೃಷಿ ಉತ್ಪನ್ನಗಳನ್ನು ಸಂರಕ್ಷಿಸಲು ಮೂರು ತಾಲೂಕುಗಳಲ್ಲೂ ಶೀತಲೀಕರಣ ಘಟಕಗಳನ್ನು ನಿರ್ಮಿಸಬೇಕು ಎಂದರು.

ಜಿಲ್ಲೆಯ ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕೆಂದ್ರೀಯ ವಿದ್ಯಾಲಯಗಳನ್ನು ಸ್ಥಾಪಿಸಬೇಕು. ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ಮಡಿಕೇರಿ, ರಾಮನಗರ ಜಿಲ್ಲೆಗಳು ಸೇರಿದಂತೆ ಸುತ್ತಮುತ್ತಲಿನ ಪ್ರದೇಶದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅನುಕೂಲ ಕಲ್ಪಿಸಲು ಐಐಟಿ ಸಂಸ್ಥೆಯನ್ನು ಸ್ಥಾಪಿಸಬೇಕು. ಜಿಲ್ಲೆಯಾದ್ಯಂತ ಕೃಷಿ ಆಧಾರಿತ ಉದ್ದಿಮೆಗಳನ್ನು ಪ್ರಾರಂಭಿಸಿ ಸ್ಥಳೀಯರಿಗೆ ಉದ್ಯೋಗವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ. ಗೋಷ್ಠಿಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ತಾಪಂ ಮಾಜಿ ಸದಸ್ಯ ಕೆ.ಆರ್‌.ಮಹೇಶ್‌ ಇದ್ದರು.