ಮಲ್ಪೆ ಬಂದರಿನಲ್ಲಿ ಮಹಿಳೆ ಮೇಲಿನ ಹಲ್ಲೆಯನ್ನು ಸಮರ್ಥಿಸಿಕೊಂಡು ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂಬ ಆರೋಪದ ಮೇಲೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಅವರ ಭಾಷಣದಲ್ಲಿ ಗಲಭೆ ಸೃಷ್ಟಿಸುವ ಯಾವುದೇ ಕ್ರಿಮಿನಲ್ ಅಂಶಗಳು ಮೇಲ್ನೋಟಕ್ಕೆ ಕಂಡುಬಂದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟು, ಸಂಪೂರ್ಣ ವಿಚಾರಣಾ ಪ್ರಕ್ರಿಯೆಯನ್ನು ವಜಾಗೊಳಿಸಿ ಆದೇಶಿಸಿದೆ.

ಬೆಂಗಳೂರು: ಉಡುಪಿಯ ಮಲ್ಪೆ ಬಂದರಿನಲ್ಲಿ ಕಳೆದ ವರ್ಷ ನಡೆದಿದ್ದ ಮಹಿಳೆ ಮೇಲಿನ ಹಲ್ಲೆ ಪ್ರಕರಣವನ್ನು ಸಮರ್ಥಿಸಿಕೊಂಡು ಪ್ರಚೋದನಾತ್ಮಕ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ (FIR) ಮತ್ತು ಜನಪ್ರತಿನಿಧಿಗಳ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಯನ್ನು ಕರ್ನಾಟಕ ಹೈಕೋರ್ಟ್ ಸಂಪೂರ್ಣವಾಗಿ ರದ್ದುಪಡಿಸಿ ಆದೇಶ ಹೊರಡಿಸಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಈ ಮಹತ್ವದ ತೀರ್ಪನ್ನು ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಏನಿದು ವಿವಾದಾತ್ಮಕ ಪ್ರಕರಣ? ಹಿನ್ನೆಲೆ ಇಲ್ಲಿದೆ

ಪ್ರಕರಣದ ವಿವರಗಳ ಪ್ರಕಾರ, 2025 ರ ಮಾರ್ಚ್ 18 ರಂದು ಉಡುಪಿಯ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ ಮಹಿಳೆಯೊಬ್ಬರನ್ನು ಸ್ಥಳೀಯರು ಮರಕ್ಕೆ ಕಟ್ಟಿಹಾಕಿ ಅಮಾನವೀಯವಾಗಿ ಹಲ್ಲೆ ನಡೆಸಿದ್ದರು. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಕಾರ್ಯಾಚರಣೆ ನಡೆಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಐವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ಘಟನೆಯಿಂದಾಗಿ ಮಲ್ಪೆ ಬಂದರು ಪ್ರದೇಶದಲ್ಲಿ ಉಂಟಾಗಿದ್ದ ಬಿಗುವಿನ ವಾತಾವರಣವನ್ನು ತಿಳಿಗೊಳಿಸಲು ಹಾಗೂ ಶಾಂತಿ ಮತ್ತು ಸೌಹಾರ್ದತೆಯನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಮಲ್ಪೆ ಮೀನುಗಾರರ ಸಂಘ ಮತ್ತು ಇತರ ಪ್ರಮುಖ ಮೀನುಗಾರಿಕಾ ಸಂಘಟನೆಗಳು 2025 ರ ಮಾರ್ಚ್ 22 ರಂದು ಮಲ್ಪೆ ಬಂದರಿನಲ್ಲಿ ಸಾರ್ವಜನಿಕ ಸಭೆಯೊಂದನ್ನು ಹಮ್ಮಿಕೊಂಡಿದ್ದವು.

ವಿವಾದ ಸೃಷ್ಟಿಸಿದ್ದ ಪ್ರಮೋದ್ ಮಧ್ವರಾಜ್ ಹೇಳಿಕೆ

ಈ ಸಭೆಯಲ್ಲಿ ಭಾಗವಹಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಸ್ಥಳೀಯ ಮೀನುಗಾರರ ಪರವಾಗಿ ಮಾತನಾಡುತ್ತಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. "ನಮ್ಮ ಮನೆಗೆ ಕಳ್ಳರು ಬಂದಾಗ, ಪೊಲೀಸರು ಬರುವುದಕ್ಕೆ 5-6 ಗಂಟೆ ತಡವಾದರೆ ನಾವು ಸುಮ್ಮನೆ ಕೂರಲು ಸಾಧ್ಯವೇ? ಆಗ ನಾವು ಏನು ಮಾಡುತ್ತೇವೆ? ಕಳ್ಳರನ್ನು ಕಟ್ಟಿ ಹಾಕಲೇಬೇಕು.‌ ಕಳ್ಳಿಗೆ ನಾವೇನು ಮಚ್ಚು ಅಥವಾ ಖಡ್ಗದಿಂದ ಹೊಡೆದೆವಾ? ಕೆನ್ನೆಗೆ ಎರಡು ಬಾರಿಸಲಾಗಿದೆ ಅಷ್ಟೇ" ಎಂದು ಹೇಳುವ ಮೂಲಕ ಹಲ್ಲೆಯ ಘಟನೆಯನ್ನು ಸಮರ್ಥಿಸಿಕೊಂಡಿದ್ದರು.

ಅಪರಾಧಕ್ಕೆ ಪ್ರೇರಣೆ ಎಂದು ದೂರು ನೀಡಿದ್ದ ಪಿಎಸ್‌ಐ

ಮಾಜಿ ಸಚಿವರ ಈ ಹೇಳಿಕೆಯು ಸಾರ್ವಜನಿಕವಾಗಿ ಮಹಿಳೆಗೆ ಕಟ್ಟಿಹಾಕಿ ಹೊಡೆದ ಕಾನೂನುಬಾಹಿರ ಕೃತ್ಯವನ್ನು ಸಮರ್ಥಿಸಿದಂತಾಗಿದೆ ಮತ್ತು ಇದು ಸಾರ್ವಜನಿಕರು ಮತ್ತಷ್ಟು ಅಪರಾಧ ಮಾಡಲು ಪ್ರೇರಣೆ ನೀಡುತ್ತದೆ ಎಂದು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿತ್ತು. ಸಮಾಜದಲ್ಲಿ ದ್ವೇಷ ಭಾವನೆ ಮೂಡಿಸಲು ಹಾಗೂ ದೊಂಬಿ ಸೃಷ್ಟಿಸಲು ಪ್ರಮೋದ್ ಮಧ್ವರಾಜ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಬಿ.ಕೆ. ರವಿ ಅವರು ಅಧಿಕೃತವಾಗಿ ದೂರು ದಾಖಲಿಸಿದ್ದರು.

ಈ ದೂರನ್ನು ಆಧರಿಸಿ ಮಲ್ಪೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 191(1) (ಅಕ್ರಮ ಕೂಟ ಸೇರುವುದು) ಮತ್ತು ಸೆಕ್ಷನ್ 192 (ಗಲಭೆ ಸೃಷ್ಟಿಸಲು ಪ್ರಚೋದನೆ) ಅಡಿಯಲ್ಲಿ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಹೈಕೋರ್ಟ್ ನೀಡಿದ ತೀರ್ಪಿನ ಸಾರಾಂಶ

ತಮ್ಮ ವಿರುದ್ಧ ದಾಖಲಾದ ರಾಜಕೀಯ ಪ್ರೇರಿತ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಪ್ರಮೋದ್ ಮಧ್ವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು, ಅರ್ಜಿದಾರರು ಸಾರ್ವಜನಿಕ ಸಭೆಯಲ್ಲಿ ನೀಡಿರುವ ಹೇಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಅದರಲ್ಲಿ ಗಲಭೆ ಸೃಷ್ಟಿಸಲು ಸಾರ್ವಜನಿಕರನ್ನು ಪ್ರಚೋದಿಸಿದ ಅಥವಾ ಅಕ್ರಮ ಕೂಟವನ್ನು ಮುನ್ನಡೆಸಿದ ಯಾವುದೇ ಕ್ರಿಮಿನಲ್ ಅಂಶಗಳು ಮೇಲ್ನೋಟಕ್ಕೆ ಕಂಡುಬರುತ್ತಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಮಾಜಿ ಸಚಿವರ ವಿರುದ್ಧದ ಎಫ್‌ಐಆರ್ ಮತ್ತು ಕೆಳ ನ್ಯಾಯಾಲಯದಲ್ಲಿದ್ದ ವಿಚಾರಣಾ ಪ್ರಕ್ರಿಯೆಯನ್ನು ರದ್ದುಗೊಳಿಸಿ ಅರ್ಜಿಯನ್ನು ಪುರಸ್ಕರಿಸಿದೆ.