ಮಂಗಳೂರಿನಲ್ಲಿ ಹೊಸ ಎಲೆಕ್ಟ್ರಿಕ್ ಆಟೋಗಳಿಗೆ ಅನುಮತಿ ನೀಡದಂತೆ ಆಟೋ ಚಾಲಕರ ಸಂಘ ಹೈಕೋರ್ಟ್ ಮೊರೆ ಹೋಗಿದೆ. ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸದ ಹಿನ್ನೆಲೆಯಲ್ಲಿ ನ್ಯಾಯಾಲಯವು ಮಧ್ಯಪ್ರವೇಶಿಸಿದೆ.

ಬೆಂಗಳೂರು: ಮಂಗಳೂರು ನಗರದಲ್ಲಿ ಹೊಸದಾಗಿ ಎಲೆಕ್ಟ್ರಿಕ್ ಆಟೋಗಳ ಕಾರ್ಯಾಚರಣೆಗೆ ಅನುಮತಿ ನೀಡದಂತೆ ಕೋರಿ ಮಂಗಳೂರು ಆಟೋರಿಕ್ಷಾ ಚಾಲಕರು ಹಾಗೂ ಮಾಲೀಕರ ಸಂಘ ಸಲ್ಲಿಸಿರುವ ಮನವಿಯನ್ನು ಎರಡು ವಾರಗಳಲ್ಲಿ ಕಾನೂನು ರೀತಿ ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಹೈಕೋರ್ಟ್‌ ನಿರ್ದೇಶಿಸಿದೆ. ತಮ್ಮ ಮನವಿ ಪತ್ರ ಪರಿಗಣಿಸದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕ್ರಮ ಆಕ್ಷೇಪಿಸಿ ಮಂಗಳೂರು ಆಟೋ ರಿಕ್ಷಾ ಚಾಲಕರ ಮತ್ತು ಮಾಲೀಕರ ಸಂಘ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರ ನ್ಯಾಯಪೀಠ, ಈ ಸೂಚನೆ ನೀಡಿ ಅರ್ಜಿ ಇತ್ಯರ್ಥಪಡಿಸಿದೆ.

Add Asianetnews Kannada as a Preferred SourcegooglePreferred

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರ್ಮಿಟ್‌ ಪಡೆಯದೆ ಎಲೆಕ್ಟ್ರಿಕ್ ಆಟೋರಿಕ್ಷಾ ವಾಹನಗಳು ಕಾರ್ಯ ನಿರ್ವಹಿಸುವುದಕ್ಕೆ ಅನುಮತಿ ನೀಡಿ 2024ರ ಜು.26ರಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಇದರಿಂದ ಮಂಗಳೂರಿನಲ್ಲಿ ಎಲೆಕ್ಟ್ರಿಕ್‌ ವಾಹನಗಳ ಸಂಖ್ಯೆ ಹೆಚ್ಚಾಗಿ, ಸಂಚಾರ ದಟ್ಟಣೆ ಉಂಟಾಗಿದೆ. ಈಗಾಗಲೇ ಕಾರ್ಯಾಚರಣೆಯಲ್ಲಿದ್ದ ಆಟೋ ರಿಕ್ಷಾಗಳಿಗೆ ನಿಲುಗಡೆಗೆ ಸ್ಥಳಾವಕಾಶದ ಕೊರತೆ ಎದುರಾಗಿದೆ. 2023ರಲ್ಲಿ 7,629ರಷ್ಟಿದ್ದ ಆಟೋರಿಕ್ಷಾಗಳ ಸಂಖ್ಯೆ ಜಿಲ್ಲಾಧಿಕಾರಿ ಆದೇಶದ ನಂತರ ಅಗತ್ಯ ಪ್ರಮಾಣಕ್ಕಿಂತ ಹತ್ತು ಪಟ್ಟು ಹೆಚ್ಚಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿತ್ತು.

2025ರ ಜು.9ರಂದು ಜಿಲ್ಲಾಧಿಕಾರಿಗೆ ಅರ್ಜಿದಾರರ ಸಂಘವು ಮನವಿ ಪತ್ರ ನೀಡಿ, ಹೊಸ ಎಲೆಕ್ಟ್ರಿಕ್‌ ಆಟೋ ರಿಕ್ಷಾಗಳು ಮಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಾಡಲು ಅನುಮತಿ ನೀಡಬಾರದು ಎಂದು ಕೋರಿತ್ತು. ಆದರೆ, ಈ ಮನವಿ ಪತ್ರ ಆಧರಿಸಿ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ತಮ್ಮ ಮನವಿ ಪತ್ರ ಪರಿಗಣಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸುವಂತೆ ಸಂಘ ಕೋರಿತ್ತು.