ಕನ್ನಡ ಭಾಷೆ ಕಲಿಸದೆ, ನಿಂತಲ್ಲಿ, ಕುಂತಲ್ಲಿ ದಂಡ ಹಾಕಿ ಇಂಗ್ಲಿಷ್ ಮಾತನಾಡುವ ಸಿಬಿಎಸ್‌ಇ ಶಾಲೆಗಳಿಗೆ ಮಂಗಳೂರು ಡಿಸಿ ಶಾಕ್ ಕೊಟ್ಟಿದ್ದಾರೆ. ಕನ್ನಡ ಕಲಿಸದ ಸಿಬಿಎಸ್‌ಇ ಶಾಲೆಗಳಿಗೆ ನೋಟಿಸ್ ಕಳುಹಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಮಂಗಳೂರು(ನ.29): ಕನ್ನಡ ಭಾಷೆ ಕಲಿಸದ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡ ಕಲಿಸದ ಸಿಬಿಎಸ್‌ಇ ಸಿಲಬಸ್‌ ಹೊಂದಿರುವ ಶಾಲೆಗಳಿಗೆ ನೋಟಿಸ್‌ ಜಾರಿ ಮಾಡಲು ಹೆಚ್ಚುವರಿ ಜಿಲ್ಲಾಧಿಕಾರಿ ರೂಪಾ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ್ದಾರೆ.

Add Asianetnews Kannada as a Preferred SourcegooglePreferred

ಸಿಬಿಎಸ್‌ಇ ಶಿಕ್ಷಣ ವ್ಯವಸ್ಥೆಯ ಶಾಲೆಗಳಲ್ಲಿ ಕನ್ನಡವನ್ನು ದ್ವಿತೀಯ ಭಾಷೆಯನ್ನಾಗಿ ಕಡ್ಡಾಯವಾಗಿ ಕಲಿಸಬೇಕಿದೆ. ಆದರೆ, ನಗರದ ಕೆಲವು ಸಿಬಿಎಸ್‌ಇ ಶಾಲೆಗಳಲ್ಲಿ ಕನ್ನಡವನ್ನು ತೃತೀಯ ಭಾಷೆಯನ್ನಾಗಿ ಕಲಿಸುತ್ತಿರುವ ಬಗ್ಗೆ ದೂರುಗಳು ಬಂದಿವೆ. ಈ ನಿಟ್ಟಿನಲ್ಲಿ ಇಂತಹ ಶಾಲೆಗಳಿಗೆ ಕೂಡಲೇ ನೋಟಿಸ್‌ ಜಾರಿ ಮಾಡುವಂತೆ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು. ಅಲ್ಲದೆ, ಕೂಡಲೇ ಜಿಲ್ಲೆಯ ಎಲ್ಲ ಸಿಬಿಎಸ್‌ಇ ಶಾಲೆಗಳಲ್ಲಿ ತಪಾಸಣೆ ನಡೆಸಿ ಪರಿಶೀಲಿಸಲು ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಖಾಸಗಿ ಬಸ್‌ಗಳಲ್ಲಿ ಈಗ ದಿಢೀರ್‌ ತಪಾಸಣೆ..! ಟಿಕೆಟ್ ಇಲ್ಲಾಂದ್ರೆ ಬೀಳುತ್ತೆ ದಂಡ

ಡಿಡಿಪಿಐ ವಾಲ್ಟರ್‌ ಡಿಮೆಲ್ಲೋ ಮಾತನಾಡಿ, ಸಿಬಿಎಸ್‌ಇ ಶಾಲೆಗಳಲ್ಲಿ ಕನ್ನಡ ಕಲಿಕೆ ಪರಿಶೀಲಿಸಲು ಈಗಾಗಲೇ ಇಲಾಖೆಯಲ್ಲಿ ಅಧಿಕಾರಿಗಳ ತಂಡ ರಚಿಸಲಾಗಿದ್ದು, ತಕ್ಷಣದಿಂದಲೇ ಕಾಯೋನ್ಮುಖವಾಗುಲಾಗುವುದು ಎಂದು ತಿಳಿಸಿದರು. ಕೇಂದ್ರೀಯ ವಿದ್ಯಾಲಯಗಳಲ್ಲಿ ಕನ್ನಡ ಕಲಿಸದೇ ಇರುವುದನ್ನು ಅವರು ಸಭೆಯ ಗಮನಕ್ಕೆ ತಂದರು. ಈ ಬಗ್ಗೆ ಜಿಲ್ಲಾಧಿಕಾರಿಗಳು ಕೇಂದ್ರೀಯ ವಿದ್ಯಾಲಯದ ಮುಂದಿನ ಸಭೆಯಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ರೂಪಾ ತಿಳಿಸಿದ್ದಾರೆ.

ಮಂಗಳೂರು: ಕಟೀಲು ಮೇಳ ಸಂಚಾಲಕರಿಗೆ ಡಿಸಿ ಪತ್ರ

ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಅನುಷ್ಠಾನ ಸಮಿತಿ ರಚಿಸಿ, ಆಗಿಂದಾಗ್ಗೆ ಕಚೇರಿಯಲ್ಲಿ ಪರಿಶೀಲಿಸಬೇಕು. ಸರ್ಕಾರಿ ವಾಹನಗಳ ನೋಂದಣಿ ಸಂಖ್ಯೆಯನ್ನು ಇಂಗ್ಲೀಷ್‌ ಲಿಪಿಯೊಂದಿಗೆ ಕನ್ನಡ ಲಿಪಿಯಲ್ಲಿಯೂ ನಮೂದಿಸಬೇಕು. ಕಚೇರಿಯ ಪ್ರಕಟಣೆ, ಸುತ್ತೋಲೆ ಹಾಗೂ ಕಾರ್ಯಸೂಚಿಗಳನ್ನು ಕನ್ನಡ ಭಾಷೆಯಲ್ಲಿಯೇ ಹೊರತರಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮುಂದಿನ ವಾರ ಜಿಲ್ಲೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಲಿದ್ದು, ಎಲ್ಲ ಇಲಾಖೆಯವರು ಈ ಬಗ್ಗೆ ಸಿದ್ಧತೆ ನಡೆಸಲು ಅವರು ಸೂಚಿಸಿದ್ದಾರೆ.

ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯಕ್‌, ನಗರಪಾಲಿಕೆ ಉಪ ಆಯುಕ್ತ ಸಂತೋಷ್‌ ಕುಮಾರ್‌ ಇದ್ದರು.