ಜಗತ್ತನ್ನೇ ತಲ್ಲಣಗೊಳಿಸಿದ್ದ ಕೋವಿಡ್‌ ವೈರಾಣು ರೂಪಾಂತರಗೊಂಡ ತಳಿಯಲ್ಲಿ ಮತ್ತೆ ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಗೋಚರಿಸಿದೆ. ಸಂಭಾವ್ಯ ಕೋವಿಡ್‌ ಅಲೆ ತಡೆಯಲು, ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸನ್ನದ್ಧರಾಗಿರಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್‌.ಲತಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ದೊಡ್ಡಬಳ್ಳಾಪುರ (ಡಿ.27) : ಜಗತ್ತನ್ನೇ ತಲ್ಲಣಗೊಳಿಸಿದ್ದ ಕೋವಿಡ್‌ ವೈರಾಣು ರೂಪಾಂತರಗೊಂಡ ತಳಿಯಲ್ಲಿ ಮತ್ತೆ ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಗೋಚರಿಸಿದೆ. ಸಂಭಾವ್ಯ ಕೋವಿಡ್‌ ಅಲೆ ತಡೆಯಲು, ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸನ್ನದ್ಧರಾಗಿರಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್‌.ಲತಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್‌ ಮುಂಜಾಗ್ರತಾ ಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Add Asianetnews Kannada as a Preferred SourcegooglePreferred

ಕೋವಿಡ್‌(Covid-19) ಸೋಂಕು ಹರಡುವಿಕೆ ಭೀತಿ ಹಿನ್ನೆಲೆ, ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆ(Government Hospitals)ಗಳಲ್ಲಿ ಜನರಿಗೆ ಉತ್ತಮ ಚಿಕಿತ್ಸೆ, ಔಷಧಿ ನೀಡಲು ಆರೋಗ್ಯ ಸೇವಾ ವ್ಯವಸ್ಥೆ ಸುಸ್ಥಿತಿಯಲ್ಲಿರಬೇಕು. ಪ್ರಸ್ತುತ ಜಗತ್ತಿನ ಕೆಲವು ದೇಶಗಳಲ್ಲಿ ಕಂಡು ಬರುತ್ತಿರುವ ಬಿಎಫ್‌7 ಹೆಸರಿನ ಕೋವಿಡ್‌ ರೂಪಾಂತರಿ ತಳಿಯ ಚಿಕಿತ್ಸೆಗೆ ಸಕಾಲದಲ್ಲಿ ವೈದ್ಯಕೀಯ ಸೇವೆಗಳ ತುರ್ತು ಅಗತ್ಯವಿದೆ ಎಂದರು.

ಬೆಂಗಳೂರು ಗ್ರಾಮಾಂತರ(Bengaluru rural) ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳು, ಐಸಿಯುಗಳು, ಆಕ್ಸಿನೇಟೆಡ್‌ ಬೆಡ್‌ಗಳು, ಲ್ಯಾಬೋರೇಟರಿಗಳು, ಮೇಕ್‌ಶಿಫ್ಟ್‌ ಆಸ್ಪತ್ರೆ, ಕೋವಿಡ್‌ ಕೇರ್‌ ಸೆಂಟರ್‌, ಆರೋಗ್ಯ ಪರಿಕರಗಳು ಹಾಗೂ ಅರೆವೈದ್ಯಕೀಯ ಸಿಬ್ಬಂದಿ ಮಾಹಿತಿ ಪಡೆದ ಜಿಲ್ಲಾಧಿಕಾರಿ, ಕೋವಿಡ್‌ ಅಲೆಗಳಲ್ಲಿ ತುರ್ತು ಚಿಕಿತ್ಸೆ ಹಾಗೂ ಉತ್ತಮ ಸೇವೆಗಾಗಿ ಸರ್ಕಾರ ಮತ್ತು ಖಾಸಗಿ ದಾನಿಗಳಿಂದ ಅನೇಕ ಚಿಕಿತ್ಸಾ, ಉಪಕರಣಗಳು, ಆಕ್ಸಿಜನ್‌ ಕಾನ್ಸಂಟ್ರೇಟರುಗಳು ಉತ್ತಮ ಸ್ಥಿತಿಯಲ್ಲಿವೆ. ಆಕ್ಸಿಜನ್‌ ಪ್ಲಾಂಟ್‌ಗಳ ನಿರ್ವಹಣೆಯು ಸುಸ್ಥಿತಿಯಲ್ಲಿದೆ. ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯು ಕೋವಿಡ್‌ ರೋಗವನ್ನು ಸಮರ್ಥವಾಗಿ ನಿಭಾಯಿಸಿ, ಸಾರ್ವಜನಿಕರಿಗೆ ಸಕಾಲಕ್ಕೆ ಉತ್ತಮ ಚಿಕಿತ್ಸೆ ನೀಡಲಿದೆ ಎಂದು ಹೇಳಿದರು.

ಕೊವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಆತಂಕ ಬೇಡ: ಸಿಎಂ ಬಸವರಾಜ ಬೊಮ್ಮಾಯಿ

ಜಿಲ್ಲೆಯಲ್ಲಿ ಕೋವಿಡ್‌ ಮೂಲ ಸೌಕರ್ಯ, ಮಾನವ ಸಂಪನ್ಮೂಲ ಲಭ್ಯತೆ, ಕೋವಿಡ್‌ 19 ಪ್ರಕರಣಗಳ ಸಮಯೋಚಿತ ನಿರ್ವಹಣೆಗಾಗಿ ಔಷಧಿಗಳು ಮತ್ತು ಲಾಜಿಸ್ಟಿಕ್ಸ್‌ ಸಿದ್ದತೆ ಮತ್ತು ಮೇಲ್ವಿಚಾರಣೆಯನ್ನು ನಿರಂತರವಾಗಿ ಪರಿಶೀಲಿಸಲಾಗುವುದು. ಸಿಬ್ಬಂದಿ, ಪರಿಕರಗಳ ಕೊರತೆ ಕಂಡುಬಂದರೆ ಕೂಡಲೆ ಆರೋಗ್ಯ ಇಲಾಖೆ ಆಯುಕ್ತರಿಗೆ, ಆರೋಗ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕೊರೋನಾ ಪರೀಕ್ಷೆ ನಡೆಸಿ, ಕೊರೋನಾ ಸೋಂಕಿತರು ಪತ್ತೆಯಾದರೆ ತಕ್ಷಣವೇ ಕ್ವಾರಂಟೈನ್‌ನಲ್ಲಿರಿಸಿ ಸೂಕ್ತ ಚಿಕಿತ್ಸೆ ನೀಡಬೇಕು ಹಾಗೂ ಬೂಸ್ಟರ್‌ ಡೋಸ್‌ ವ್ಯಾಕ್ಸಿನೇಷನ್‌ ಸರಬರಾಜುಗಳಿಗೆ ಅನುಗುಣವಾಗಿ ಲಸಿಕೆ ನೀಡಿಕೆ ಕಾರ್ಯವನ್ನು ವೇಗಗೋಳಿಸಬೇಕು ಎಂದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್‌-19ರ ಮುನ್ನೆಚ್ಚರಿಕಾ ಡೋಸ್‌ನ್ನು ಉಚಿತವಾಗಿ ನೀಡಲಾಗುತ್ತಿದೆ. ಎರಡನೇ ಡೋಸ್‌ ಪಡೆದು 6 ತಿಂಗಳು ಪೂರೈಸಿದ ಪಲಾನುಭವಿಗಳು ಮುನ್ನೆಚ್ಚರಿಕಾ ಡೋಸ್‌ನ್ನು ಪಡೆಯಬಹುದಾಗಿದೆ. ಕೋವಿಡ್‌-19 ನಿಯಂತ್ರಣದಲ್ಲಿಡಲು ಲಸಿಕೆಯನ್ನು ಹಾಕಿಸಿಕೊಳ್ಳುವುದು ಅತಿ ಅಗತ್ಯವಾಗಿರುವುದರಿಂದ ಜಿಲ್ಲೆಯ ಸಾರ್ವಜನಿಕರು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಲಸಿಕೆ ಹಾಕಿಸಿಕೊಳ್ಳುವಂತೆ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿಜೇಂದ್ರ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Doddaballapura: ಡಿಸಿ ಜೊತೆ ಕಾರ್ಯವೈಖರಿ ವೀಕ್ಷಣೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ ವಿದ್ಯಾಶ್ರೀ

ಕೋವಿಡ್‌ ಮಾರ್ಗಸೂಚಿ ಪಾಲಿಸಿ

ಕೋವಿಡ್‌-19ರ ಹೊಸ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರವು ಜಾರಿಗೊಳಿಸಿದ್ದು , ಸಾರ್ವಜನಿಕರು ಜನಸಂದಣಿ ಪ್ರದೇಶದಲ್ಲಿ ಕಡ್ಡಾಯವಾಗಿ ಫೇಸ್‌ ಮಾಸ್‌್ಕ ಧರಿಸಬೇಕು. ಸಾಮಾಜಿಕ ಅಂತರ, ಕೈ ನೈರ್ಮಲ್ಯ ಕಾಪಾಡುವಿಕೆ ಮುಂತಾದ ಕೋವಿಡ್‌ ನಿಯಂತ್ರಣ ಶಿಷ್ಟಾಚಾರ ಕ್ರಮಗಳನ್ನು ಪಾಲಿಸಬೇಕು. ಜ್ವರ, ಕೆಮ್ಮು, ನೆಗಡಿ, ದೇಹನೋವು, ತಲೆನೋವು, ರುಚಿ ಮತ್ತು ವಾಸನೆಯ ನಷ್ಟ, ಅತಿಸಾರ, ಉಸಿರಾಟದ ತೊಂದರೆ ಮುಂತಾದ ಲಕ್ಷಣಗಳು ಕಂಡು ಬಂದರೆ ಅವರು ತಕ್ಷಣ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.