ದಾವಣಗೆರೆಯ ಚನ್ನಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ ಕೆಲವೇ ನಿಮಿಷಗಳಲ್ಲಿ ಅನುಷಾ ಎಂಬ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಅವರ ಸಾವಿಗೆ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ.

ದಾವಣಗೆರೆ (ಫೆ.22): ಇಂಜೆಕ್ಷನ್ ಮಾಡಿಸಿಕೊಳ್ಳಲು ಆಸ್ಪತ್ರೆಗೆ ಹೋಗಿದ್ದ ಮಹಿಳೆಯೋರ್ವಳು ಇಂಜೆಕ್ಷನ್ ಪಡೆದ ಕೆಲವೇ ನಿಮಿಷಗಳಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚನ್ನಗಿರಿ ತಾಲೂಕಿನ ತಿಪ್ಪಗೊಂಡನಹಳ್ಳಿ ಮೂಲದ ಅನುಷಾ (35) ಮೃತಪಟ್ಟ ದುರ್ದೈವಿ. ಸಾಮಾನ್ಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ಮಹಿಳೆ ಏಕಾಏಕಿ ಪ್ರಾಣ ಕಳೆದುಕೊಂಡಿರುವುದು ಕುಟುಂಬಸ್ಥರನ್ನು ಆಘಾತಕ್ಕೀಡು ಮಾಡಿದೆ.

ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು

ಮೃತ ಅನುಷಾ ಕಳೆದ ಕೆಲವು ಸಮಯದಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ವೈದ್ಯರ ಸಲಹೆಯಂತೆ ಅವರು ಪ್ರತಿ ತಿಂಗಳು ನಿಯಮಿತವಾಗಿ ಇಂಜೆಕ್ಷನ್ ತೆಗೆದುಕೊಳ್ಳುತ್ತಿದ್ದರು. ಅದರಂತೆಯೇ ಇಂದು ಬೆಳಿಗ್ಗೆ ತಮ್ಮ ಸಹೋದರನ ಜೊತೆಗೆ ಚನ್ನಗಿರಿ ಸರ್ಕಾರಿ ಆಸ್ಪತ್ರೆಗೆ ಬಂದಿದ್ದರು. ಎಂದಿನಂತೆ ಇಂಜೆಕ್ಷನ್ ಪಡೆದ ಕೆಲವೇ ಸಮಯದೊಳಗೆ ನಾಲಿಗೆ ಕಚ್ಚಿಕೊಂಡು ಸ್ಥಳದಲ್ಲೇ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಆಸ್ಪತ್ರೆ ಸಿಬ್ಬಂದಿ ವಿರುದ್ಧ ಗಂಭೀರ ಆರೋಪ

ಅನುಷಾ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ಧಾವಿಸಿದ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಸರಿಯಾದ ತಪಾಸಣೆ ನಡೆಸದೆ ಇಂಜೆಕ್ಷನ್ ನೀಡಿದ್ದರಿಂದಲೇ ಪ್ರಾಣ ಹೋಗಿದೆ ಎಂದು ಸಂಬಂಧಿಕರು ಕಿಡಿಕಾರಿದ್ದಾರೆ.

ಆಸ್ಪತ್ರೆ ಮುಂದೆ ಪ್ರತಿಭಟನೆ

ಘಟನೆಯಿಂದ ಆಕ್ರೋಶಗೊಂಡ ಮೃತರ ಕುಟುಂಬಸ್ಥರು ಚನ್ನಗಿರಿ ಸರ್ಕಾರಿ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಿದರು. ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ,ನ್ಯಾಯಕ್ಕಾಗಿ ಆಗ್ರಹಿಸಿದರು.

YouTube video player