ಸಿದ್ದರಾಮಯ್ಯ ಹುಚ್ಚರಂತೆ ಹೇಳಿಕೆ ನೀಡುತ್ತಿದ್ದಾರೆ: ಈಶ್ವರಪ್ಪ
ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಿ ಬಂದವರು. ಅದಕ್ಕಾಗಿ ಅವರ ಕಣ್ಣಿಗೆ ಎಲ್ಲವೂ ಹಳದಿಯಾಗಿಯೇ ಕಾಣುತ್ತದೆ| ಬೆಳಗಾವಿಯ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ. ಅದನ್ನು ಮನಗಂಡು ಅವರು ಏನೇನೋ ಮಾತನಾಡುತ್ತಿದ್ದಾರೆ: ಈಶ್ವರಪ್ಪ|
ಧಾರವಾಡ(ಏ.13): ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದವರು. ಮತ್ತೆ ಮುಖ್ಯಮಂತ್ರಿಯಾಗುವ ಆಸೆಯಿಂದ ಹುಚ್ಚರ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಾಪಾರ ಮಾಡುವವರ ಮನೆಯಲ್ಲಿ ನೋಟು ಕೌಂಟಿಂಗ್ ಮಷಿನ್ ಇಟ್ಟುಕೊಳ್ಳುವುದರಲ್ಲಿ ತಪ್ಪೇನಿದೆ. ಆದರೆ, ನೋಟು ಪ್ರಿಂಟ್ ಮಾಡುವ ಮಷಿನ್ ಹೊಂದಿಲ್ಲವಲ್ಲ ? ಎಂದು ವ್ಯಂಗ್ಯವಾಡಿದ್ದಾರೆ.
ಶೀಘ್ರ ರಾಜ್ಯದ ನಾಯಕತ್ವ ಬದಲಾವಣೆ : ಯಾರಿಗೆ ಸಿಎಂ ಪಟ್ಟ..?
ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ಮಾಡಿ ಬಂದವರು. ಅದಕ್ಕಾಗಿ ಅವರ ಕಣ್ಣಿಗೆ ಎಲ್ಲವೂ ಹಳದಿಯಾಗಿಯೇ ಕಾಣುತ್ತದೆ. ಬೆಳಗಾವಿಯ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ. ಅದನ್ನು ಮನಗಂಡು ಅವರು ಏನೇನೋ ಮಾತನಾಡುತ್ತಿದ್ದಾರೆ ಎಂದರು.
ಅನುದಾನ ಹಂಚಿಕೆ ಅಸಮಾಧಾನ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಎಲ್ಲವೂ ಸರಿಯಾಗುತ್ತದೆ. ಜತೆಗೆ ಈ ವಿಷಯ ಮುಗಿದು ಹೋಗಿದೆ ಎಂದರು. ಬಾಲಚಂದ್ರ ಜಾರಕಿಹೊಳಿ ಪ್ರಚಾರಕ್ಕೆ ಬಂದಿದ್ದಾರೆ. ರಮೇಶ ಎರಡು ದಿನಗಳಲ್ಲಿ ಪ್ರಚಾರಕ್ಕೆ ಬರುತ್ತಾರೆ ಎಂದರು. ಸಿಡಿ ವಿಚಾರಕ್ಕೆ ಪ್ರತಿಕ್ರಿಯೆ ನೀಡುತ್ತ, ಸಿಡಿ ವಿಚಾರದ ಬಗೆಗೆ ಏನನ್ನೂ ಕೇಳಬೇಡಿ. ಆ ವಿಷಯವೇ ಅಸಹ್ಯ ಹುಟ್ಟಿಸುತ್ತದೆ. ಅದರ ಬಗ್ಗೆ ನಾನು ಎಲ್ಲಿಯೂ ಪ್ರತಿಕ್ರಿಯೆ ನೀಡಿಲ್ಲ ಎಂದು ಸುಮ್ಮನಾದರು.