ಶಿಕ್ಷಣ, ವೈದ್ಯಕೀಯ ಕ್ಷೇತ್ರಗಳಲ್ಲಿ ಸುತ್ತೂರು ಮತ್ತು ಆದಿಚುಂಚನಗಿರಿ ಮಠಗಳ ಕೊಡುಗೆ ಅಪಾರವಾಗಿದೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಶನಿವಾರ ಹೇಳಿದರು. 

ಮದ್ದೂರು (ಜು.23): ಶಿಕ್ಷಣ, ವೈದ್ಯಕೀಯ ಕ್ಷೇತ್ರಗಳಲ್ಲಿ ಸುತ್ತೂರು ಮತ್ತು ಆದಿಚುಂಚನಗಿರಿ ಮಠಗಳ ಕೊಡುಗೆ ಅಪಾರವಾಗಿದೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಶನಿವಾರ ಹೇಳಿದರು. ಪಟ್ಟಣದ ಎಚ್‌.ಕೆ.ವೀರಣ್ಣಗೌಡ ಕಾಲೇಜಿನಲ್ಲಿ ನೂತನ ಸಚಿವರು ಹಾಗೂ ಶಾಸಕರಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೆಎಸ್‌ಎಸ್‌ ಹಾಗೂ ಆದಿಚುಂಚನಗಿರಿ ಮಠಗಳು ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಎರಡು ಕಣ್ಣುಗಳಿದ್ದಂತೆ. ಈ ಮಠಗಳು ಶಾಲಾ ಕಾಲೇಜು ಮತ್ತು ವೈದ್ಯಕೀಯ ಕ್ಷೇತ್ರಗಳಲ್ಲಿ ಬೆಳೆಯದಿದ್ದರೆ ಜನಸಾಮಾನ್ಯರ ಪರಿಸ್ಥಿತಿ ಊಹೆ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದರು.

Add Asianetnews Kannada as a Preferred SourcegooglePreferred

ರಾಜ್ಯದಲ್ಲಿ ಅನೇಕ ಮಠ-ಮಾನ್ಯಗಳು ಶಿಕ್ಷಣ ಸಂಸ್ಥೆ ಮತ್ತು ಆಸ್ಪತ್ರೆಗಳನ್ನು ತೆರೆದು ಗುಣಮಟ್ಟದ ಶಿಕ್ಷಣ, ಸೇವೆಗಳನ್ನು ನೀಡುತ್ತಿದೆ. ಇದೇ ರೀತಿ ಆದಿಚುಂಚನಗಿರಿ ಮತ್ತು ಸುತ್ತೂರು ಮಠಗಳು ಜನಸಾಮಾನ್ಯರಿಗೆ ಆರ್ಥಿಕವಾಗಿ ಹೊರೆ ಬೀಳದೆ ಸೇವೆ ನೀಡುತ್ತಿವೆ ಎಂದರು. ಎಚ್‌.ಕೆ.ವೀರಣ್ಣಗೌಡರು ಗ್ರಾಮೀಣ ಭಾಗದಲ್ಲಿ ವಿದ್ಯಾಸಂಸ್ಥೆ ಆರಂಭಿಸಿ ಶಿಕ್ಷಣ ಸೇವೆ ಮಾಡಿದ್ದಾರೆ. ಗ್ರಾಮೀಣ ಮಕ್ಕಳಿಗೆ ವಿದ್ಯೆ ನೀಡುವ ಮೂಲಕ ಶಿಕ್ಷಣ ಕ್ರಾಂತಿಯನ್ನೇ ಮಾಡಿದ್ದಾರೆ. ಇದೇ ರೀತಿ ಸಂಸ್ಥೆಯನ್ನು ಮುನ್ನಡೆಸಿ ಲಕ್ಷಾಂತರ ಮಕ್ಕಳಿಗೆ ಪ್ರಸ್ತುತ ನಡೆಸುತ್ತಿರುವ ಆಡಳಿತ ಮಂಡಳಿ ವಿದ್ಯಾದಾನ ನೀಡಬೇಕು ಎಂದರು.

ಕುಂದಾಪುರ ಠಾಣಾ ವ್ಯಾಪ್ತಿಯಲ್ಲಿ ಮಕ್ಕಳ ಕಳ್ಳರ ವದಂತಿ: ಪೊಲೀಸ್ ಇಲಾಖೆ ಸ್ಪಷ್ಟನೆ

ಕಾರ್ಯಕ್ರಮದಲ್ಲಿ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ, ರಾಣಿಬೆನ್ನೂರು ಶಾಸಕ ಪ್ರಕಾಶ್‌ ಕೆ.ಕೋಳಿವಾಡ, ಅತ್ಯುತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಕೆ.ಟಿ.ಶ್ರೀಕಂಠೇಗೌಡ ಅವರನ್ನು ಅಭಿನಂದಿಸಲಾಯಿತು. ಸುತ್ತೂರುಮಠ ಪೀಠಾಧ್ಯಕ್ಷ ಶ್ರೀಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಎಂ.ಎಚ್‌.ಚನ್ನೇಗೌಡ ವಿದ್ಯಾಸಂಸ್ಥೆ ಅಧ್ಯಕ್ಷ ಎಂ.ಸ್ವರೂಪ್‌ ಚಂದ್‌ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಕೆ.ಟಿ.ಚಂದು, ಕಾರ್ಯದರ್ಶಿ ಸಿ.ಅಪೂರ್ವಚಂದ್ರ, ಶಾಂತಾ ಚಂದು, ಪ್ರಾಂಶುಪಾಲರಾದ ಶಂಕರೇಗೌಡ, ಯು.ಎಸ್‌.ಶಿವಕುಮಾರ್‌, ಸಹ ಪ್ರಾಧ್ಯಾಪಕ ಪ್ರಕಾಶ್‌, ಪ್ರಾಧ್ಯಾಪಕ ವರ್ಗದವರು ಇದ್ದರು.

ಮಕ್ಕಳೇ ವಿದ್ಯೆ ಜತೆ ವಿನಯ, ಗುಣವಿರಲಿ: ಆದಿ ಚುಂಚನಗಿರಿಯಂತಹ ಧಾರ್ಮಿಕ ಕ್ಷೇತ್ರದ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರ ಮಕ್ಕಳಿಗೆ ವಿದ್ಯೆ ಜೊತೆಗೆ ಸಂಸ್ಕಾರವೂ ಸಿಗಲು ಸಾಧ್ಯ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು. ಪಟ್ಟಣದ ಆದಿಚುಂಚನಗಿರಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಉದ್ಘಾಟಿಸಿ, ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜೊತೆಗೆ ಒಳ್ಳೆಯ ವಿನಯ ಮತ್ತು ಗುಣವಿರಬೇಕು. ಸಹಪಾಠಿಗಳೊಂದಿಗೆ ಬೆಳೆಯುತ್ತಿರುವ ನೀವು ಕುಟುಂಬಕ್ಕೆ ಸಮಾಜಕ್ಕೆ ಹಾಗೂ ರಾಷ್ಟ್ರಕ್ಕೆ ಕೃತಜ್ಞತೆ ಸಲ್ಲಿಸುವಂತಾಗಬೇಕು ಎಂದರು.

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಸಿಕ್ಕರೆ ಕುಟುಂಬ ನಿರ್ವಹಣೆ, ಸಾರ್ವಜನಿಕರ ನಡುವೆ ಅಥವಾ ಯಾವುದೇ ವೃತ್ತಿ ನಿರ್ವಹಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಜ್ಞಾನವನ್ನು ವೃದ್ಧಿಸಿಕೊಳ್ಳಬಹುದು. ಅಲ್ಲದೇ, ಉತ್ತಮ ಸಾಧನೆ ಮಾಡಿ ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದರು. ಭೈರವೈಕ್ಯ ಬಾಲಗಂಗಾಧರನಾಥಶ್ರೀಗಳ ದೂರದೃಷ್ಟಿಯಿಂದಾಗಿ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿರುವಂತಹ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳು ತಾಲೂಕಿನಲ್ಲಿ ಸ್ಥಾಪಿತಗೊಂಡಿರುವುದು ನಮ್ಮೆಲ್ಲರ ಸೌಭಾಗ್ಯವೇ ಸರಿ. ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಅವಿರತವಾಗಿ ಹೋರಾಟ ನಡೆಸಿ ಗ್ರಾಮೀಣ ಪ್ರದೇಶದ ಜನರಿಗೆ ಮತ್ತು ವಿದ್ಯಾರ್ಥಿಗಳಿಗೆ ಬಹಳಷ್ಟುಅನುಕೂಲ ಮಾಡಿಕೊಟ್ಟಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಸಪೋರ್ಟ್ ಇದೆ: ಸಚಿವ ಆರ್.ಬಿ.ತಿಮ್ಮಾಪುರ

ಅಂತಾರಾಷ್ಟ್ರೀಯ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್‌ ಮಾತನಾಡಿ, ಕ್ರೀಡೆ ದೇಹದ ಬೆಳವಣಿಗೆಗೆ ಕಾರಣವಾದರೆ ಬುದ್ಧಿ ಬೆಳವಣಿಗೆಗೆ ಶಿಕ್ಷಣಕ್ಕೆ ಕಾರಣವಾಗುತ್ತದೆ. ಇದರ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಸಹಕಾರಿ ಎಂದರು. ನಮ್ಮ ಭಾವನೆಗಳು ವಿಕಸನಗೊಳ್ಳಲು ಸಾಂಸ್ಕೃತಿಕ ಸಂಗತಿಗಳನ್ನು ನಾವು ಅಳವಡಿಸಿಕೊಳ್ಳಬೇಕು. ಶ್ರೀಮಠದ ಶಿಕ್ಷಣ ಸಂಸ್ಥೆಗಳು ಉನ್ನತ ಸ್ಥಾನದಲ್ಲಿವೆ ಎಂದರೆ ಅದಕ್ಕೆ ವಿದ್ಯಾರ್ಥಿಗಳೇ ಪ್ರಮುಖ ಕಾರಣಕರ್ತರು. ಈ ಕಾಲೇಜಿನ ವಿದ್ಯಾರ್ಥಿಗಳಲ್ಲಿನ ಶಿಸ್ತು ಮತ್ತು ಸಂಯಮ ನನಗೆ ಬಹಳ ಖುಷಿ ತಂದಿದೆ ಎಂದರು.