Asianet Suvarna News Asianet Suvarna News

ವಿಜಯಪುರ: ಸಾಂಸ್ಥಿಕ ಕ್ವಾರಂಟೈನ್‌ಲ್ಲಿ ಲೋಪವಾಗದಿರಲಿ, ಸಚಿವೆ ಜೊಲ್ಲೆ

ವಿವಿಧ ರಾಜ್ಯಗಳಿಂದ ಬಂದಿರುವ ವಲಸಿಗ ಜನರಿಗೆ ಸಾಂಸ್ಥಿಕ ಕ್ವಾರಂಟೈನ್‌ ವ್ಯವಸ್ಥೆ| ಆಯಾ ತಾಲೂಕು ಮತ್ತು ಗ್ರಾಮಾಂತರ ಪ್ರದೇಶದ ಅಧಿಕಾರಿಗಳು ಯಾವುದೇ ಲೋಪಕ್ಕೆ ಅವಕಾಶ ನೀಡದೆ ವ್ಯವಸ್ಥಿತವಾಗಿ ನಿರ್ವಹಿಸಬೇಕು| ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ|

Minister Shashikala Jolle Talks Over Institutional Quarantine in Vijayapura
Author
Bengaluru, First Published May 28, 2020, 1:22 PM IST

ವಿಜಯಪುರ(ಮೇ.28): ಗ್ರಾಮೀಣ ಪ್ರದೇಶದಲ್ಲಿ ಮಾಡಲಾಗಿರುವ ಸಾಂಸ್ಥಿಕ ಕ್ವಾರಂಟೈನ್‌ ವ್ಯವಸ್ಥೆಯನ್ನು, ವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಬುಧವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕೋವಿಡ್‌-19 ಮುನ್ನೆಚ್ಚರಿಕಾ ಕ್ರಮಗಳು ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ವಿವಿಧ ರಾಜ್ಯಗಳಿಂದ ಬಂದಿರುವ ವಲಸಿಗ ಜನರಿಗೆ ಸಾಂಸ್ಥಿಕ ಕ್ವಾರಂಟೈನ್‌ ವ್ಯವಸ್ಥೆ ಉತ್ತಮವಾಗಿ ನಿರ್ವಹಿಸುವ ಜೊತೆಗೆ ಆಯಾ ತಾಲೂಕು ಮತ್ತು ಗ್ರಾಮಾಂತರ ಪ್ರದೇಶದ ಅಧಿಕಾರಿಗಳು ಯಾವುದೇ ಲೋಪಕ್ಕೆ ಅವಕಾಶ ನೀಡದೆ ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಕೋವಿಡ್‌-19 ಹಿನ್ನೆಲೆಯಲ್ಲಿ ಜನರು ತೀವ್ರ ಸಂಕಷ್ಟದಲ್ಲಿದ್ದು ಕ್ವಾರಂಟೈನ್‌ ಕೇಂದ್ರಗಳಲ್ಲಿ ಊಟೋಪಹಾರದ ವ್ಯವಸ್ಥೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಆಯಾ ತಹಸೀಲ್ದಾರರು, ತಾಲೂಕಾ ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕಂದಾಯ ಮತ್ತು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಅವಶ್ಯಕತೆ ಇರುವ ಕಡೆಗಳಲ್ಲಿ ಪಡಿತರ ಧಾನ್ಯಗಳನ್ನು ಸಮರ್ಪಕವಾಗಿ ಮತ್ತು ನ್ಯಾಯಬದ್ಧವಾಗಿ ದೊರೆಯುವಂತೆ ನೋಡಿಕೊಳ್ಳಲು ಅವರು ಸೂಚನೆ ನೀಡಿದರು.

ಒಂದೆಡೆ ಕೊರೋನಾ ಕೇಕೆ, ಮತ್ತೊಂದೆಡೆ ರಣ ಬಿಸಿಲು: ಹಳೇ ದಾಖಲೆ ಉಡೀಸ್ ...!

ಸಭೆಯಲ್ಲಿ ಪ್ರಸ್ತಾಪ:

ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ, ಇತ್ತೀಚೆಗೆ ಆಲಿಕಲ್ಲು ಮಳೆಯಿಂದ ಹಾನಿಗೊಳಗಾದ ತೋಟಗಾರಿಕೆ ಮತ್ತು ಕೃಷಿ ಬೆಳೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಕುರಿತು ಶೀಘ್ರದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ತಿಳಿಸಿದರು. ಮಹಾರಾಷ್ಟ್ರಕ್ಕೆ ಪತ್ರದ ಮೂಲಕವೂ ಮನವಿ ಮಾಡುವುದಾಗಿಯೂ ಅವರು ಶಾಸಕ ಯಶವಂತರಾಯಗೌಡ ಅವರ ಸಲಹೆ ಮೇರೆಗೆ ಸಭೆಗೆ ತಿಳಿಸಿದರು.
ಕೋವಿಡ್‌-19 ಸಂಕಷ್ಟದ ಪರಿಸ್ಥಿತಿಯಲ್ಲಿ ಕೆಲವು ಕಾನೂನು ಉಲ್ಲಂಘನೆ ಪ್ರಕರಣಗಳ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲೆಯ ನದಿಪಾತ್ರದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.

ಆಲಮಟ್ಟಿ ಜಲಾಶಯ ಮೂಲಕ ಮತ್ತು ಇತರೆ ಜಲ ಸಂಪನ್ಮೂಲಗಳ ಮೂಲಕ ಕಾಲುವೆ ಮೂಲಕ ನೀರು ಸಮರ್ಪಕವಾಗಿ ಪೂರೈಸುವ ಕುರಿತು ಪ್ರತ್ಯೇಕ ಸಭೆಯನ್ನು ನಡೆಸಿ, ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ನಗರ ಮತ್ತು ಪಟ್ಟಣ ವ್ಯಾಪ್ತಿಯಲ್ಲಿ ಜಾರಿಯಾಗಿರುವ 24ಗಿ7 ಕುಡಿಯುವ ನೀರಿನ ಯೋಜನೆಯ ಸಮರ್ಪಕ ಅನುಷ್ಠಾನ ಮತ್ತು ನಿಗದಿತ ಸಮಯಕ್ಕೆ ನೀರು ಬಿಡುವ ಬಗ್ಗೆ ಸಮಯ ನಿಗದಿಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಇಂಡಿ, ಸಿಂದಗಿ ಸೇರಿದಂತೆ ವಿವಿಧ ಭಾಗಗಳಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳ ಬಗ್ಗೆ ರೈತರಿಗೆ ಪರಿಹಾರ ಒದಗಿಸುವ ಬಗ್ಗೆ ಸಮೀಕ್ಷೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಯಾವುದೇ ರೀತಿಯ ಪ್ರಮುಖ ಘಟನೆಗಳು ನಡೆದಲ್ಲಿ ಈ ಕುರಿತು ಆಯಾ ಸಂಬಂಧಪಟ್ಟಇಲಾಖೆ ಅಧಿಕಾರಿಗಳು ತಮ್ಮ ಗಮನಕ್ಕೆ ತರುವಂತೆ ತಿಳಿಸಿದ ಸಚಿವರು, ಕೋವಿಡ್‌-19 ಚಿಕಿತ್ಸಾ ವಿಧಾನ, ಸ್ಥಿತಿಗತಿ, ಕುಡಿಯುವ ನೀರಿನ ವ್ಯವಸ್ಥೆ, ತೋಟಗಾರಿಕಾ, ಕೃಷಿ ಬೆಳೆಗಳ ಹಾನಿ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಎಪಿಎಂಸಿ, ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, ಆಹಾರ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಈವರೆಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

ನಿನ್ನೆ 3 ಪಾಸಿಟಿವ್‌ ಕೇಸ್‌ ದೃಢ

ಜಿಲ್ಲೆಯಲ್ಲಿ ಬುಧವಾರ ಮತ್ತೆ ಮೂವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 40 ವರ್ಷದ ಪುರುಷ ರೋಗಿ ಸಂಖ್ಯೆ 2337, 29 ವರ್ಷದ ಪುರುಷ ರೋಗಿ ಸಂಖ್ಯೆ 2342 ಹಾಗೂ 16 ವರ್ಷದ ಬಾಲಕಿ 2411 ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂವರು ಮಹಾರಾಷ್ಟ್ರದಿಂದ ವಿಜಯಪುರಕ್ಕೆ ಬಂದವರಾಗಿದ್ದಾರೆ ಎಂದರು.

ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರೆ ಪ್ರದೇಶಗಳಿಂದ 27,383 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಒಟ್ಟು 79 ಕೋವಿಡ್‌ -19 ಪಾಸಿಟಿವ್‌ ಪ್ರಕರಣಗಳು ದೃಢಪಟ್ಟಿವೆ. 1925 ಜನರು 28 ದಿನಗಳ ಐಸೋಲೇಶನ್‌ ಅವಧಿ ಪೂರ್ಣಗೊಳಿಸಿದ್ದಾರೆ. 25410 ಜನರು (1 ರಿಂದ 28 ದಿನಗಳ) ರಿರ್ಪೋಟಿಂಗ್‌ ಅವಧಿಯಲ್ಲಿದ್ದು, ಈವರೆಗೆ ಒಟ್ಟು 4 ಜನ ಕೋವಿಡ್‌-19 ರೋಗಿಗಳು ಮೃತಪಟ್ಟಿದ್ದಾರೆ. 44 ಜನರು ಕೋವಿಡ್‌-19 ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 28 ಜನರು ಆಸ್ಪತ್ರೆಯಲ್ಲಿರುವ ಕೋವಿಡ್‌-19 ಸಕ್ರಿಯ ರೋಗಿಗಳಾಗಿದ್ದಾರೆ. ಈವರೆಗೆ 18,233 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 9,856 ಜನರ ನೆಗೆಟಿವ್‌ ವರದಿ ಬಂದಿದೆ. ಇನ್ನೂ 8298 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಅವರು ತಿಳಿಸಿದರು.

11 ಗ್ರಾಮಗಳಿಗೆ ಟ್ಯಾಂಕರ್‌ ನೀರು

ಜಿಲ್ಲಾ ಪಂಚಾಯತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಸದ್ಯ ಜಿಲ್ಲೆಯಲ್ಲಿ ಕೇವಲ 11 ಗ್ರಾಮಗಳಿಗೆ 35 ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಕಳೆದ ಬಾರಿ ಇದೇ ಅವಧಿಯಲ್ಲಿ 122 ಗ್ರಾಮಗಳಿಗೆ 2 ಸಾವಿರ ಟ್ಯಾಂಕರಗಳ ಮೂಲಕ ನೀರು ಪೂರೈಸಲಾಗಿತ್ತು. ಸದ್ಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮತ್ತು ಏತ ನೀರಾವರಿ ಯೋಜನೆಗಳ ಮೂಲಕ 16 ಕೆರೆಗಳನ್ನು ತುಂಬಿರುವ ಫಲವಾಗಿ 296 ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ನಿಂತಿದ್ದು, ಜೂನ್‌ 15 ರವರೆಗೆ ನೀರಿನ ಯಾವುದೇ ಕೊರತೆಯಿಲ್ಲ ಎಂದು ಹೇಳಿದರು.

ಸಭೆಯಲ್ಲಿ ಶಾಸಕರಾದ ಯಶವಂತರಾಯಗೌಡ ಪಾಟೀಲ, ಎಮ್‌.ಸಿ ಮನಗೂಳಿ ಅವರು ಇಂಡಿ ಮತ್ತು ಸಿಂದಗಿ ಭಾಗದಲ್ಲಿನ ಸಮಸ್ಯೆಗಳ ಬಗ್ಗೆ ಸಚಿವರ ಗಮನಕ್ಕೆ ತಂದರು. ಜಿಲ್ಲಾಧಿಕಾರಿ ವೈ.ಎಸ್‌ ಪಾಟೀಲ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ ಅಗರವಾಲ್‌, ಜಿ.ಪಂ. ಸಿಇಒ ಗೋವಿಂದ ರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
 

Follow Us:
Download App:
  • android
  • ios