Asianet Suvarna News Asianet Suvarna News

Chamarajanagar: ಕೆರೆಗೆ ನೀರು ತುಂಬಿಸುವ ಯೋಜನೆಗೆ ಸಚಿವ ಸೋಮಣ್ಣ ಸೂಚನೆ

ಜಿಲ್ಲೆಯ ಅಭಿವೃದ್ಧಿ ಉದ್ದೇಶದಿಂದ ಕೆರೆಗಳಿಗೆ ನೀರು ತುಂಬಿಸುವ ಸಮಗ್ರ ನೂತನ ಯೋಜನೆಯನ್ನು ಎರಡು ಹಂತಗಳಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಅಗತ್ಯ ಪ್ರಕ್ರಿಯೆ ಕೈಗೊಳ್ಳುವಂತೆ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು. 

Minister V Somanna instructed for the project of filling the lake with water At Chamarajanagar gvd
Author
First Published Nov 5, 2022, 8:52 PM IST

ಚಾಮರಾಜನಗರ (ನ.05): ಜಿಲ್ಲೆಯ ಅಭಿವೃದ್ಧಿ ಉದ್ದೇಶದಿಂದ ಕೆರೆಗಳಿಗೆ ನೀರು ತುಂಬಿಸುವ ಸಮಗ್ರ ನೂತನ ಯೋಜನೆಯನ್ನು ಎರಡು ಹಂತಗಳಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಅಗತ್ಯ ಪ್ರಕ್ರಿಯೆ ಕೈಗೊಳ್ಳುವಂತೆ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ವಿಧಾನಸೌಧದ 3ನೇ ಮಹಡಿಯ ಸಮಿತಿ ಸಭಾಂಗಣದಲ್ಲಿ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆಗಳ ಸಂಬಂಧ ನಡೆದ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಕೆರೆಗಳಿಗೆ ನೀರು ತುಂಬಿಸುವ ಒಟ್ಟು 7 ಯೋಜನೆಗಳ ಪೈಕಿ 3 ಯೋಜನೆಗಳಿಗೆ 745 ಕೋಟಿ ರು. ಅಂದಾಜು ಮೊತ್ತಗಳಾಗಿವೆ. ಯೋಜನೆಗೆ ಈಗಾಗಲೇ ಅಂದಾಜು ಪರಿಶೀಲನಾ ಸಭೆಯಲ್ಲಿ ಮಂಡಿಸಿ ತೆರವು ಪಡೆಯಲಾಗಿದೆ. ಉಳಿದ 4 ಯೋಜನೆಗಳಿಗೆ ಹೊಸದಾಗಿ ಒಟ್ಟು 749 ಕೋಟಿ ರೂ. ವೆಚ್ಚದ ಅಂದಾಜು ಮೊತ್ತದ ಲೈನ್‌ ಡಿಪಿಆರ್‌ ಆಗಿದೆ. ಇದಕ್ಕೆ ವಿಸ್ತೃತ ಯೋಜನೆ ವರದಿಯನ್ನು ಅಂತಿಮಗೊಳಿಸಬೇಕು ಎಂದು ತಿಳಿಸಿದರು. ಜಿಲ್ಲೆಯ ಸವಾಂರ್‍ಗೀಣ ಪ್ರಗತಿ ದೃಷ್ಟಿಯಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳ ಅನುಷ್ಠಾನ ತೀರಾ ಅಗತ್ಯವಾಗಿದೆ. ಯೋಜನೆಯ ಜಾರಿ ತುರ್ತಾಗಿ ಆಗಬೇಕಿದೆ.

ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲ್ಲುವ ಅವಕಾಶ: ನಳಿನ್‌ ಕುಮಾರ್‌ ಕಟೀಲ್‌

ಆರ್ಥಿಕ ಇಲಾಖೆ ಅನುಮೋದನೆ, ಟೆಂಡರ್‌ ಪ್ರಕ್ರಿಯೆ ಇನ್ನಿತರ ಅವಶ್ಯಕ ಕ್ರಮಗಳಿಗೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿವಹಿಸಿಕೊಂಡು ಶೀಘ್ರವೇ ಯೋಜನೆ ಚಾಲನೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಯೋಜನೆ ಅನುಷ್ಠಾನ ತರುವ ನಿಟ್ಟಿನಲ್ಲಿ ಬಾಕಿಯಿರುವ ಎಲ್ಲಾ ರೂಪುರೇಷೆ ಅಂತಿಮಗೊಳಿಸಿ ಅನುಮೋದನೆ ಪಡೆದುಕೊಳ್ಳಬೇಕು. ವಿಳಂಬ ಮಾಡದೇ ಯೋಜನೆ ಜಾರಿಗೆ ಮುಂದಾಗಲು ಹಿರಿಯ ಅಧಿಕಾರಿಗಳೇ ಕ್ರಮತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಆನೆಮಡುವಿನ ಕೆರೆಗೆ ನೀರು ತುಂಬಿಸುವ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ವಿವರವಾಗಿ ಚರ್ಚಿಸಿದ ಸಚಿವರು ಯಾವುದೇ ತೊಂದರೆಯಿಲ್ಲದೇ ಆನೆಮಡುವಿನ ಕೆರೆಗೆ ನೀರು ತುಂಬಿಸಲು ಅಗತ್ಯವಿರುವ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು. ಪ್ರಗತಿಯಲ್ಲಿರುವ ಸುತ್ತೂರು ಏತ ಯೋಜನೆಯ ಕಾಮಗಾರಿ ಪೂರ್ಣಗೊಳಿಸಿ, ಕೆರೆ ತುಂಬಿಸುವ ಯೋಜನೆಗೆ ಚಾಲನೆ ನೀಡಲು ಅಗತ್ಯ ಕ್ರಮವಹಿಸಬೇಕು. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ರಾಮನಗುಡ್ಡ, ಹುಬ್ಬೆ ಹುಣಸೆ ಯೋಜನೆ ಕಾಮಗಾರಿ ಕೈಗೊಂಡು ಕೆರೆಗಳನ್ನು ತುಂಬಿಸುವ ಯೋಜನೆಯ ಪ್ರಗತಿಗೂ ಮುಂದಾಗಬೇಕು. ಜಿಲ್ಲೆಯಲ್ಲಿ ಬಾಕಿ ಇರುವ ಕೆರೆ ತುಂಬಿಸುವ ಯೋಜನೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.

ರೈತರ ವಿದ್ಯುತ್‌ ಬಿಲ್‌ ಬಾಕಿ ಮನ್ನಾ: ಸೋಮಣ್ಣ ಭರವಸೆ

ಸಭೆಯಲ್ಲಿ ಶಾಸಕರಾದ ಆರ್‌. ನರೇಂದ್ರ, ಎನ್‌. ಮಹೇಶ್‌, ಸಿ.ಎಸ್‌. ನಿರಂಜನ್‌ ಕುಮಾರ್‌, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ಜಲ ಸಂಪನ್ಮೂಲ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ಸಿಂಗ್‌, ಸಣ್ಣ ನೀರಾವರಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಮೃತ್ಯುಂಜಯಸ್ವಾಮಿ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶಂಕರೇಗೌಡ, ಕಾವೇರಿ ನೀರಾವರಿ ನಿಗಮದ ಮೈಸೂರು ವಿಭಾಗದ ಮುಖ್ಯ ಎಂಜಿನಿಯರ್‌ ವೆಂಕಟೇಶ್‌, ಅಧೀಕ್ಷಕ ಎಂಜಿನಿಯರ್‌ ಶಿವಮಾದಯ್ಯ, ಕಾರ್ಯಪಾಲಕ ಎಂಜಿನಿಯರ್‌ ಎಂ.ಬಿ. ಪಾಟೀಲ್‌, ವೆಂಕಟೇಶ್‌ ಪ್ರಭು, ಕಿಶೋರ್‌, ಈಶ್ವರ್‌, ಮಂಜುನಾಥ್‌, ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow Us:
Download App:
  • android
  • ios