ಕೊರೋನಾ ತಡೆಗೆ ಸರ್ಕಾರ ಏನೂ ಮಾಡುತ್ತಿಲ್ಲ ಎಂಬ ಭಾವನೆ ಜನರಲ್ಲಿ ಇದೆ. ಆದರೆ ಸ್ಥಳೀಯ ಶಾಸಕರು, ಅಧಿಕಾರಿಗಳು ಸಾಕಷ್ಟು ಕೆಲಸ ಮಾಡುತ್ತಿದ್ದಾರೆ ಎಂದ ವಸತಿ ಸಚಿವ ವಿ.ಸೋಮಣ್ಣ 

ಬೆಂಗಳೂರು(ಅ.08): ಕೋವಿಡ್‌-19 ಪ್ರಕರಣ ದಿನೇ ದಿನೆ ಹೆಚ್ಚಾಗುತ್ತಿದ್ದರೂ ಸರ್ಕಾರ ಏನು ಮಾಡುತ್ತಿಲ್ಲ ಎಂಬ ಭಾವನೆ ಇದೆ. ಆದರೆ, ನಾವು ಸೋಂಕು ತಡೆಗಟ್ಟಲು ಶಕ್ತಿಮೀರಿ ಕೆಲಸ ಮಾಡುತ್ತಿದ್ದೇವೆ ಎಂದು ಬಿಬಿಎಂಪಿ ಪೂರ್ವ ವಲಯದ ಕೋವಿಡ್‌-19 ಸೋಂಕು ನಿಯಂತ್ರಣ ಉಸ್ತುವಾರಿಯೂ ಆಗಿರುವ ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. 

Add Asianetnews Kannada as a Preferred SourcegooglePreferred

ಬುಧವಾರ ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಪೂರ್ವ ವಲಯ ವ್ಯಾಪ್ತಿಯಲ್ಲಿ ಕೋವಿಡ್‌ ನಿಯಂತ್ರಣ ಹಾಗೂ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಕುರಿತು ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸರ್ಕಾರ ಏನೂ ಮಾಡುತ್ತಿಲ್ಲ ಎಂಬ ಭಾವನೆ ಜನರಲ್ಲಿ ಇದೆ. ಆದರೆ ಸ್ಥಳೀಯ ಶಾಸಕರು, ಅಧಿಕಾರಿಗಳು ಸಾಕಷ್ಟು ಕೆಲಸ ಮಾಡುತ್ತಿದ್ದಾರೆ ಎಂದರು.

ಮಾಸ್ಕ್‌ ಧರಿಸದೆ ಓಡಾಡುವವರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಸಂಸದ ಪಿ.ಸಿ ಮೋಹನ್‌ ಮಾತನಾಡಿ, ಅಧಿಕಾರಿಗಳು ಸಹ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಆರಂಭದಲ್ಲಿ ಬಂದ ದೂರುಗಳು ಈಗ ಕೇಳಿಬರುತ್ತಿಲ್ಲ. ಮೊದಲು ನೂರು ಪ್ರಕರಣಗಳು ಕಂಡು ಬಂದರೆ ಜನರು ಹೊರಗಡೆ ಬರುತ್ತಿರಲಿಲ್ಲ. ಆದರೀಗ ಐದು ಸಾವಿರ ಕೇಸ್‌ ಬಂದರೂ ಜನ ಹೆದರುತ್ತಿಲ್ಲ. ಜನರಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದರು. ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌, ಮಾಜಿ ಸಚಿವ ಕೆ.ಜೆ.ಜಾರ್ಜ್‌ ಮಾತನಾಡಿದರು. ಶಾಸಕ ಎನ್‌.ಎ.ಹ್ಯಾರಿಸ್‌, ವಿಧಾನ ಪರಿಷತ್‌ ಸದಸ್ಯ ರಮೇಶ್‌ ಗೌಡ ಮತ್ತಿತರರು ಇದ್ದರು.