Asianet Suvarna News Asianet Suvarna News

ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಗಳ ಈಡೇರಿಸಲು ಅಧಿಕಾರಿಗಳಿಗೆ ಸೂಚನೆ

ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಮೊದಲ ಸಭೆ ನಡೆಸಿದ ಶಾಸಕ ಎ. ಎಸ್ ಪೊನ್ನಣ್ಣ, ಚುನಾವಣೆ ಸಂದರ್ಭದಲ್ಲಿ ನೀಡಲಾಗಿದ್ದ ಭರವಸೆಯ ಪ್ರಣಾಳಿಕೆಯನ್ನು ಈಡೇರಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮುಂದಾಗಬೇಕು ಎಂದರು.

MLA  AS ponnanna Instructed the authorities to fulfill the promises made in congress manifesto gow
Author
First Published May 26, 2023, 9:59 PM IST

ವರದಿ: ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್ 

ಕೊಡಗು (ಮೇ.26): ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು. ಇದರಿಂದ ಜನಪ್ರತಿನಿಧಿಗಳು ಜನರ ನಿರೀಕ್ಷೆಗೆ ತಕ್ಕಂತೆ ಹೆಚ್ಚು ಕೆಲಸ ಮಾಡಲು ಸಾಧ್ಯ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹೇಳಿದ್ದಾರೆ.  ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಭಿವೃದ್ಧಿ ಕಾರ್ಯಗಳ  ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು. 

ಚುನಾವಣೆ ಸಂದರ್ಭದಲ್ಲಿ ನೀಡಲಾಗಿದ್ದ ಭರವಸೆಯ ಪ್ರಣಾಳಿಕೆಯನ್ನು ಈಡೇರಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಎ.ಎಸ್.ಪೊನ್ನಣ್ಣ ಅವರು ನಿರ್ದೇಶನ ನೀಡಿದರು. ಪ್ರಣಾಳಿಕೆಯಲ್ಲಿ ಜನಪರ ಕಾರ್ಯಕ್ರಮಗಳು ಇದ್ದು, ಅವುಗಳನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳು ಮುಂದಾಗಬೇಕು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಹಾಗೂ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಎಲ್ಲಾ ಹಂತದ ಅಧಿಕಾರಿಗಳು ಕೈಜೋಡಿಸಬೇಕು ಎಂದು ಶಾಸಕರು ತಿಳಿಸಿದರು.

ಸರ್ಕಾರದ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಹೊಸ ಆದೇಶ ಹೊರಡಿಸಿದ್ದು, ಈಗಾಗಲೇ ಪೂರ್ಣವಾಗಿರುವ ಕಾಮಗಾರಿಗಳಿಗೆ ಹಣ ಬಿಡುಗಡೆಗೆ ಬಾಕಿ ಇದ್ದಲ್ಲಿ, ಪಟ್ಟಿಯನ್ನು ಒದಗಿಸಬೇಕು. ಸರ್ಕಾರದ ಆದೇಶವನ್ನು  ಪಾಲಿಸುವಂತೆ ಎ.ಎಸ್.ಪೊನ್ನಣ್ಣ ಅವರು ನಿರ್ದೇಶನ ನೀಡಿದರು. 
ಭಾಗಮಂಡಲ ಮೇಲುಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅವಕಾಶ ಮಾಡುವಂತೆ ಸಂಬಂಧಪಟ್ಟ ಎಂಜಿನಿಯರ್ ಗಳಿಗೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಸೂಚಿಸಿದರು.

ಈ ಬಗ್ಗೆ ಮಾಹಿತಿ ನೀಡಿದ ಕಾವೇರಿ ನೀರಾವರಿ ನಿಗಮದ ಎಇಇ ನವೀನ್ ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ಅಧಿಕಾರಿಗಳು ಪಾರದರ್ಶಕವಾಗಿ ಕಾರ್ಯ ನಿರ್ವಹಿಸಬೇಕು. ಸಮಸ್ಯೆಗಳು ಇದ್ದಲ್ಲಿ ಮುಕ್ತವಾಗಿ ಹಂಚಿಕೊಳ್ಳಬೇಕು. ಯಾವುದೇ ಮುಜುಗರ ಅಥವಾ ಹಿಂಜರಿಯಬಾರದು ಎಂದು ಅಧಿಕಾರಿಗಳಿಗೆ ಶಾಸಕರು ಹೇಳಿದರು.

ಕೊಯಿನಾಡು ಬಳಿ ಕಿಂಡಿ ಅಣೆಕಟ್ಟುನಲ್ಲಿ ಪ್ರವಾಹ ಸಂದರ್ಭದಲ್ಲಿ ಮರದ ದಿಮ್ಮಿಗಳು ಸಂಗ್ರಹವಾಗುತ್ತಿದ್ದು, ಇದರಿಂದ ಪ್ರವಾಹ ಉಂಟಾಗಿ ಅಲ್ಲಿನ ಕುಟುಂಬಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾಹಿತಿ ಇದೆ. ಸ್ಥಳೀಯರಿಗೆ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ಎ.ಎಸ್.ಪೊನ್ನಣ್ಣ ಹೇಳಿದರು. ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಕೊಯನಾಡು ಬಳಿ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದೆ. ಹೆಚ್ಚಿನ ಮಳೆ ಸಂದರ್ಭದಲ್ಲಿ ಮರದ ದಿಮ್ಮಿಗಳು ಸಂಗ್ರಹವಾಗಿ ಅಲ್ಲಿನ ಕುಟುಂಬಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಈ ಬಗ್ಗೆ ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ಗಳು ಗಮನಹರಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.

ಜಲಜೀವನ್ ಮಿಷನ್ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ದೇವಣಗೇರಿ ಕಾಲೋನಿ ಹಾಗೂ ಟಿ.ಶೆಟ್ಟಿಗೇರಿ ಸೇರಿದಂತೆ ಹಲವು ಕಡೆಗಳಲ್ಲಿ ಕುಡಿಯುವ ನೀರು ಸಂಪರ್ಕ ಕಲ್ಪಿಸುವಂತೆ ಸಂಬಂಧಪಟ್ಟ ಎಂಜಿನಿಯರ್ಗೆ ಎ.ಎಸ್.ಪೊನ್ನಣ್ಣ ಸೂಚಿಸಿದರು. ಹಾಡಿಗಳಲ್ಲಿ ವಾಸಿಸುವ ಜನರಿಗೆ ನಿವೇಶನ ಕಲ್ಪಿಸುವ ನಿಟ್ಟಿನಲ್ಲಿ ಮುಂದಾಗಬೇಕು. ಆ ನಿಟ್ಟಿನಲ್ಲಿ ಜಾಗ ಗುರುತಿಸುವಂತಾಗಬೇಕು ಎಂದು ಶಾಸಕರು ಹೇಳಿದರು.

ಸಮಯಪ್ರಜ್ಞೆ ಮೆರೆದು ಗರ್ಭಿಣಿಗೆ ದಾರಿ ಮಧ್ಯೆ ಆ್ಯಂಬುಲೆನ್ಸ್ ನಲ್ಲಿಯೇ ಹೆರಿಗೆ ಮಾಡಿಸಿದ

ವಿರಾಜಪೇಟೆಯ ಪದವಿ ಪೂರ್ವ ಕಾಲೇಜಿನಲ್ಲಿ ಶೌಚಾಲಯ ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಕಳೆದ ಎರಡು ವರ್ಷದಿಂದ ಕಾಮಗಾರಿ ಸ್ಥಗಿತಗೊಂಡಿದ್ದು, ತುರ್ತು ಕ್ರಮವಹಿಸುವಂತೆ ಸಂಬಂಧಪಟ್ಟ ಎಂಜಿನಿಯರ್ಗೆ ಶಾಸಕರು ಸೂಚಿಸಿದರು. ನದಿ ದಡದಲ್ಲಿ ವಾಸಿಸುವ ಜನರನ್ನು ಸ್ಥಳಾಂತರಕ್ಕೆ ಕ್ರಮವಹಿಸುವಂತೆ ಶಾಸಕರು ಹೇಳಿದರು. ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಗುಹ್ಯ, ಸಿದ್ದಾಪುರ, ಕರಡಿಗೋಡಿನಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಬೇಕಿದೆ. ಅಲ್ಲಿನ ಜನರು 5-6 ಕಿ,ಮೀ. ದೂರದಲ್ಲಿದ್ದರೆ ತೆರಳುವುದಿಲ್ಲ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಗ್ರಾ.ಪಂ.ನಲ್ಲಿ ನಿರ್ಧಾರ ಮಾಡಿ, ಹತ್ತಿರದಲ್ಲಿ  ನಿವೇಶನ ಕಲ್ಪಿಸಬೇಕಿದೆ ಎಂದರು.

ಹಿಡಕಲ್‌ ಡ್ಯಾಂನಿಂದ ಕಾಲುವೆಗಳಿಗೆ 5 ದಿನ 2.17 ಟಿಎಂಸಿ ನೀರು: ಬಾಲಚಂದ್ರ ಜಾರಕಿಹೊಳಿ

ಪೊನ್ನಂಪೇಟೆ ಕ್ರೀಡಾ ವಸತಿ ಶಾಲೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಉಳಿಸಿಕೊಂಡು ಕೊಡಗು ಜಿಲ್ಲೆಯ ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಮಾಡಬೇಕು. ಆದ್ದರಿಂದ ಈ ಹಿಂದೆ ಇದ್ದಂತೆ ಸ್ಥಳೀಯ ವಿದ್ಯಾರ್ಥಿಗಳಿಗೆ ಅವಕಾಶ ಮಾಡಬೇಕು ಎಂದು ಅಧಿಕಾರಿಗೆ ಸೂಚಿಸಿದರು. ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ದೂರುಗಳು ಕೇಳಿ ಬರದಂತೆ ಎಚ್ಚರ ವಹಿಸಬೇಕು ಎಂದು ಶಾಸಕರು ಹೇಳಿದರು.

Follow Us:
Download App:
  • android
  • ios