ಜಿಲ್ಲೆಯಲ್ಲಿ ಡೆಂಘೀ, ಚಿಕೂನ್‌ಗುನ್ಯಾ ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಸದ ಜಗದೀಶ ಶೆಟ್ಟರ್‌, ಬಿಜೆಪಿ ಗ್ರಾಮೀಣ ಅಧ್ಯಕ್ಷ ಸುಭಾಷ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ ಅವರು ಜಿಲ್ಲಾಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಕಾರ್ಯಚಟುವಟಿಕೆ ಪರಿಶೀಲಿಸಿದರು.  

ಬೆಳಗಾವಿ (ಜು.10): ಜಿಲ್ಲೆಯಲ್ಲಿ ಡೆಂಘೀ, ಚಿಕೂನ್‌ಗುನ್ಯಾ ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಸದ ಜಗದೀಶ ಶೆಟ್ಟರ್‌, ಬಿಜೆಪಿ ಗ್ರಾಮೀಣ ಅಧ್ಯಕ್ಷ ಸುಭಾಷ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ ಅವರು ಜಿಲ್ಲಾಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಕಾರ್ಯಚಟುವಟಿಕೆ ಪರಿಶೀಲಿಸಿದರು. ಡೆಂಘೀ ಪೀಡಿತ ರೋಗಿಗಳೊಂದಿಗೆ ಮಾತನಾಡಿದ ಅವರು, ಆಸ್ಪತ್ರೆ ವ್ಯವಸ್ಥೆಯ ಕುರಿತು ಮಾಹಿತಿ ಪಡೆದುಕೊಂಡರು. 

Add Asianetnews Kannada as a Preferred SourcegooglePreferred

ಬಿಮ್ಸ್‌ ನಿರ್ದೇಶಕ ಅಶೋಕ ಕುಮಾರ ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಶ ಕೋಣೆ, ವೈದ್ಯಕೀಯ ಅಧಿಕಾರಿಗಳು, ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ, ರೋಗ ನಿಯಂತ್ರಣ ಹಾಗೂ ಚಿಕಿತ್ಸೆ ಕುರಿತು ಚರ್ಚಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಶೆಟ್ಟರ್‌ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಜನರ ಬಳಿಗೆ ಹೋಗಿ ಸಮಸ್ಯೆ ಆಲಿಸುವಂತೆ ಸೂಚನೆ ನೀಡಿದ್ದರೂ ಆಡಳಿತ ಸರಿಯಾಗಿ ನಡೆಯುತ್ತಿಲ್ಲ ಎಂಬುದು ಸಾಬೀತಾಗಿದೆ ಎಂದು ದೂರಿದರು.

ರಾಜ್ಯಾದ್ಯಂತ ಡೆಂಘೀ ಪ್ರಕರಣ ಹೆಚ್ಚಾಗುತ್ತಿವೆ. ಆದರೆ, ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ, ಬಿಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ 189 ಪ್ರಕರಣ ಆಡ್ಮಿಟ್‌ ಆಗಿವೆ. ಡಿಎಚ್‌ಒ ಅವರು 177 ಕೇಸ್‌ ಬಂದಿವೆ ಎಂಬ ಮಾಹಿತಿ ನೀಡಿದ್ದಾರೆ. ಜೂನ್‌, ಜುಲೈ ತಿಂಗಳಲ್ಲಿ ಪ್ರಕರಣ ಹೆಚ್ಚಾಗಿವೆ. ಇದೇ ವಾರದಲ್ಲಿ 48 ಪ್ರಕರಣ ಹೆಚ್ಚಾಗಿವೆ. ಸರಿಯಾದ ರೀತಿಯಲ್ಲಿ ಚಿಕಿತ್ಸೆ ಕೊಡುವಂತೆ ಸೂಚನೆ ನೀಡಿದ್ದೇನೆ. ಖಾಸಗಿ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಮಾಹಿತಿ ಪಡೆದುಕೊಳ್ಳಬೇಕು. ಸ್ಥಳೀಯ ಸಂಸ್ಥೆ ಅಧಿಕಾರಿಗಳು ಹಾಗೂ ಜನರು ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಸ್ವಾರ್ಥಕ್ಕಾಗಿ ಸಂವಿಧಾನ ಬದಲಿಸಿದ್ದು ಕಾಂಗ್ರೆಸ್‌: ಸಂಸದ ಗೋವಿಂದ ಕಾರಜೋಳ

ರಾಜ್ಯದಲ್ಲಿ ಡೆಂಘೀ ಪ್ರಕರಣ ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ಮೆಡಿಕಲ್‌ ಎಮರ್ಜೆನ್ಸಿ ಘೋಷಣೆ ಮಾಡಬೇಕು. ಆದರೆ, ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಅವರು ಆ ಪರಿಸ್ಥಿತಿ ಬಂದಿಲ್ಲ ಎಂದು ಹೇಳುತ್ತಿದ್ದಾರೆ. ಸರ್ಕಾರ ಜನರ ಜೀವದ ಜೊತೆ ಆಟವಾಡುತ್ತಿದೆ. ಆಡಳಿತಯಂತ್ರ ಸಂಪೂರ್ಣ ಕುಸಿತಗೊಂಡಿದೆ. ಜನತೆಯ ಆರೋಗ್ಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಮಾಜಿ ಶಾಸಕ ಸಂಜಯ ಪಾಟೀಲ, ಮುರುಘೇಂದ್ರಗೌಡ ಪಾಟೀಲ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ್ ಖಡಿ, ಜಿಲ್ಲಾ ಕೋಶಾಧ್ಯಕ್ಷ ಮಲ್ಲಿಕಾರ್ಜುನ ಮಾದಮ್ಮನವರ, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಯಲ್ಲೇಶ ಕೋಲಕಾರ, ವಿಠ್ಠಲ ಸಾಯಣ್ಣವರ ಉಪಸ್ಥಿತರಿದ್ದರು.