ಹಾಸನ ನಗರದ ರೈಲ್ವೆ ಮೇಲ್ಸೇತುವೆ ಕಾಮಗಾರಿಯು ನವೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದ್ದಾರೆ. ಜೊತೆಗೆ, ಗೃಹಲಕ್ಷ್ಮೀ ಯೋಜನೆಯು ಸ್ಥಗಿತಗೊಳ್ಳುವುದಿಲ್ಲ, ಬದಲಿಗೆ ಪರಿಷ್ಕರಣೆಗಾಗಿ ಮರು-ನೋಂದಣಿ ಅಗತ್ಯವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಹಾಸನ: ನಗರದ ಹೃದಯಭಾಗದಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ನವೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ಶಿವಲಿಂಗೇಗೌಡರು ಸಚಿವರಾಗುವುದು ಬಹುತೇಕ ಖಚಿತ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದ ಎನ್. ಆರ್‌. ವೃತ್ತದಿಂದ ಜಿಲ್ಲಾ ನ್ಯಾಯಾಲಯದವರೆಗೂ ನಿರ್ಮಾಣವಾಗುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಬುಧವಾರ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಅಗತ್ಯ ಅನುದಾನ ಈಗಾಗಲೇ ಬಿಡುಗಡೆಯಾಗಿದ್ದು ಕಾಮಗಾರಿ ವೇಗವಾಗಿ ಸಾಗುತ್ತಿದೆ. ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಉಳಿದ ಕೆಲಸಗಳನ್ನು ನಿಗದಿತ ಅವಧಿಯೊಳಗೆ ಮುಗಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. 

ಗ್ಯಾರಂಟಿ ಯೋಜನೆ ಪರಿಷ್ಕರಣೆ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಪ್ರತಿಕ್ರಿಯಿಸಿದ ಶ್ರೇಯಸ್ ಪಟೇಲ್, ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳು ಯಾವುದೇ ರೀತಿಯ ಆತಂಕ ಪಡಬೇಕಿಲ್ಲ ಎಂದು ಸ್ಪಷ್ಟಪಡಿಸಿದರು. ಮತದಾರರ ಪಟ್ಟಿಯನ್ನು ಕಾಲಕಾಲಕ್ಕೆ ಪರಿಷ್ಕರಿಸುವಂತೆ ಸರ್ಕಾರದ ಯೋಜನೆಗಳಿಗೂ ಪರಿಷ್ಕರಣೆ ಅಗತ್ಯವಾಗುತ್ತದೆ. ಮುಖ್ಯಮಂತ್ರಿಗಳು ಮತ್ತೊಮ್ಮೆ ನೋಂದಣಿ ಮಾಡಿಸಿಕೊಳ್ಳುವಂತೆ ಸೂಚಿಸಿದ್ದು, ದಾಖಲೆಗಳನ್ನು ಸಲ್ಲಿಸಿದ ಪ್ರತಿಯೊಬ್ಬ ಅರ್ಹ ಫಲಾನುಭವಿಯ ಖಾತೆಗೆ ಹಣ ಜಮೆಯಾಗಲಿದೆ ಎಂದರು.

ಮಹಿಳೆಯರು ಕಚೇರಿಗಳಿಗೆ ಅಲೆದಾಡುವ ಅಗತ್ಯವಿಲ್ಲ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿಯೇ ಸ್ಥಳದಲ್ಲೇ ನೋಂದಣಿ ಪ್ರಕ್ರಿಯೆ ನಡೆಸಲಿದ್ದಾರೆ. ಗೃಹಲಕ್ಷ್ಮೀ ಹಣ ಸ್ಥಗಿತಗೊಳ್ಳಲಿದೆ ಎಂಬ ಸುಳ್ಳು ಸುದ್ದಿಗಳನ್ನು ವಿರೋಧ ಪಕ್ಷದವರು ಹರಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಬಡವರು, ದೀನ ದಲಿತರು ಹಾಗೂ ಸಾಮಾನ್ಯ ವರ್ಗದ ಜನರ ಪರವಾಗಿ ಕೆಲಸ ಮಾಡುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ ಗ್ಯಾರಂಟಿ ಯೋಜನೆಗಳಿಗೆ ₹2.56 ಲಕ್ಷ ಕೋಟಿ ವೆಚ್ಚ ಮಾಡಿದೆ. ಮುಂದೆಯೂ ಜನಪರ ಕಾರ್ಯಕ್ರಮಗಳು ಮುಂದುವರಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಪಿಂಚಣಿ ಹಣ ಸ್ಥಗಿತ

ಕೆಲವರಿಗೆ ಪಿಂಚಣಿ ಹಣ ಸ್ಥಗಿತಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆಧಾರ್‌ ಸೇರಿದಂತೆ ವಿವಿಧ ದಾಖಲೆಗಳಲ್ಲಿ ವಯಸ್ಸು ಹಾಗೂ ಇತರ ಮಾಹಿತಿಗಳ ಹೊಂದಾಣಿಕೆ ಇಲ್ಲದ ಕಾರಣ ತಾತ್ಕಾಲಿಕವಾಗಿ ಪಾವತಿ ಸ್ಥಗಿತಗೊಂಡಿದೆ. ಅಗತ್ಯ ದಾಖಲೆಗಳನ್ನು ಸಲ್ಲಿಸಿದ ತಕ್ಷಣ ಹಣ ಬಿಡುಗಡೆ ಮಾಡಲಾಗುತ್ತದೆ. ಈ ಪರಿಶೀಲನೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನಡೆಯುತ್ತಿದೆ ಎಂದು ತಿಳಿಸಿದರು.

ಇದೆ ವೇಳೆ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಂಜಿತ್ ಗೊರೂರು, ಕಾಂಗ್ರೆಸ್ ಮುಖಂಡರಾದ ತಾರಾಚಂದನ್, ರಘು ದಾಸರಕೊಪ್ಪಲು, ಇಸ್ಮಾಯಿಲ್, ರಾಮಚಂದ್ರ, ವೆಂಕಟೇಗೌಡ ಇತರರು ಉಪಸ್ಥಿತರಿದ್ದರು.