ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ನೇತೃತ್ವದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ ನಡೆಯಿತು.

ಬೆಂಗಳೂರು [ಸೆ.18]:  ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ವಿ.ವಿ.ಪುರಂನ ಫುಡ್‌ ಸ್ಟ್ರೀಟ್‌ನಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ನೇತೃತ್ವದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ ನಡೆಯಿತು.

Add Asianetnews Kannada as a Preferred SourcegooglePreferred

ಫುಡ್‌ ಸ್ಟ್ರೀಟ್‌ನಲ್ಲಿ ಸುಮಾರು 60 ಮಳಿಗಳಿಗಳಿದ್ದು, ಇನ್ಮುಂದೆ ಯಾವುದೇ ಪ್ಲಾಸ್ಟಿಕ್‌ ವಸ್ತು ಬಳಸದಂತೆ ಅಲ್ಲಿನ ವರ್ತಕರು ಪ್ರತಿಜ್ಞಾವಿಧಿ ಸ್ವೀಕರಿಸಿದರು.

ನಾವು ನಮ್ಮ ತಿಂಡಿ ಬೀದಿಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವ ಮೂಲಕ ಸ್ವಚ್ಛ ಭಾರತ ಅಭಿಯಾನಕ್ಕೆ ಬೆಂಬಲ ಸೂಚಿಸುತ್ತೇವೆ. ಪರಿಸರಕ್ಕೆ ಹಾನಿ ಉಂಟು ಮಾಡುವ ಪ್ಲಾಸ್ಟಿಕ್‌ ತಟ್ಟೆ, ಲೋಟ ಸೇರಿದಂತೆ ಯಾವುದೇ ಪ್ಲಾಸ್ಟಿಕ್‌ಗಳನ್ನು ಬಳಸುವುದಿಲ್ಲ. ಹಸಿ ಕಸ ಮತ್ತು ಒಣ ಕಸವನ್ನು ಮೂಲದಲ್ಲಿಯೇ ವಿಂಗಡಿಸುತ್ತೇವೆ. ಸುತ್ತಮುತ್ತಲಿನ ಪರಿಸರವನ್ನು ಆರೋಗ್ಯವಾಗಿ ನೋಡಿಕೊಳ್ಳುತ್ತೇವೆ ಎಂದು ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಬಳಿಕ ಮಾತನಾಡಿದ ಅವರು ಸಂಸದ ತೇಜಸ್ವಿ ಸೂರ್ಯ, ಸ್ವಚ್ಛ ಭಾರತ ಪ್ರಧಾನಿ ನರೇಂದ್ರ ಮೋದಿ ಅವರ ಕನಸು. ಹೀಗಾಗಿ ಫುಡ್‌ ಸ್ಟ್ರೀಟ್‌ ರಸ್ತೆಯನ್ನು ಸಂಪೂರ್ಣವಾಗಿ ಪ್ಲಾಸ್ಟಿಕ್‌ ರಸ್ತೆಯನ್ನಾಗಿ ಮಾಡುತ್ತಿದ್ದೇವೆ. ಇನ್ನು ಮುಂದೆ ಯಾರು ಈ ರಸ್ತೆಯಲ್ಲಿ ಪ್ಲಾಸ್ಟಿಕ್‌ ತಟ್ಟೆ, ಲೋಟ ಬಳಸುವುದಿಲ್ಲ. ಸ್ಟಿಲ್‌ ತಟ್ಟೆ, ಲೋಟ ಬಳಸಲಿದ್ದಾರೆ ಎಂದು ತಿಳಿಸಿದರು. ಈ ವೇಳೆ ಸ್ಥಳೀಯ ಶಾಸಕ ಗರುಡಾಚಾರ್‌ ಇದ್ದರು.

ಇದಕ್ಕೂ ಮುನ್ನ ಸಂಸದರು ಜಯನಗರದಲ್ಲಿರುವ ಸೇವಾಶ್ರಮ ಆಸ್ಪತ್ರೆ ಹಾಗೂ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ರೋಗಿಗಳಿಗೆ ಹಣ್ಣು, ಹಂಪಲು ವಿತರಿಸಿದರು.