ಭಟ್ಕಳದ ಮುರಿನಕಟ್ಟೆ ಧ್ವಂಸ ಪ್ರಕರಣವನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ನ್ಯಾಯ ಕೇಳಲು ಹೋದ ಹಿಂದೂಗಳ ಮೇಲೆ ಪ್ರಕರಣ ದಾಖಲಿಸಿರುವುದನ್ನು ವಿರೋಧಿಸಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಿದೆ.
ಭಟ್ಕಳ (ಮೇ.27): ಉತರ ಕನ್ನಡ ಜಿಲ್ಲೆ ಭಟ್ಕಳ ಪಟ್ಟಣದ ಮುರಿನಕಟ್ಟೆಯಲ್ಲಿ ನಿರ್ಮಿಸಿದ ಕಟ್ಟೆಯನ್ನು ಧ್ವಂಸ ಮಾಡಿ ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವುದನ್ನು ಖಂಡಿಸಿ ಮೇ 29ರಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ನ್ಯಾಯಾ ಕೇಳಲು ಹೋದ ಹಿಂದೂಗಳ ಮೇಲೆ ಕೇಸ್!
ಈ ಕುರಿತು ಮಂಗಳವಾರ ಬಿಜೆಪಿ ಕಚೇರಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಎಸ್. ಹೆಗಡೆ ಅವರು, ಪೊಲೀಸ್ ಇಲಾಖೆ ಮುರಿನಕಟ್ಟೆಯಲ್ಲಿ ನಿರ್ಮಿಸಲಾದ ಕಟ್ಟೆಯನ್ನು ಧ್ವಂಸ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು ನ್ಯಾಯ ಕೇಳಲು ಹೋದ ಹಿಂದೂಗಳ ಮೇಲೆ ಪ್ರಕರಣ ದಾಖಲಿಸಿದೆ.
ಕಾಂಗ್ರೆಸ್ ಸರ್ಕಾರದ ಮುಸ್ಲಿಂ ತುಷ್ಟೀಕರಣಕ್ಕೆ ಸಾಕ್ಷಿ
ಕಾಂಗ್ರೆಸ್ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ. ಹಾಗಾಗಿ ಹಿಂದೂಗಳ ಮೇಲಿನ ಪ್ರಕರಣ ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಹಿಂದೂ ಸಂಘಟನೆಗಳು, ಬಿಜೆಪಿಯ ಸಹಯೋಗದಲ್ಲಿ ಪ್ರತಿಭಟನೆ ನಡೆಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲ್ಗೊಳ್ಳಲಿದ್ದಾರೆ ಎಂದರು.
ಮರುಸ್ಥಾಪಿಸಲು 48 ಗಂಟೆ ಗಡುವು
ಮುಸ್ಲಿಮರು ಧ್ವಂಸಗೊಳಿಸಿರುವ ಹಿಂದೂಗಳ ಆರಾಧ್ಯ ಮುರಿನಕಟ್ಟೆಯನ್ನು 48 ಗಂಟೆಯೊಳಗೆ ಮರುಸ್ಥಾಪನೆ ಮಾಡಬೇಕು. ಮಾಡದಿದ್ದಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದು. ನಾವು ಶ್ರದ್ಧಾಭಕ್ತಿಯಿಂದ ಪೂಜಿಸಿ ನಿರ್ಮಿಸಿದ್ದ ಮುರಿನಕಟ್ಟೆಯನ್ನು ಮುಸ್ಲಿಮರು ಚಪ್ಪಲಿ ಕಾಲಿನಿಂದ ಒದ್ದಿದ್ದಲ್ಲದೇ ಅದನ್ನು ಧ್ವಂಸಗೊಳಿಸಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸ್ ಸರ್ಪಗಾವಲು
ಮುರಿನಕಟ್ಟೆ ಪ್ರದೇಶ ಮತ್ತು ಪಟ್ಟಣದಾದ್ಯಂತ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಮುರಿನಕಟ್ಟೆ ಸುತ್ತಲೂ ಬ್ಯಾರಿಕೇಡ್ ಹಾಕಲಾಗಿದೆ. ಬಂದೋಬಸ್ತ್ಗಾಗಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದಲೂ ಪೊಲೀಸರು, ಕೆಎಸ್ಆರ್ಪಿ ತಂಡಗಳನ್ನು ಕರೆಯಿಸಲಾಗಿದೆ.
ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ: ಡಿಸಿ
ಕಾರವಾರ:ಭಟ್ಕಳದ ಮುರಿನಕಟ್ಟೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ತಪ್ಪು ಮಾಹಿತಿಯನ್ನು ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ ಜಿಲ್ಲೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಎಚ್ಚರಿಸಿದ್ದಾರೆ. ಅಮ್ಮನವರ ಹೊರೆಯನ್ನಿಡುವ ಮುರಿನಕಟ್ಟೆಯಲ್ಲಿನ ಕಟ್ಟೆಯನ್ನು ನಾಶಪಡಿಸಿದವರ ಮೇಲೆ ಎಲ್ಲ ರೀತಿಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಮುರಿನಕಟ್ಟೆ ಸ್ಥಳವು ಯಥಾಸ್ಥಿತಿಯಲ್ಲಿರುವ ಬಗ್ಗೆಯೂ ತಿಳಿಸಲಾಗಿದೆ. ಆದರೆ, ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪಾದ ಹಾಗೂ ಸುಳ್ಳು ಮಾಹಿತಿ ಹರಿಬಿಟ್ಟುರುವುದು ಕಂಡುಬಂದಿದೆ. ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


