ಶಿರಾ ನಗರವನ್ನು ಸುಂದರ ನಗರವನ್ನಾಗಿಸುವುದೇ ನನ್ನ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಲಾಗಿದ್ದು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದು ರಾಜ್ಯ ಸರಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.

ಶಿರಾ : ಶಿರಾ ನಗರವನ್ನು ಸುಂದರ ನಗರವನ್ನಾಗಿಸುವುದೇ ನನ್ನ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಲಾಗಿದ್ದು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದು ರಾಜ್ಯ ಸರಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.

Add Asianetnews Kannada as a Preferred SourcegooglePreferred

ಸೋಮವಾರ ನಗರದ ಪ್ರವಾಸಿ ಮಂದಿರದ ಮುಂಭಾಗದಿಂದ ಕಾಳಿದಾಸ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಹಿಂದೆ ನಾನು ಸಚಿವನಾಗಿದ್ದ ಸಂದರ್ಭದಲ್ಲಿ ನಗರೋತ್ಥಾನ ಯೋಜನೆಯಡಿ ಸುಮಾರು 50 ಕೋಟಿ ರು. ಗಳಿಗೂ ಹೆಚ್ಚು ಅನುದಾನವನ್ನು ತಂದು ನಗರದಲ್ಲಿರುವ ಎಲ್ಲಾ ಪ್ರಮುಖ ರಸ್ತೆಗಳನ್ನು ಅಭಿವೃದ್ಧಿ ಮಾಡಿದ್ದೆನೆ. ಇಂದೂ ಸಹ ಆ ರಸ್ತೆಗಳು ಉತ್ತಮವಾಗಿವೆ. ಈಗ ಮತ್ತೆ ಉಳಿದ ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದೇನೆ. ನಗರೋತ್ಥಾನ ನಾಲ್ಕನೇ ಹಂತದಲ್ಲಿ ಬಿಡುಗಡೆಯಾಗಿರುವ ಸುಮಾರು 25 ಕೋಟಿ ರೂಪಾಯಿಗಳೂ ಸಹ ಸದ್ವಿನಿಯೋಗವಾಗಬೇಕು. ಕಾಮಗಾರಿಗಳು ವಿಳಂಬವಾಗದೆ ತ್ವರಿತಗತಿಯಲ್ಲಿ ಮುಗಿಸಬೇಕು. ಗುತ್ತಿಗೆದಾರರೂ ಸಹ ಗುಣಮಟ್ಟ ಕಾಯ್ದುಕೊಂಡು ಕಾಮಗಾರಿ ಮಾಡಬೇಕು ಎಂದರು.

ನಗರಸಭೆ ಅಧ್ಯಕ್ಷೆ ಪೂಜಾ ಪೆದ್ದರಾಜು ಅವರು ಮಾತನಾಡಿ, ಶಿರಾ ನಗರದಲ್ಲಿ ಈ ಹಿಂದೆ ನಗರೋತ್ಥಾನ ಯೋಜನೆಯಡಿ ಭೂಮಿ ಪೂಜೆಗಳನ್ನು ನೆರವೇರಿಸಿ ಕಾಮಗಾರಿಗಳು ಚಾಲನೆಗೊಂಡಿರಲಿಲ್ಲ. ಈಗ ಕಾಂಗ್ರೆಸ್ ಪಕ್ಷದಿಂದ ನಾವು ಅಧಿಕಾರಕ್ಕೆ ಬಂದ ನಂತರ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ. ಇದೇ ರೀತಿ ನಗರದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಕಾರ್ಯ ಮಾಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಪ್ರಭಾರ ಪೌರಾಯುಕ್ತೆ ಪಲ್ಲವಿ, ಮಾಜಿ ನಗರಸಭಾ ಅಧ್ಯಕ್ಷ ಅಮಾನುಲ್ಲಾ ಖಾನ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಎಲ್.ರಂಗನಾಥ್, ಸದಸ್ಯರಾದ ಶಿವಶಂಕರ್, ಲಕ್ಷ್ಮೀಕಾಂತ್, ಅಜಯ್ಕುಮಾರ್, ಉಮಾ ವಿಜಯರಾಜ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್.ಮಂಜುನಾಥ್, ಮುಖಂಡರಾದ ಬಾನುಪ್ರಕಾಶ್, ನೂರುದ್ದೀನ್, ಗೋಣಿಹಳ್ಳಿ ದೇವರಾಜು ಸೇರಿದಂತೆ ಹಲವರು ಹಾಜರಿದ್ದರು.