ಮೈಸೂರಿನ ಡಿಆರ್‌ಸಿ ಮಾಲ್‌ನಲ್ಲಿ ನಡೆದ ಭೀಕರ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಎಲೆಕ್ಟ್ರಿಷಿಯನ್ ಒಬ್ಬರು ಕೆಲಸ ಮಾಡುವಾಗ ಆಯತಪ್ಪಿ ಬಿದ್ದರೆ, ಮತ್ತೊಬ್ಬರು ರಕ್ಷಣೆಗೆ ಧಾವಿಸಿ ಬಿದ್ದು ಸಾವನ್ನಪ್ಪಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮೈಸೂರು (ಸೆ.09): ಮೈಸೂರಿನ ಜಯಲಕ್ಷ್ಮಿಪುರಂನಲ್ಲಿರುವ ಡಿಆರ್‌ಸಿ ಮಾಲ್‌ನಲ್ಲಿ ನಡೆದ ಭೀಕರ ದುರಂತದಲ್ಲಿ, ಕೆಲಸ ಮಾಡುವಾಗ ಆಯತಪ್ಪಿ ಬಿದ್ದಿದ್ದ ಎಲೆಕ್ಟ್ರಿಷಿಯನ್ ಮತ್ತು ಆತನ ರಕ್ಷಣೆಗೆ ಧಾವಿಸಿದ್ದ ಮತ್ತೊಬ್ಬ ವ್ಯಕ್ತಿ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಘಟನೆಯ ವಿವರ

ಡಿಆರ್‌ಸಿ ಮಾಲ್‌ನಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಸುನೀಲ್ (27), 4ನೇ ಮಹಡಿಯಲ್ಲಿ ಜಾಹೀರಾತು ಫಲಕ ತೆರವುಗೊಳಿಸುವ ಕೆಲಸ ಮಾಡುತ್ತಿದ್ದರು. ಈ ವೇಳೆ ಅವರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೇಲೆ ಆಕಸ್ಮಿಕವಾಗಿ ಕಾಲಿಟ್ಟ ಕಾರಣ ಪಿಒಪಿ ಕುಸಿದು, ಸುನೀಲ್ ಕೆಳಗೆ ಬಿದ್ದಿದ್ದಾರೆ. ತಕ್ಷಣ ಎಚ್ಚೆತ್ತ ಸುನೀಲ್ ಕಬ್ಬಿಣದ ರಾಡ್ ಒಂದನ್ನು ಹಿಡಿದು ನೇತಾಡುತ್ತಿದ್ದರು. ಅದೇ ಸಮಯದಲ್ಲಿ, ಅಲ್ಲೇ ಇದ್ದ ಕುಂಬಾರಕೊಪ್ಪಲು ನಿವಾಸಿ ಚಂದ್ರು (25), ಸುನೀಲ್ ಅಪಾಯದಲ್ಲಿದ್ದನ್ನು ಗಮನಿಸಿ ಸಹಾಯಕ್ಕೆ ಧಾವಿಸಿದ್ದಾರೆ. ಸುನೀಲ್ ಅವರನ್ನು ರಕ್ಷಿಸಲು ಪ್ರಯತ್ನಿಸುವಾಗ ಚಂದ್ರು ಕೂಡ ಸಮತೋಲನ ಕಳೆದುಕೊಂಡು ಕೆಳಗೆ ಬಿದ್ದಿದ್ದಾರೆ.

ಬೆಂಗಳೂರಿನಲ್ಲಿ ₹1.5 ಕೋಟಿ ಮೌಲ್ಯದ ಮಾದಕ ವಸ್ತು ವಶ, ರಾಮಮೂರ್ತಿ ನಗರದ ಈ ಲಾಡ್ಜ್ ನಲ್ಲಿ ಡ್ರಗ್ಸ್ ಪಾರ್ಟಿಗೆ ಮಾಮೂಲಿ ವ್ಯವಸ್ಥೆ!

ದುರಂತದಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಕರೆದೊಯ್ಯುವ ಮುನ್ನವೇ ಸುನೀಲ್ ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಂದ್ರು ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಗೆ ಸಂಬಂಧಿಸಿದಂತೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಮಾಲ್ ನಿರ್ವಹಣೆಯಲ್ಲಿ ಸುರಕ್ಷತಾ ಕ್ರಮಗಳ ಕೊರತೆ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಪೊಲೀಸ್ ತನಿಖೆ

ಘಟನೆ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ನಿರ್ಲಕ್ಷ್ಯದ ಆರೋಪದ ಮೇಲೆ ಮಾಲ್ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಕಾರ್ಮಿಕರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳದಿರುವುದು ಈ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಈ ಘಟನೆ ಕಾರ್ಮಿಕರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.