ನೆರೆ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಿಂದ ಆಗಮಿಸುವರ ಮೇಲೆ ನಿಗಾ ಆಗಮಿಸುವ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸುವವರು ಕಡ್ಡಾಯವಾಗಿ ಕೊರೋನಾ ನೆಗೆಟಿವ್‌ ವರದಿ ತರಬೇಕು

ಬೆಂಗಳೂರು (ಆ.03): ನೆರೆ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಿಂದ ಆಗಮಿಸುವ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸುವವರು ಕಡ್ಡಾಯವಾಗಿ ಕೊರೋನಾ ನೆಗೆಟಿವ್‌ ವರದಿ ಹೊಂದಿರಲೇಬೇಕು.

Add Asianetnews Kannada as a Preferred SourcegooglePreferred

ಈ ಬಸ್ಸುಗಳು ಕರ್ನಾಟಕ ಗಡಿ ದಾಟಿ ಬೇರೆ ಜಿಲ್ಲೆ ಅಥವಾ ನಗರಕ್ಕೆ ಬರುವಾಗ ಮಾರ್ಗ ಮಧ್ಯ ಬಸ್‌ ಏರುವ ಕರ್ನಾಟಕದ ಪ್ರಯಾಣಿಕರು ಸಹ ಕಡ್ಡಾಯವಾಗಿ ನೆಗೆಟಿವ್‌ ರಿಪೋರ್ಟ್‌ ಹೊಂದಿರಬೇಕು. ಒಂದು ವೇಳೆ ರಿಪೋರ್ಟ್‌ ಇಲ್ಲದಿದ್ದರೆ ಬಸ್ಸಿನಲ್ಲಿ ಪ್ರಯಾಣಿಸಲು ಅವಕಾಶವಿರುವುದಿಲ್ಲ.

ಒಂದು ವೇಳೆ ನೆಗೆಟಿವ್‌ ವರದಿ ಹೊಂದಿಲ್ಲದ್ದಲ್ಲಿ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿ, ಅವರನ್ನು ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಕ್ವಾರಂಟೈನ್‌ ಮಾಡುವಂತೆ ಸ್ಥಳೀಯ ಆಡಳಿತಗಳಿಗೆ ಆರೋಗ್ಯ ಇಲಾಖೆ ನಿರ್ದೇಶನ ನೀಡಿದೆ.

ಕೊರೋನಾ ಸೋಂಕಿತರ ಕಣ್ಣೀರಿನಿಂದಲೂ ಹರಡುತ್ತೆ ವೈರಸ್!

ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗಿರುವುದರಿಂದ ರಾಜ್ಯ ಸರ್ಕಾರ ಈ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಸದರಿ ರಾಜ್ಯಗಳಿಂದ ಬರುವ ಪ್ರಯಾಣಿಕರು ಬಸ್ಸು ಏರುವಾಗ 72 ಗಂಟೆಯೊಳಗೆ ಪಡೆದಿರುವ ಕೊರೋನಾ ನೆಗೆಟಿವ್‌ ರಿಪೋರ್ಟ್‌ ತೋರಿಸಬೇಕು.

ರಾಜಧಾನಿಯಲ್ಲಿ ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಬಿಬಿಎಂಪಿ ನಗರದ ಪ್ರಮುಖ ಬಸ್‌ ನಿಲ್ದಾಣಗಳು, ರೈಲು ನಿಲ್ದಾಣಗಳಲ್ಲಿ ವಿಶೇಷ ತಪಾಸಣಾ ತಂಡಗಳನ್ನು ನಿಯೋಜಿಸಲು ಮುಂದಾಗಿದೆ. ಮಹಾರಾಷ್ಟ್ರ ಹಾಗೂ ಕೇರಳದಿಂದ ಬೆಂಗಳೂರು ನಗರಕ್ಕೆ ಬರುವ ಪ್ರಯಾಣಿಕರನ್ನು ಈ ತಂಡಗಳು ಬಸ್‌ ನಿಲ್ದಾಣಗಳಲ್ಲಿ ತಪಾಸಣೆಗೆ ಒಳಪಡಿಸಲಿವೆ. ಈ ವೇಳೆ ನೆಗೆಟಿವ್‌ ರಿಪೋರ್ಟ್‌ ಇಲ್ಲದಿದ್ದಲ್ಲಿ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿ, ಅವರನ್ನು ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಕ್ವಾರಂಟೈನ್‌ ಮಾಡಲು ನಿರ್ಧರಿಸಿದೆ.

ತಪಾಸಣೆ ವೇಳೆ ನೆಗೆಟಿವ್‌ ರಿಪೋರ್ಟ್‌ ಇದ್ದೂ ಸೋಂಕು ಲಕ್ಷಣಗಳು ಕಂಡುಬಂದಲ್ಲಿ ಅವರಿಗೂ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಲಾಗುತ್ತದೆ. ಬಳಿಕ ಅವರನ್ನು ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಕ್ವಾರಂಟೈನ್‌ ಮಾಡಲಾಗುತ್ತದೆ.

ರೈಲು ಪ್ರಯಾಣಕ್ಕೂ ನೆಗೆಟಿವ್‌ ಕಡ್ಡಾಯ:

ಇನ್ನು ರೈಲುಗಳಲ್ಲಿ ಕೇರಳ ಹಾಗೂ ಮಹಾರಾಷ್ಟ್ರದಿಂದ ನಗರಕ್ಕೆ ಬರುವ ಪ್ರಯಾಣಿಕರಿಗೂ 72 ಗಂಟೆಯೊಳಗಿನ ಕೊರೋನಾ ನೆಗೆಟಿವ್‌ ರಿಪೋರ್ಟ್‌ ಕಡ್ಡಾಯಗೊಳಿಸಲಾಗಿದೆ. ಕೆಎಸ್‌ಆರ್‌ ರೈಲು ನಿಲ್ದಾಣ, ಯಶವಂತಪುರ, ಕಂಟೋನ್ಮೆಂಟ್‌, ಕೆ.ಆರ್‌.ಪುರ ರೈಲು ನಿಲ್ದಾಣ ಸೇರಿದಂತೆ ಪ್ರಮುಖ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ತಪಾಸಣೆಗೆ ಬಿಬಿಎಂಪಿ ವಿಶೇಷ ತಂಡಗಳನ್ನು ನಿಯೋಜಿಸಲಿದೆ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona