ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಸರ್ಕಾರ ಇನ್ನೂ ಅನುಮೋದನೆ ನೀಡಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವರು ಲೋಕಸಭೆಯಲ್ಲಿ ತಿಳಿಸಿದ್ದಾರೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಲು ರಾಜ್ಯ ಸರ್ಕಾರ ಪದೇ ಪದೇ ಮನವಿ ಮಾಡಿದ್ದರೂ, ಕೇಂದ್ರದಿಂದ ಇನ್ನೂ ಸ್ಪಂದನೆ ಸಿಕ್ಕಿಲ್ಲ. 

ನವದೆಹಲಿ (ಆ.2): ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಗೆ ಅನುಮೋದನೆ ನೀಡಲಾಗಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವ ಪ್ರತಾಪ್‌ರಾವ್ ಜಾಧವ್ ಶುಕ್ರವಾರ ಲೋಕಸಭೆಗೆ ಮಾಹಿತಿ ನೀಡಿದರು. ಕಾಂಗ್ರೆಸ್ ಲೋಕಸಭಾ ಸದಸ್ಯರಾದ ಜಿ ಕುಮಾರ ನಾಯಕ್ ಮತ್ತು ಇ ತುಕಾರಾಂ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (ಪಿಎಂಎಸ್‌ಎಸ್‌ವೈ) ಅಡಿಯಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಇದುವರೆಗೆ 22 ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆದರೆ, ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಗೆ ಅನುಮೋದನೆ ನೀಡಲಾಗಿಲ್ಲ ಎಂದು ಸಚಿವರು ತಮ್ಮ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ಕರ್ನಾಟಕ ಸರ್ಕಾರ ಕೇಂದ್ರವನ್ನು ಒತ್ತಾಯಿಸುತ್ತಲೇ ಬಂದಿದೆ.

ಕರ್ನಾಟಕಕ್ಕೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಹಂಚಿಕೆ ಮಾಡದಿರುವ ಬಗ್ಗೆ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ನಡುವೆ ಕಳದ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಮಾತಿನ ಚಕಮಕಿ ನಡೆದಿತ್ತು. ಕರ್ನಾಟಕಕ್ಕೆ ಏಮ್ಸ್ ಪಡೆಯಲು ಸರ್ಕಾರ ಸಾಕಷ್ಟು ಕೆಲಸ ಮಾಡುತ್ತಿಲ್ಲ ಎಂದು ಜೆಡಿ (ಎಸ್) ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಆರೋಪಿಸಿದಾಗ, ಕಾಂಗ್ರೆಸ್ ಸದಸ್ಯರು, ವಿಶೇಷವಾಗಿ ಕಲ್ಯಾಣ್ ಕರ್ನಾಟಕ ಪ್ರದೇಶದವರು ತಿರುಗೇಟು ನೀಡಿದರು.

"ಕೇಂದ್ರದಿಂದ ಏಮ್ಸ್ ಪಡೆಯದ ಎರಡು ರಾಜ್ಯಗಳು ಕರ್ನಾಟಕ ಮತ್ತು ಕೇರಳ ಮಾತ್ರ. ರಾಯಚೂರಿನಲ್ಲಿ ಭೂಮಿಯನ್ನು ಗುರುತಿಸಿ ಕೇಂದ್ರಕ್ಕೆ ನೀಡಲಾಗಿದೆ. ನಾವು ನೀರು ಮತ್ತು ವಿದ್ಯುತ್ ಪೂರೈಕೆಯ ಭರವಸೆ ನೀಡಿದ್ದೇವೆ. ಮುಖ್ಯಮಂತ್ರಿಗಳು ಪತ್ರಗಳನ್ನು ಬರೆದಿದ್ದಾರೆ ಮತ್ತು ಈ ಪ್ರದೇಶದ ಶಾಸಕರು ಮತ್ತು ಸಂಸದರ ನಿಯೋಗವು ಆರೋಗ್ಯ ಸಚಿವರನ್ನು ಭೇಟಿ ಮಾಡಿದೆ" ಎಂದು ಕೆಕೆ ಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಮತ್ತು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸ್ ರಾಜು ಹೇಳಿದ್ದರು.

ಈ ಬಗ್ಗೆ ವಿವಿಧ ವೇದಿಕೆಗಳಲ್ಲಿ ಮಾತನಾಡಿದ್ದ ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌, ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಸ್ಥಾಪನೆ ಮತ್ತು ಅಸ್ತಿತ್ವದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಮೇಲ್ದರ್ಜೆಗೇರಿಸುವ ವಿಷಯದಲ್ಲಿ ಕೇಂದ್ರವು ರಾಜ್ಯದ ಬಗ್ಗೆ 'ಮಲತಾಯಿ ಧೋರಣೆ' ಅನುಸರಿಸುತ್ತಿದೆ ಎಂದಿದ್ದರು.

ರಾಯಚೂರು ಜಿಲ್ಲೆಯಲ್ಲಿ ಪ್ರಮುಖ ವೈದ್ಯಕೀಯ ಸಂಸ್ಥೆಯನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಪದೇ ಪದೇ ಮನವಿ ಮಾಡಿದ್ದರೂ ಕೇಂದ್ರವು ಸ್ಪಂದಿಸುತ್ತಿಲ್ಲ ಎಂದು ಅವರು ಹೇಳಿದ್ದರು. ಆಗಿನ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಏಮ್ಸ್ ಸ್ಥಾಪಿಸುವಂತೆ ವಿನಂತಿಸಿದ್ದಾಗಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ವೈಯಕ್ತಿಕವಾಗಿ ಏಮ್ಸ್ ಮಂಜೂರು ಮಾಡುವಂತೆ ಮನವಿ ಪತ್ರವನ್ನು ಹಸ್ತಾಂತರಿಸಿದರು ಆದರೆ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಅವರು ಹೇಳಿದರು. ರಾಜ್ಯ ಸರ್ಕಾರವು ರಾಯಚೂರಿನಲ್ಲಿ ಏಮ್ಸ್‌ಗಾಗಿ ಭೂಮಿಯನ್ನು ಗುರುತಿಸಿದೆ ಮತ್ತು ಅದನ್ನು ಸ್ಥಾಪಿಸಲು "ಅಗತ್ಯವಿರುವ ಎಲ್ಲವನ್ನೂ" ಒದಗಿಸಲು ಸಿದ್ಧವಾಗಿದೆ ಎಂದು ಸಚಿವರು ಹೇಳಿದ್ದಾರೆ.