ಅಪೌಷ್ಟಿಕತೆ ನಿವಾರಣೆಗೆ ಪೌಷ್ಟಿಕಾಂಶವುಳ್ಳ ಆಹಾರ ಅತ್ಯವಶ್ಯಕವಾಗಿದ್ದು, ಪ್ರತಿಯೊಬ್ಬರು ಪೌಷ್ಟಿಕ ಆಹಾರ ಸೇವನೆ ಮಾಡುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಂಡು ರೋಗಮುಕ್ತ ಸಮಾಜವನ್ನಾಗಿ ನಿರ್ಮಿಸಬೇಕೆಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿ. ದೀಪಾ ತಿಳಿಸಿದರು.

 ತಿಪಟೂರು : ಅಪೌಷ್ಟಿಕತೆ ನಿವಾರಣೆಗೆ ಪೌಷ್ಟಿಕಾಂಶವುಳ್ಳ ಆಹಾರ ಅತ್ಯವಶ್ಯಕವಾಗಿದ್ದು, ಪ್ರತಿಯೊಬ್ಬರು ಪೌಷ್ಟಿಕ ಆಹಾರ ಸೇವನೆ ಮಾಡುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಂಡು ರೋಗಮುಕ್ತ ಸಮಾಜವನ್ನಾಗಿ ನಿರ್ಮಿಸಬೇಕೆಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿ. ದೀಪಾ ತಿಳಿಸಿದರು.

Add Asianetnews Kannada as a Preferred SourcegooglePreferred

ತಾಲೂಕಿನ ಕೊನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ, ಆರೋಗ್ಯ ಇಲಾಖೆ, ತಾಲೂಕು ಸ್ತ್ರೀಶಕ್ತಿ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಪೋಷಣ್ ಮಾಸಾಚರಣೆ ಜನಾಂದೋಲನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪೌಷ್ಟಿಕ ಆಹಾರ ಪ್ರತಿಯೊಬ್ಬ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಅಗತ್ಯವಾಗಿದ್ದು, ದಿನನಿತ್ಯ ಸೇವಿಸುವ ಆಹಾರದಲ್ಲಿ ಸೊಪ್ಪು, ತರಕಾರಿ, ಮೊಳಕೆಕಾಳು, ಬೇಳೆಕಾಳು, ದ್ವಿದಳ ಧಾನ್ಯಗಳು, ಹಣ್ಣು ಹಂಪಲುಗಳನ್ನು ಸೇವಿಸುವುದರಿಂದ ಉತ್ತಮ ಪೌಷ್ಟಿಕಾಂಶಗಳು ದೊರೆಯಲಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದರು.

ತುಮಕೂರು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ನಂದಕುಮಾರ್ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯಕರ ಜೀವನಕ್ಕೆ ಬೇಕಾಗಿರುವ ಸಮತೋಲನ ಆಹಾರವನ್ನು ಸೇವಿಸಬೇಕು. ಸ್ಥಳೀಯವಾಗಿ ಸಿಗುವ ಸೊಪ್ಪು, ತರಕಾರಿ, ಗೆಡ್ಡೆ ಗೆಣಸುಗಳು ಮತ್ತು ಸಿರಿಧಾನ್ಯಗಳ ಬಳಕೆಯಿಂದ ಉತ್ತಮ ಆರೋಗ್ಯ ನಿಮ್ಮದಾಗಲಿದೆ ಎಂದರು.

ತಾಲೂಕು ಕಾನೂನು ಸೇವಾ ಸಮಿಸಿಯ ಕೆ.ಎಸ್. ಮಮತಾ ಮಾತನಾಡಿ ಆರೋಗ್ಯಕರ ಮತ್ತು ಪೌಷ್ಟಿಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯ ವೃದ್ದಿಸಲಿದ್ದು ಪ್ರತಿಯೊಬ್ಬರು ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕೆಂದು ತಿಳಿಸಿದರು.

ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ಎಸ್. ಗೋಪಾಲಪ್ಪ ಮಾತನಾಡಿ, ಪ್ರತಿ ವರ್ಷ ಸೆ. ೧ರಿಂದ ೭ರವರೆಗೆ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹವನ್ನು ಆಚರಿಸಲಾಗುತ್ತದೆ. ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ವಿವಿಧ ರೋಗಗಳನ್ನು ತಡೆಗಟ್ಟುವಲ್ಲಿ ಪೌಷ್ಟಿಕಾಂಶಗಳ ಪಾತ್ರ ಮಹತ್ವದಾಗಿದೆ. ರಾಸಾಯನಿಕ ಗೊಬ್ಬರಗಳನ್ನು ಉಪಯೋಗಿಸಿ ಉತ್ಪಾದನೆ ಮಾಡುವ ಆಹಾರ ಪದಾರ್ಥಗಳ ಸೇವನೆಯಿಂದ ಆಗುತ್ತಿರುವ ಅನಾರೋಗ್ಯ ಸಮಸ್ಯೆಗಳ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆವಿಕೆ ವಿಜ್ಞಾನಿಗಳಾದ ಡಾ. ಕೆ. ನಿತ್ಯಶ್ರೀ, ಎಂ. ದರ್ಶನ್, ಡಾ. ತಸ್ಮೀಯಕೌಸರ್, ಮನೋಜ್, ಡಾ. ಕೀರ್ತಿಶಂಕರ್, ಡಾ. ಸತೀಶ್, ಸಿಡಿಪಿಒ ಇಲಾಖೆಯ ಮೇಲ್ವಿಚಾರಕರಾದ ಬಿ.ಎನ್. ಪ್ರೇಮಾ, ಗೌರಮ್ಮ ಎಣ್ಣಿ, ಪಿಎಚ್‌ಸಿ ಮಂಜುಳಾ, ತಾಲೂಕು ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಮಂಜುಳಾ, ಡಾ. ಅಶೋಕ್, ಚಿದಾನಂದ್ ಸೇರಿದಂತೆ ಗರ್ಭೀಣಿಯರು, ಅಂಗನವಾಡಿ ಕಾರ್ಯಕರ್ತೆಯರು, ಕೃಷಿ ಸಖಿಯರು, ಮಹಿಳೆಯರು ಭಾಗವಹಿಸಿದ್ದರು. ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಅಂಗನವಾಡಿ ಮಕ್ಕಳು ಕೃಷ್ಣ, ರಾಧಾ ವೇಷಧರಿಸಿದ್ದರು.

ಈ ಸಪ್ತಾಹದ ಪ್ರಮುಖ ಉದ್ದೇಶ ಜನರಿಗೆ ಆಹಾರ ಮತ್ತು ಆರೋಗ್ಯದ ಬಗ್ಗೆ ಅರಿವು ಮೂಡಿಸುವುದಾಗಿದೆ. ಪೌಷ್ಟಿಕಾಂಶವು ನಮ್ಮ ದೈನದಿಂದನ ಜೀವನದ ಕ್ರಮವಾಗಿದೆ. ಹಿಂದಿನ ಕಾಲದಲ್ಲಿ ಉಪಯೋಗಿಸುತ್ತಿದ್ದ ಸಿರಿಧಾನ್ಯಗಳ ಆಹಾರ ಪದಾರ್ಥಗಳ ಸೇವನೆಯಿಂದ ಹಿಂದಿನ ಕಾಲದ ಹಿರಿಯರ ಆರೋಗ್ಯ ಗಟ್ಟಿಮುಟ್ಟಾಗಿತ್ತು. ಆದ್ದರಿಂದ ಪ್ರತಿಯೊಬ್ಬರು ಸಿರಿಧಾನ್ಯಗಳನ್ನು ಹೆಚ್ಚೆಚ್ಚು ಬಳಸುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು.

ಡಾ. ವಿ. ಗೋವಿಂದೆಗೌಡ ಕೆವಿಕೆ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ