Asianet Suvarna News Asianet Suvarna News

Bengaluru: ಪಂತರಪಾಳ್ಯ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ಪುನೀತ್‌ ರಾಜ್‌ಕುಮಾರ್‌ ಹೆಸರು

ಬಿಬಿಎಂಪಿಯಿಂದ ನಾಯಂಡನಹಳ್ಳಿ ವಾರ್ಡ್‌ನ ಪಂತರಪಾಳ್ಯದ ಎರಡೂವರೆ ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ಡಾ.ಪುನೀತ್‌ ರಾಜ್‌ಕುಮಾರ್‌ ಅವರ ಹೆಸರು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. 

Pantarapalya Super Specialty Hospital is named after Puneeth Rajkumar gvd
Author
First Published Mar 8, 2023, 10:06 AM IST

ಬೆಂಗಳೂರು (ಮಾ.08): ಬಿಬಿಎಂಪಿಯಿಂದ ನಾಯಂಡನಹಳ್ಳಿ ವಾರ್ಡ್‌ನ ಪಂತರಪಾಳ್ಯದ ಎರಡೂವರೆ ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ಡಾ.ಪುನೀತ್‌ ರಾಜ್‌ಕುಮಾರ್‌ ಅವರ ಹೆಸರು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ಸುಮಾರು 50 ಕೋಟಿ ರು. ವೆಚ್ಚದಲ್ಲಿ ಈ ಆಸ್ಪತ್ರೆ ಬಿಬಿಎಂಪಿ ನಿರ್ಮಿಸುತ್ತಿದ್ದು, ಈಗಾಗಲೇ ಬಹುತೇಕ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. 200 ಹಾಸಿಗೆಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಡಾ.ಪುನೀತ್‌ ರಾಜ್‌ಕುಮಾರ್‌ ಹೆಸರು ನಾಮಕರಣ ಮಾಡುವ ಸಂಬಂಧ ಆಕ್ಷೇಪಣೆ ಸಲ್ಲಿಸಲು ಮಾ.6 ವರೆಗೆ ಅವಕಾಶ ನೀಡಲಾಗಿತ್ತು. 

ಸಲ್ಲಿಸಿರುವ ಆಕ್ಷೇಪಣೆ ಪರಿಶೀಲಿಸಿದ ಬಳಿಕ ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗುವುದು. ಸರ್ಕಾರದಿಂದ ಅಧಿಸೂಚನೆ ಹೊರಡಿಸಿದ ಬಳಿಕ ನಾಮಕರಣ ಪ್ರಕ್ರಿಯೆ ನಡೆಯಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ತಿಂಗಳು ಉದ್ಘಾಟನೆ: ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಮಾರ್ಚ್‌ನಲ್ಲಿ ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಕ್ಕಳ ಎನ್‌ಐಸಿಯು ವ್ಯವಸ್ಥೆ, ಅತ್ಯಾಧುನಿಕ ಶಸ್ತ್ರಚಿಕಿತ್ಸಾ ಕೊಠಡಿ, ಸಾಮಾನ್ಯ ವೈದ್ಯಕೀಯ ಚಿಕಿತ್ಸೆ ವ್ಯವಸ್ಥೆಯನ್ನು ಆಸ್ಪತ್ರೆ ಹೊಂದಿರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಣ ಆಯ್ತು ವಿಧಾನಸೌಧ ಗೇಟ್‌ ಬಳಿ ಈಗ ಮದ್ಯದ ಬಾಟಲಿ ಪತ್ತೆ!

ಚುನಾವಣೆ: ಸಮಿತಿಗಳ ಮುಖ್ಯಸ್ಥರು, ಸದಸ್ಯರ ಸಭೆ: ಚುನಾವಣಾ ಆಯೋಗ ಕಾಲಕಾಲಕ್ಕೆ ನೀಡುವ ಸೂಚನೆಗಳನ್ನು ನಿಖರವಾಗಿ ಪಾಲನೆ ಮಾಡಬೇಕು. ಮುಂಬರುವ ವಿಧಾನಸಭೆ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸೂಚನೆ ನೀಡಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಚಿಸಲಾದ ಬೆಂಗಳೂರು ನಗರ ಜಿಲ್ಲಾ ಮಟ್ಟದ ಶಾಸನಬದ್ಧ ಸಮಿತಿಗಳ ಮುಖ್ಯಸ್ಥರು ಮತ್ತು ಸದಸ್ಯರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ ಕ್ಷಣದಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಎಲ್ಲ ಅಧಿಕಾರಿ, ಸಿಬ್ಬಂದಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಸಾರ್ವಜನಿಕ ಸಭೆ, ಸಮಾರಂಭಗಳ ಮೇಲೆ ನಿಗಾ ವಹಿಸಬೇಕು. ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಪ್ರಕರಣ ದಾಖಲಿಸಿ, ವರದಿ ಸಲ್ಲಿಸಬೇಕು. ಮತಗಟ್ಟೆಗಳನ್ನು ಭೇಟಿ ಮಾಡಿ ಪರಿಶೀಲನೆ ಮಾಡಬೇಕು. ಕ್ಷೇತ್ರದ ಚುನಾವಣೆಗೆ ನಿಯೋಜಿಸಿದ ಅಧಿಕಾರಿಗಳ ಸಭೆ ನಡೆಸಿ ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳಿಗೆ ತಂಡಗಳೊಂದಿಗೆ ಭೇಟಿ ನೀಡಬೇಕು. 

Chikkaballapur: ಮಾ.25ಕ್ಕೆ ಮುದ್ದೇನಹಳ್ಳಿಗೆ ಪ್ರಧಾನಿ ಮೋದಿ ಭೇಟಿ

ಮಾದರಿ ನೀತಿ ಸಂಹಿತೆ ಅನುಷ್ಠಾನ, ವೆಚ್ಚದ ಮೇಲೆ ನಿಗಾ, ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿಗಳ ಮೇಲೆ ನಿಗಾ, ದೂರುಗಳ ನಿರ್ವಹಣೆ ಮತ್ತು ವಶಪಡಿಸಿಕೊಳ್ಳುವ ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬಿತ್ಯಾದಿ ವಿಷಯಗಳ ಕುರಿತು ಸೂಚನೆ ನೀಡಲಾಯಿತು. ಸಭೆಯಲ್ಲಿ ಜಿಲ್ಲಾ ಮಾದರಿ ನೀತಿ ಸಂಹಿತೆ ಅನುಷ್ಠಾನ ದಳ, ಜಿಲ್ಲಾ ವೆಚ್ಚ ಪರಿವೀಕ್ಷಣಾ ದಳ, ಜಿಲ್ಲಾ ವೆಚ್ಚ ಪರಿವೀಕ್ಷಣಾ ಸಮಿತಿ, ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಪರಿವೀಕ್ಷಣಾ ಸಮಿತಿ, ಜಿಲ್ಲಾ ಮಾಧ್ಯಮ ಪರಿವೀಕ್ಷಣಾ ದಳ, ಜಿಲ್ಲಾ ದೂರು ಪರಿವೀಕ್ಷಣಾ ದಳ, ನಗದು ವಶಪಡಿಸಿಕೊಳ್ಳುವ ಪರಿಹಾರ ಸಮಿತಿಯ ಅಧ್ಯಕ್ಷರು, ಸದಸ್ಯರುಗಳು ಪಾಲ್ಗೊಂಡಿದ್ದರು.

Follow Us:
Download App:
  • android
  • ios