ಕೊಳಗೇರಿ ನಿವಾಸಿಗಳಿಗೆ ಶಾಶ್ವತ ಸೂರು: ಸಚಿವ ಜಮೀರ್ ಅಹಮದ್
ಹಲವು ವರ್ಷಗಳಿಂದ ಗುಡಿಸಲು ಹಾಗೂ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿರುವವರು, ಕೆಲವೆಡೆ ನೆಲಬಾಡಿಗೆ ನೀಡಿ ಜೀವನ ನಡೆಸುತ್ತಿರುವ ಕುಟುಂಬಗಳಿಗೆ ಸ್ವಂತ ಮನೆ ಕಟ್ಟಿಕೊಡಲು ಪ್ರಸ್ತಾವನೆ ಸಿದ್ಧಪಡಿಸುವಂತೆ ನಿರ್ದೇಶಿಸಿದ ಸಚಿವ ಜಮೀರ್ ಅಹಮದ್ ಖಾನ್
ಬೆಂಗಳೂರು(ಜೂ.29): ಘೋಷಿತ ಕೊಳಗೇರಿ ಪ್ರದೇಶದಲ್ಲಿ ವಾಸವಿರುವ ಸಮರ್ಪಕ ಸೂರು ವ್ಯವಸ್ಥೆ ಇಲ್ಲದ ಸುಮಾರು 3 ಸಾವಿರ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಯೋಜನೆ ರೂಪಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಳಗೇರಿ ಅಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಬುಧವಾರ ಕೊಳಗೇರಿ ನಿವಾಸಿಗಳು, ಕೊಳಗೇರಿ ನಿವಾಸಿಗಳ ಪರ ಸಂಘ-ಸಂಸ್ಥೆಗಳ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಹಲವು ವರ್ಷಗಳಿಂದ ಗುಡಿಸಲು ಹಾಗೂ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿರುವವರು, ಕೆಲವೆಡೆ ನೆಲಬಾಡಿಗೆ ನೀಡಿ ಜೀವನ ನಡೆಸುತ್ತಿರುವ ಕುಟುಂಬಗಳಿಗೆ ಸ್ವಂತ ಮನೆ ಕಟ್ಟಿಕೊಡಲು ಪ್ರಸ್ತಾವನೆ ಸಿದ್ಧಪಡಿಸುವಂತೆ ನಿರ್ದೇಶಿಸಿದರು.
ಅಲ್ಪಸಂಖ್ಯಾತ ವಸತಿ ಶಾಲೆಗಳಲ್ಲಿ ಕನ್ನಡ ಕಲಿಕೆಗೆ ಒತ್ತು ನೀಡಿ: ಜಮೀರ್ ಸೂಚನೆ
ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕೊಳಗೇರಿ ಎಂದು ಘೋಷಿಸಿದ್ದರೂ ಕೆರೆಯಂಗಳ, ಮಳೆ ನೀರುಗಾಲುವೆ, ವಿದ್ಯುತ್ ತಂತಿ ಹಾದು ಹೋಗಿರುವ ಮಾರ್ಗ, ಅರಣ್ಯ ಪ್ರದೇಶ ಎಂಬ ಕಾರಣಕ್ಕಾಗಿ ಹಲವು ಕಡೆ ಮನೆ ಕಟ್ಟಿಕೊಡಲು ಸಾಧ್ಯವಾಗಿಲ್ಲ. ಯಾವುದೇ ಮೂಲಸೌಕರ್ಯವಿಲ್ಲದೆ ಸಾವಿರಾರು ಕುಟುಂಬಗಳು ಸಂಕಷ್ಟದಲ್ಲಿವೆ. ಹೀಗಾಗಿ ಅವರಿಗೆ ಮನೆ ನಿರ್ಮಿಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಕೆಆರ್ ಪುರ ಹೋಬಳಿಯ ಬಿದರಹಳ್ಳಿ 8 ಎಕರೆ ಜಾಗ ಗುರುತಿಸಲಾಗಿದೆ. ಅದೇ ರೀತಿ ನಗರದ ಇತರ ಕಡೆಗಳಲ್ಲಿನ ಸರ್ಕಾರಿ ಭೂಮಿ ಪಡೆಯುವ ಬಗ್ಗೆ ಕಂದಾಯ ಸಚಿವರೊಂದಿಗೆ ಚರ್ಚಿಸಲಾಗುವುದು. ವಸತಿ ಸಮುಚ್ಛಯ ನಿರ್ಮಿಸಿ ಅಲ್ಲಿಕೆ ಕುಟುಂಬಗಳನ್ನು ಸ್ಥಳಾಂತರಿಸಲಾಗುವುದು ಎಂದರು. ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ವೆಂಕಟೇಶ್, ಪ್ರಧಾನ ಎಂಜಿನಿಯರ್ ಬಾಲರಾಜು ಇತರರಿದ್ದರು.