Karwar ರೈಲು ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆ ಮತ್ತು ಆರಾಮಕ್ಕಾಗಿ ₹1 ಲಕ್ಷ ವೆಚ್ಚದಲ್ಲಿ ಪಿಂಕ್ ಬಬಲ್ ವಿಶ್ರಾಂತಿ ಆಸನ ವ್ಯವಸ್ಥೆ ಆರಂಭಿಸಲಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದರು.

ಕಾರವಾರ (ಜೂ.12): ಮಹಿಳಾ ಪ್ರಯಾಣಿಕರ ಸುರಕ್ಷತೆ ಮತ್ತು ಆರಾಮದಾಯಕ ಪ್ರಯಾಣಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕಾರವಾರ ರೋಟರಿ ಕ್ಲಬ್ ವತಿಯಿಂದ ಕಾರವಾರದ ರೈಲ್ವೆ ನಿಲ್ದಾಣದಲ್ಲಿ ಮಹಿಳೆಯರಿಗೆ ಪಿಂಕ್ ಬಬಲ್ ಅಸನದ ವ್ಯವಸ್ಥೆಯನ್ನು ಸುಮಾರು ₹1 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಕಾರವಾರ ರೈಲ್ವೆ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರಿಗಾಗಿ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾದ ಪಿಂಕ್ ಬಬಲ್ ವಿಶ್ರಾಂತಿ ಆಸನ ವ್ಯವಸ್ಥೆ ಉದ್ಘಾಟನೆ ಮತ್ತು ಕಾರವಾರ-ಮಡಗಾಂವ್ ಕಾಯಂ ರೈಲನ್ನು ಸ್ವಾಗತಿಸಿ ಮಾತನಾಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಹಿಳಾ ಪ್ರಯಾಣಿಕರು ರೈಲು ಬರುವವರೆಗೆ ಸುರಕ್ಷಿತ ಹಾಗೂ ಸುಸಜ್ಜಿತ ವಾತಾವಾರಣದಲ್ಲಿ ನಿರಾಳವಾಗಿ ಕಾಯಲು ಅನುಕೂಲವಾಗುವಂತೆ ಪಿಂಕ್ ಬಬಲ್ ಅಸನದ ವ್ಯವಸ್ಥೆಯನ್ನು ನಿರ್ಮಿಸಲಾಗಿದ್ದು, ಮಹಿಳೆಯರ ಸುರಕ್ಷತೆಗಾಗಿ ಸಿಸಿ ಕ್ಯಾಮೆರಾವನ್ನು ಅಳವಡಿಸಲಾಗಿದ್ದು, ಮಹಿಳೆಯರಿಗೆ ತೊಂದರೆ ನೀಡುವವರ ವಿರುದ್ಧ ರೈಲ್ವೆ ಪೊಲೀಸರಿಂದ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಮಡಗಾಂವ್ ಕಾರವಾರ ತಾತ್ಕಾಲಿಕ ಶೆಟಲ್ ರೀತಿಯಲ್ಲಿ ಸಂಚಾರ ಮಾಡುತ್ತಿದ್ದ ರೈಲನ್ನು ಕಾಯಂಗೊಳಿಸುವ ಪ್ರಕ್ರಿಯೆ ನಡೆದಿದ್ದು, ಮಡಗಾಂವ್‌ನಲ್ಲಿ ಇಂದು ರೈಲ್ವೆ ಖಾತೆಯ ರಾಜ್ಯ ಸಚಿವ ಸೋಮಣ್ಣ ಮಡಗಾಂವದಿಂದ ಕಾರವಾರಕ್ಕೆ ಬರುವ ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಬೀಳ್ಕೊಡಲಾಗಿದೆ ಎಂದರು. ಕಾರವಾರ ನಿಲ್ದಾಣದಲ್ಲಿ ಮುಂದಿನ ದಿನಗಳಲ್ಲಿ ಒಂದು ಕಡೆಯಿಂದ ಇನ್ನೊಂದು ಪ್ಲಾಟ್ ಫಾರಂಗೆ ಹೋಗಲು ಹಿರಿಯ ನಾಗರಿಕರಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಲಿಫ್ಟ್‌ ಅಳವಡಿಸಲಾಗುವುದು ಎಂದರು.

ಅತಿ ಹೆಚ್ಚು ಪ್ರಾಮುಖ್ಯತೆ

ಅಂಕೋಲಾ ಮತ್ತು ಹುಬ್ಬಳಿ ರೈಲು ಖಂಡಿತವಾಗಿ ಮಾಡಲಾಗುತ್ತದೆ. ತಾಳಗುಪ್ಪ-ಹೊನ್ನಾವರ ರೈಲು ಮಾರ್ಗ ಕಲ್ಪಿಸಲು ಸರ್ವೇ ಕಾರ್ಯ ಮಾಡಲಾಗಿದೆ. ಕೊಂಕಣ ರೈಲ್ವೆ ಜಮ್ಮು ಕಾಶ್ಮಿರದಿಂದ ವಿದೇಶದವರೆಗೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ಮಂಗಳೂರಿನಿಂದ ಬಾಂಬೆವರೆಗೆ ಇರುವ ಕೊಂಕಣ ರೈಲ್ವೆಗೆ ಮಂಗಳೂರು, ಉಡುಪಿ, ಉತ್ತರ ಕನ್ನಡ ಸಂಸದರು ಸೇರಿ ಉತ್ತರ ಕನ್ನಡ ಜಿಲ್ಲೆಯ ಕೊಂಕಣ ರೈಲ್ವೆ ಅತಿ ಹೆಚ್ಚು ಪ್ರಾಮುಖ್ಯತೆ ನೀಡುವಂತೆ ಪ್ರಯತ್ನ ಮಾಡಲಾಗುತ್ತಿದ್ದು, ಕುಮಟಾ ಮತ್ತು ಗೋಕರ್ಣ ರೈಲ್ವೆ ನಿಲ್ದಾಣದಲ್ಲಿ ಎರಡನೇ ಪ್ಲಾಟ್ ಫಾರಂ ಮಾಡಲಾಗಿದ್ದು, ಉದ್ಘಾಟನೆಗೆ ಸಿದ್ದವಾಗಿದೆ. ಮುರುಡೇಶ್ವರ ಮತ್ತು ಭಟ್ಕಳ ರೈಲ್ವೆ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ಈ ಬಾರಿ ಕೇಂದ್ರದ ಹಣಕಾಸು ಇಲಾಖೆಯಿಂದ ಕೊಂಕಣ ರೈಲ್ವೆಗೆ ಮೂಲ ಸೌಕರ್ಯ ಅಭಿವೃದ್ಧಿಗಾಗಿ ಸುಮಾರು ₹7 ಸಾವಿರ ಕೋಟಿಯನ್ನು ಅನುದಾನವನ್ನು ತರಲು ಪ್ರಯತ್ನಿಸಲಾಗುತ್ತಿದ್ದು, ಈ ಅನುದಾನದಲ್ಲಿ ಕೊಂಕಣ ರೈಲ್ವೆಯ ಸಮಗ್ರ ಸುಧಾರಣೆ ಮಾಡಲಾಗುವುದು. ರೈಲ್ವೆ ನಿಲ್ದಾಣಗಳಲ್ಲಿ ಮೂಲ ಸೌಕರ್ಯಗಳ ಜೊತೆ ರೈಲ್ವೆ ನಿಲ್ದಾಣಗಳಲ್ಲಿ ಎರಡನೆ ಪ್ಲಾಟ್ ಫಾರಂ ಮಾಡುವ ಪ್ರಯತ್ನವನ್ನು ಮೂರು ಜಿಲ್ಲೆಯ ಸಂಸದರಿಂದ ಮಾಡಲಾಗುತ್ತಿದೆ ಎಂದರು.