ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡುತ್ತಿರುವ ಕಾರ್ಯಕ್ರಮ ನಿಗದಿಯಾಗಿರುವ ಹಿನ್ನೆಲೆ ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌ ಅವರು ಅಧಿಕಾರಿಗಳೊಂದಿಗೆ ಪೂರ್ವ ಸಿದ್ದತಾ ಸಭೆ ನಡೆಸಿದರು. 

ಚಾಮರಾಜನಗರ (ಡಿ.02): ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡುತ್ತಿರುವ ಕಾರ್ಯಕ್ರಮ ನಿಗದಿಯಾಗಿರುವ ಹಿನ್ನೆಲೆ ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌ ಅವರು ಅಧಿಕಾರಿಗಳೊಂದಿಗೆ ಪೂರ್ವ ಸಿದ್ದತಾ ಸಭೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿಯವರಿಂದ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಬೇಕಿರುವ ಅಭಿವೃದ್ಧಿ ಕಾಮಗಾರಿಗಳ ವಿವರ, ಇದಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಿರುವ ಸಿದ್ದತಾ ಕ್ರಮಗಳಿಗೆ ತ್ವರಿತವಾಗಿ ಮುಂದಾಗುವಂತೆ ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚಾಮರಾಜನಗರ ಹಾಗೂ ಹನೂರಿನಲ್ಲಿ ಮುಖ್ಯಮಂತ್ರಿಯವರು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ, ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಿದ್ದಾರೆ. ಮಲೆಮಹದೇಶ್ವರ ಬೆಟ್ಟಕ್ಕೂ ಭೇಟಿ ನೀಡಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಪ್ರತ್ಯೇಕ ಅಧಿಕಾರಿಗಳ ತಂಡ ಸಿಬ್ಬಂದಿ ನಿಯೋಜನೆಯಾಗಬೇಕು. ಈ ನಿಟ್ಟಿನಲ್ಲಿ ಜವಾಬ್ದಾರಿಗಳು ನಿಗದಿಪಡಿಸಿ ಕೂಡಲೇ ಅಧಿಕಾರಿಗಳು, ಸಿಬ್ಬಂದಿಪಟ್ಟಿಸಿದ್ದಪಡಿಸಿ ಸಲ್ಲಿಸಬೇಕು ಎಂದರು.

Chamarajanagar: ಪೊಲೀಸ್‌ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ

ಪ್ರತಿ ಇಲಾಖೆಗಳು ಆಯಾ ವ್ಯಾಪ್ತಿಯ ಯೋಜನೆ, ಸೌಲಭ್ಯ ಸವಲತ್ತು ವಿತರಿಸಲು ಫಲಾನುಭವಿಗಳ ಪಟ್ಟಿಮಾಡಿಕೊಳ್ಳಬೇಕು. ಸಮಾರಂಭದ ಸ್ಥಳದಲ್ಲಿ ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯ ಯೋಜನೆ ಕಾರ್ಯಕ್ರಮಗಳ ಮಾಹಿತಿ ನೀಡುವ ಪ್ರದರ್ಶನ ಮಳಿಗೆ ತೆರೆಯಬೇಕು ಎಂದರು. ಚಾಮರಾಜನಗರ ಪಟ್ಟಣ, ಹನೂರಿನಲ್ಲಿ ಕಾರ್ಯಕ್ರಮ ನಡೆಯಲಿರುವುದರಿಂದ ಸಾರ್ವಜನಿಕರಿಗೆ ಕುಳಿತುಕೊಳ್ಳುವ ಆಸನ, ಗಣ್ಯರ ವೇದಿಕೆ, ಫಲಾನುಭವಿಗೆ ಪ್ರತ್ಯೇಕ ಸ್ಥಳ ಸೇರಿದಂತೆ ಇತರೆ ವ್ಯವಸ್ಥೆಗಳು ಸಮರ್ಪಕವಾಗಿರಬೇಕು. ತಾತ್ಕಾಲಿಕ ಶೌಚಾಲಯ, ಕುಡಿವ ನೀರಿನ ವ್ಯವಸ್ಥೆ, ವಾಹನ ನಿಲುಗಡೆ ಇನ್ನಿತರ ಸೌಲಭ್ಯಗಳು ಇರುವಂತೆ ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು.

Chamarajanagar: ಸಬ್‌ ರಿಜಿಸ್ಟರ್‌ ಕಚೇರಿಯಲ್ಲಿ ಮಧ್ಯವರ್ತಿಗಳ ದರ್ಬಾರ್‌

ಇಲಾಖೆ ಅಧಿಕಾರಿಗಳು ಅತ್ಯಂತ ಮುತುವರ್ಜಿವಹಿಸಿ ಕಾರ್ಯಕ್ರಮದ ಆಯೋಜನೆಗೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಬೇಗನೆ ಪೂರ್ಣಗೊಳಿಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶವಾಗದಂತೆ ಎಲ್ಲಾ ಕ್ರಮಗಳಿಗೆ ಕಾರ್ಯೋನ್ಮುಖರಾಗುವಂತೆ ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಸೂಚಿಸಿದರು. ಜಿ.ಪಂ.ಸಿಇಒ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್‌, ಎಡಿಸಿ ಎಸ್‌. ಕಾತ್ಯಾಯಿನಿದೇವಿ, ಉಪವಿಭಾಗಾಧಿಕಾರಿ ಗೀತಾ ಹುಡೇದ, ಎಲ್ಲಾ ತಾಲೂಕುಗಳ ತಹಶೀಲ್ದಾರರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.