ರಾಜ್ಯದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನಿಲುವು ತಾಳಿದೆ ಎಂದು ಆರೋಪಿಸಿ ರಾಜ್ಯದಾದ್ಯಂತ ಬಿಜೆಪಿಯ ರೈತ ಮೋರ್ಚಾದ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಮತ್ತು ತಾಲೂಕು ಬಿಜೆಪಿ ಅಧ್ಯಕ್ಷ ಕಲ್ಕರೆ ಮೃತ್ಯುಂಜಯ ಹೇಳಿದ್ದಾರೆ.

 ತುರುವೇಕೆರೆ: ರಾಜ್ಯದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನಿಲುವು ತಾಳಿದೆ ಎಂದು ಆರೋಪಿಸಿ ರಾಜ್ಯದಾದ್ಯಂತ ಬಿಜೆಪಿಯ ರೈತ ಮೋರ್ಚಾದ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಮತ್ತು ತಾಲೂಕು ಬಿಜೆಪಿ ಅಧ್ಯಕ್ಷ ಕಲ್ಕರೆ ಮೃತ್ಯುಂಜಯ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಬಂದು ನೂರು ದಿನಗಳು ಕಳೆದಿದೆ. ರೈತಪರ ಯೋಜನೆಗಳಾದ ಕಿಸಾನ್ ಸನ್ಮಾನ್, ವಿದ್ಯಾನಿಧಿ, ಶ್ರಮನಿಧಿ ಯೋಜನೆಗಳನ್ನು ರದ್ದು ಮಾಡಲಾಗಿದೆ. ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಕೃಷಿಗೆ ಅಗತ್ಯವಿರುವ ವಸ್ತುಗಳ ಬೆಲೆ ಗಗನಕ್ಕೇರಿದೆ. ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಕಡಿತಗೊಳಿಸಲಾಗಿದೆ. ರಾಜ್ಯದಲ್ಲಿ ಬರಗಾಲ ತಾಂಡವಾಡುತ್ತಿದೆ. ಆದರೂ ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿಲ್ಲ. ಇಂತಹ ಸಂಕಷ್ಠ ಪರಿಸ್ಥಿತಿಯಲ್ಲಿ ರೈತಾಪಿಗಳು ಬದುಕುವುದು ಅಸಾಧ್ಯದ ಮಾತಾಗಿದೆ. ಇಂತಹ ಪರಿಸ್ಥಿತಿ ಬರಲು ಕಾರಣವಾಗಿರುವ ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ರಾಜ್ಯ ರೈತ ಮೋರ್ಚಾ ಹಾಗೂ ಬಿಜೆಪಿ ಒಗ್ಗೂಡಿ ಹೋರಾಟಕ್ಕೆ ಇಳಿದಿದೆ.

ಸೆಪ್ಟಂಬರ್ ೮ ರ ಶುಕ್ರವಾರದಂದು ಪಟ್ಟಣದ ತಾಲೂಕು ಕಚೇರಿಯ ಮುಂಭಾಗ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಸಮ್ಮುಖ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ತುರುವೇಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಸಾಲಾ ಜಯರಾಮ್ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕರ್ತರು ಬೆಳಗ್ಗೆ ೧೧ ಗಂಟೆಗೆ ನಡೆಯುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಶಿವಪ್ರಸಾದ್ ಮತ್ತು ಕಲ್ಕರೆ ಮೃತ್ಯುಂಜಯ ವಿನಂತಿಸಿಕೊಂಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಬಿಜೆಪಿಯ ಮಾಜಿ ಅಧ್ಯಕ್ಷ ದುಂಡ ರೇಣುಕಯ್ಯ, ಜಿಲ್ಲಾ ಕಾರ್ಯದರ್ಶಿ ಕೆಂಪೇಗೌಡ, ಅನಿತಾ ನಂಜುಂಡಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷೆ ಚೂಡಾಮಣಿ, ಪಿಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ಹೇಮಚಂದ್ರು, ಜಯರಾಮ್, ಸೋಮೇನಹಳ್ಳಿ ಜಗದೀಶ್ ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು.