Raichur Republic Day : ಅಂಬೇಡ್ಕರ್ಗೆ ಅಪಮಾನಿಸಿದ ಜಡ್ಜ್ ವಿರುದ್ಧ ಫೆ.19ರಂದು ಬೆಂಗಳೂರಲ್ಲಿ ಪ್ರತಿಭಟನಾ ಮೆರವಣಿಗೆ
* ಅಂಬೇಡ್ಕರ್ಗೆ ಅಪಮಾನಿಸಿದ ಜಡ್ಜ್ ವಿರುದ್ಧ ಕ್ರಮಕ್ಕಾಗಿ ನಾಡಿದ್ದು ರಾರಯಲಿ
* ರಾಯಚೂರು ಗಣರಾಜ್ಯೋತ್ಸವ ಕಾರ್ಯಕ್ರಮದ ಗಟನೆ
* ರಾಜ್ಯಾದ್ಯಂತ ನ್ಯಾಯಾಧೀಶರ ವಿರುದ್ಧ ಪ್ರತಿಭಟನೆ ನಡೆದಿತ್ತು
ಬೆಂಗಳೂರು(ಫೆ. 17) ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ (Dr BR Ambedkar)ಅವರ ಭಾವಚಿತ್ರಕ್ಕೆ ಅವಮಾನಿಸಿರುವ ರಾಯಚೂರು (Raichur) ಜಿಲ್ಲಾ ನ್ಯಾಯಾಧೀಶರ ವಿರುದ್ಧ ಈವರೆಗೂ ಕ್ರಮಕ್ಕೆ ಮುಂದಾಗದ ಸರ್ಕಾರದ ಕ್ರಮ ಖಂಡಿಸಿ ಫೆ.19ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ತಿಳಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸದಸ್ಯ ಬಿ.ಗೋಪಾಲ್, ಫೆ.19ರಂದು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ವಿಧಾನಸೌಧದ ಮುಂಭಾಗದ ಅಂಬೇಡ್ಕರ್ ಪ್ರತಿಮೆಯವರೆಗೂ ಪ್ರತಿಭಟನಾ ರಾರಯಲಿ ನಡೆಯಲಿದೆ. ರಾರಯಲಿಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗಲಿದ್ದಾರೆ ಎಂದು ಹೇಳಿದರು.
ಈ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್ನ ಎಲ್ಲಾ ನ್ಯಾಯಾಧೀಶರು ತಾರ್ಕಿಕ ಅಂತ್ಯ ನೀಡಿಲ್ಲ. ಬದಲಾಗಿ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಂವಿಧಾನ ದಿನದಂದು ಮಾತ್ರ ಅಂಬೇಡ್ಕರ್ ಅವರ ಭಾವಚಿತ್ರ ಇಡಬೇಕು ಎಂದು ಸೂಚನೆ ನೀಡಿದ್ದಾರೆ. ಆದ್ದರಿಂದ ಸರ್ಕಾರ ತನ್ನ ವಿವೇಚನೆ ಬಳಸಿ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ವಿವರ ಪಡೆದು ನ್ಯಾಯಾಧೀಶರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲು ರಾಜ್ಯಪಾಲರಿಗೆ ಮನವಿ ಮಾಡಬೇಕು ಎಂದು ಅವರು ಕೋರಿದರು.
ದಲಿತ ಸಂಘಟನೆಗಳ ಮುಖಂಡರಾದ ಎನ್.ಮೂರ್ತಿ, ಎಂ.ವೆಂಕಟಸ್ವಾಮಿ, ಮಾವಳ್ಳಿ ವೆಂಕಟೇಶ್, ಎಂ.ಮಹಾದೇವಸ್ವಾಮಿ ಮತ್ತಿತರರಿದ್ದರು.
ಹೈಕೋರ್ಟ್ ಗೆ ದೂರು: ‘ಗಣರಾಜ್ಯೋತ್ಸವ(Republic Day) ಅಂಗವಾಗಿ ರಾಯಚೂರಿನ(Raichur) ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಬುಧವಾರ ಆಯೋಜಿಸಿದ್ದ ಧ್ವಜಾರೋಹಣ ಕಾರ್ಯಕ್ರಮದ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆಸಿದ್ದಾರೆ ಎನ್ನಲಾದ ವಿವಾದ ಸಂಬಂಧ ಕೆಲ ವಕೀಲರು ಮತ್ತು ಸಂಘಟನೆಗಳು ನ್ಯಾಯಾಧೀಶರ ವಿರುದ್ಧ ಹೈಕೋರ್ಟ್ ಗೆ ದೂರು ನೀಡಿದ್ದರು.
ಈ ಬಗ್ಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ರಿಜಿಸ್ಟ್ರಾರ್ ಜನರಲ್ ಅವರಿಗೆ ಇ-ಮೇಲ್ ಮೂಲಕ ಕೆಲ ವಕೀಲರು ಮತ್ತು ವಕೀಲರ ಸಂಘ ದೂರು ಸಲ್ಲಿಸಿ, ‘ರಾಯಚೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಸಂವಿಧಾನ ಶಿಲ್ಪಿ ಅಂಬೇಡ್ಕರ್ಗೆ ಅಪಮಾನ ಮಾಡಿದ್ದಾರೆ. ಹೀಗಾಗಿ, ಪ್ರಕರಣ ಸಂಬಂಧ ಸಮಗ್ರ ತನಿಖೆಗೆ ಆದೇಶಿಸಬೇಕು. ನ್ಯಾ.ಮಲ್ಲಿಕಾರ್ಜುನ ಗೌಡ ಅವರನ್ನು ವಜಾಗೊಳಿಸಬೇಕು’ ಎಂದು ಒತ್ತಾಯಿಸಿದ್ದರು.
ಘಟನೆಯ ನಂತರ ವಿದ್ಯಾರ್ಥಿ ಸಂಘಟನೆಗಳು ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಸಿದ್ದವು. ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ ನಡೆಸಿವ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿತ್ತು.
ನ್ಯಾಯಾಧೀಶರು ಹೇಳಿದ್ದೇನು? ರಾಯಚೂರು “ಸಂವಿಧಾನ ಶಿಲ್ಪಿ ಹಾಗೂ ಭಾರತ ರತ್ನ ಡಾ.ಬಿ.ಅರ್.ಅಂಬೇಡ್ಕರವರ ಬಗ್ಗೆ ನನಗೆ ಅಪಾರ ಗೌರವ ಮತ್ತು ಅಭಿಮಾನ ಇದೆ” ಎಂದು ರಾಯಚೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಹೇಳಿದ್ದರು.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿ, ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನ ದಿನ ಆಚರಣೆ ಮಾಡುತ್ತಾ ಬಂದಿದ್ದು, ಆ ಸಮಯದಲ್ಲಿ ನಾನು ಅಂತಹ ಮಹಾನ್ ವ್ಯಕ್ತಿತ್ವ,ತತ್ವ, ಆದರ್ಶ ಮತ್ತು ನಡೆ ನುಡಿಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು ಅಂತಾ ವಿನಂತಿಸಿಕೊಂಡಿರುತ್ತೇನೆ. ಮಹಾನ್ ವ್ಯಕ್ತಿಗೆ ನಾನು ಯಾವತ್ತು ಅಗೌರವ ತೋರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.