'ಕೈ' ಬಿಟ್ಟು ಕಮಲ ಹಿಡಿದ ನಾಯಕಗೆ ತಪ್ಪಿತು ಸಚಿವ ಸ್ಥಾನ, ಹೊರಬಿತ್ತು ಅಸಮಾಧಾನ..!
ಮೈತ್ರಿ ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಸಾಕಷ್ಟು ಶ್ರಮಿಸಿದ ನಾಯಕರಲ್ಲಿ ಒಬ್ಬರಾದ ಸಿ. ಪಿ. ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಕೈ ತಪ್ಪಿರೋದು ಅಸಮಧಾನ ಸೃಷ್ಟಿಸಿದೆ. ಪ್ರಭಾವಿ ನಾಯಕರಾಗಿರುವ ಸಿ.ಪಿ.ಯೋಗೇಶ್ವರ್ ಅವರಿಗೆ ಪಕ್ಷ ಸಂಘಟನೆ ಉದ್ದೇಶದಿಂದ ಮಂತ್ರಿಗಿರಿ ಸಿಗುತ್ತದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಕಾರ್ಯಕರ್ತರ ನಿರೀಕ್ಷೆ ಹುಸಿಯಾಗಿದೆ.
ಬೆಂ. ಗ್ರಾಮಾಂತರ(ಆ.21): ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಕೆಡವಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಶ್ರಮಿಸಿದವರಲ್ಲಿ ಒಬ್ಬರಾದ ಸಿ.ಪಿ.ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಕೈ ತಪ್ಪಿರುವುದು ಕಮಲ ಪಡೆಯ ಕಾರ್ಯಕರ್ತರಲ್ಲಿ ಬೇಸರ ತಂದಿದೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರತಿನಿಧಿಸುವ ಜಿಲ್ಲೆಯಲ್ಲಿ ಬಿಜೆಪಿಯ ಪ್ರಭಾವಿ ನಾಯಕರಾಗಿರುವ ಸಿ.ಪಿ.ಯೋಗೇಶ್ವರ್ ಅವರಿಗೆ ಪಕ್ಷ ಸಂಘಟನೆ ಉದ್ದೇಶದಿಂದ ಮಂತ್ರಿಗಿರಿ ಸಿಗುತ್ತದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಪಕ್ಷದ ವರಿಷ್ಠರ ತೀರ್ಮಾನ ಇದೀಗ ಬಿಜೆಪಿ ಕಾರ್ಯಕರ್ತರು ಅಸಮಾಧಾನಗೊಳ್ಳುವಂತೆ ಮಾಡಿದೆ.
ಬಿಜೆಪಿಯಿಂದ ರೇಷ್ಮೆನಗರಿ ಕಡೆಗಣನೆ:
ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಅಧಿಕಾರದಲ್ಲಿದ್ದರೆ, ಇನ್ನುಳಿದ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಹಿಡಿತ ಸಾಧಿಸಿದೆ. ಇದರಲ್ಲೂ ಮೂರು ಕ್ಷೇತ್ರಗಳು ಮಾತ್ರ ಘಟಾನುಘಟಿ ನಾಯಕರನ್ನು ಹೊಂದಿದೆ. ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ, ಕನಕಪುರದಲ್ಲಿ ಡಿ.ಕೆ.ಶಿವಕುಮಾರ್, ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಅವರು ಶಾಸಕರಾಗಿದ್ದಾರೆ. ಈಗ ಬಿಜೆಪಿ ಸರ್ಕಾರ ರಚನೆಯಾದ ಬಳಿಕ ಜಿಲ್ಲೆಯನ್ನು ಪ್ರತಿನಿಧಿಸಲು ಬಿಜೆಪಿ ಶಾಸಕರೇ ಇಲ್ಲ. ಹೀಗಾಗಿ ಸಿ.ಪಿ.ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಿ ಆನಂತರ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿಕೊಳ್ಳುವ ಅಥವಾ ಶಾಸಕರ ರಾಜೀನಾಮೆಯಿಂದ ತೆರವಾಗಿರುವ ಯಾವುದಾದರು ಕ್ಷೇತ್ರದಿಂದ ಸ್ಪರ್ಧೆಗಿಳಿಸಿ ಗೆಲ್ಲಿಸಿಕೊಳ್ಳುವ ಲೆಕ್ಕಾಚಾರ ಬಿಜೆಪಿ ವಲಯದಲ್ಲಿ ನಡೆದಿತ್ತು.
ಜೆಡಿಎಸ್, ಕಾಂಗ್ರೆಸ್ ಪ್ರಭಾವಿ ನಾಯಕರನ್ನು ಎದುರಿಸುವ ಸವಾಲು:
ಜೆಡಿಎಸ್ ಮತ್ತು ಕಾಂಗ್ರೆಸ್ನ ಪ್ರಭಾವಿ ನಾಯಕರನ್ನು ಸಮರ್ಥವಾಗಿ ಎದುರಿಸಬೇಕಾಗಿದೆ. ಜತೆಗೆ ಹಳೇ ಮೈಸೂರು ಭಾಗದಲ್ಲಿ ಮೈಸೂರು- ಕೊಡಗು ಹೊರತು ಪಡಿಸಿ ಉಳಿದೆಡೆ ಬಿಜೆಪಿ ಪಕ್ಷಕ್ಕೆ ನೆಲೆ ಇಲ್ಲ. ಈ ಭಾಗದಲ್ಲಿ ಒಕ್ಕಲಿಗ ಮತಗಳನ್ನು ಸೆಳೆಯಬೇಕಾದರೆ ಯೋಗೇಶ್ವರ್ ಅವರಂತಹ ನಾಯಕರಿಗೆ ಮನ್ನಣೆ ನೀಡಬೇಕು.
ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಬೇಕೆನ್ನುವ ಕೂಗು ಪಕ್ಷದಲ್ಲಿ ಕೇಳಿಬಂದಿತ್ತು. ಅಲ್ಲದೆ, ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸಿದ್ದ ಯೋಗೇಶ್ವರ್ ಕೂಡ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರದ ಕೆಲವು ನಾಯಕರ ಮೂಲಕ ವರಿಷ್ಠರ ಮೇಲೆ ಒತ್ತಡ ಹೇರಿದ್ದರು. ಅದ್ಯಾವುದು ಪ್ರಯೋಜನಕ್ಕೆ ಬಂದಂತೆ ಕಾಣುತ್ತಿಲ್ಲ.
ಕಮಲ ಹಿಡಿದು ಮಂತ್ರಿಯಾಗಿದ್ದರು:
ಡಿ.ಕೆ.ಶಿವಕುಮಾರ್ ಅವರಿಂದ ಸಚಿವ ಸ್ಥಾನ ಹಾಗೂ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದರಿಂದ ಬೇಸರಗೊಂಡಿದ್ದ ಸಿ.ಪಿ.ಯೋಗೇಶ್ವರ್ ಬಿಜೆಪಿ ಸೇರ್ಪಡೆಯಾದರು. 2008ರ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ.ಸಿ.ಅಶ್ವತ್ ವಿರುದ್ಧ ಯೋಗೇಶ್ವರ್ ಪರಾಭವ ಹೊಂದಿದ್ದರು. ಆದರೆ ,ಬಿಜೆಪಿ ಅಂದು ಆರಂಭಿಸಿದ ಆಪರೇಷನ್ ಕಮಲದ ಮೂಲಕ ಜೆಡಿಎಸ್ ಶಾಸಕರಾಗಿದ್ದ ಎಂ.ಸಿ.ಅಶ್ವಥ್ ಅವರಿಂದ ರಾಜೀನಾಮೆ ಕೊಡಿಸಿದ್ದರು. ಆಗ ಎದುರಾದ ಉಪಚುನಾವಣೆಯಲ್ಲಿ ಯೋಗೇಶ್ವರ್ ಬಿಜೆಪಿ ಪಕ್ಷದಿಂದ ಜಯಭೇರಿ ಬಾರಿಸಿದರು. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಅರಣ್ಯ ಸಚಿವರಾಗಿ ಅಧಿಕಾರ ನಡೆಸಿದ್ದರು.
ಆನಂತರ ಬಿಜೆಪಿ ತೊರೆದ ಯೋಗೇಶ್ವರ್, ಸಮಾಜವಾದಿ ಪಕ್ಷದ ಸೈಕಲ್ ತುಳಿದು ವಿಧಾನಸೌಧ ಪ್ರವೇಶಿಸಿದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡಿದರು. ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತ ಹೊಂದಿದ್ದರಿಂದ ಯೋಗೇಶ್ವರ್ ಅವರಿಗೆ ಮಂತ್ರಿ ಯೋಗ ಸಿಗಲಿಲ್ಲ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್- ಕಾಂಗ್ರೆಸ್ ಪಕ್ಷಗಳಿಗೆ ಪರ್ಯಾಯವಾಗಿ ಬಿಜೆಪಿ ಪಕ್ಷ ಸಂಘಟಿಸುವ ಉದ್ದೇಶದಿಂದ ಯೋಗೇಶ್ವರ್ ಮತ್ತೊಮ್ಮೆ ಕಮಲ ಪಾಳಯ ಸೇರಿದರು. ವಿಧಾನಸಭೆ ಚುನಾವಣೆಯಲ್ಲಿ ತನ್ನ ರಾಜಕೀಯ ವಿರೋಧಿಗಳು ಹೆಣೆದ ಚಕ್ರವ್ಯೂಹವನ್ನು ಭೇದಿಸಲಾರದೆ ಸೈನಿಕ ಯೋಗೇಶ್ವರ್ ಸೋಲು ಅನುಭವಿಸಿದರು. ಜೆಡಿಎಸ್ - ಕಾಂಗ್ರೆಸ್ ದೋಸ್ತಿ ಸರ್ಕಾರ ಕೆಡವಿದ್ದ ಕಾರಣಕ್ಕಾದರು ಸಚಿವ ಸ್ಥಾನ ಸಿಗುತ್ತದೆ ಎಂಬ ಆಸೆಯೂ ನುಚ್ಚು ನೂರಾಗಿದೆ.
ಸೇಡು ತೀರಿಸಿಕೊಂಡ ಸೈನಿಕ?
ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸುವ ಪ್ರತಿಜ್ಞೆಯೊಂದಿಗೆ ಬಿಜೆಪಿ ಸೇರಿದ ಸೈನಿಕನನ್ನು ತನ್ನ ತವರು ನೆಲದಲ್ಲೆ ಕೆಡವಲು ಕೊನೆಕ್ಷಣದಲ್ಲಿ ಎಚ್.ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ತಂತ್ರಗಾರಿಕೆ ರೂಪಿಸಿದರು. ಅದರಂತೆ ಕುಮಾರಸ್ವಾಮಿ ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು.
5 ಬಾರಿ ಗೆಲುವು ಸಾಧಿಸಿ 6ನೇ ಬಾರಿಗೆ ವಿಧಾನಸೌಧದ ಮೆಟ್ಟಿಲತ್ತುವ ಯೋಗೇಶ್ವರ್ ಕನಸು ಕೈಗೂಡಲಿಲ್ಲ. ವಿಧಾನಸಭಾ ಚುನಾವಣೆ ಸೋಲಿನ ಬಳಿಕ ಸುಮ್ಮನೆ ಕೂರದ ಯೋಗೇಶ್ವರ್ ಕೆಲ ಶಾಸಕರನ್ನು ಬಿಜೆಪಿಗೆ ಕರೆತರಲು ಆಪರೇಷನ್ ಆರಂಭಿಸಿದರು. ಯಡಿಯೂರಪ್ಪ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡು ಆಪರೇಷನ್ ಕಮಲಕ್ಕೆ ಯೋಗೇಶ್ವರ್ ಪ್ರಯತ್ನಿಸಿದ ವಿಷಯ ಗುಟ್ಟಾಗಿ ಉಳಿದ ಸಂಗತಿಯೇನಲ್ಲ.
ಜನರ ಮುಂದೆ ಕಣ್ಣೀರಿಟ್ಟ ನೂತನ ಸಚಿವ ಸಿ.ಟಿ.ರವಿ
6 ತಿಂಗಳ ಹಿಂದೆ ಖುದ್ದು ಸಿಎಂ ಕುಮಾರಸ್ವಾಮಿ ಅವರೇ ಯೋಗೇಶ್ವರ್ ನನ್ನ ಸರ್ಕಾರ ಬೀಳಿಸಲು ಪ್ರಯತ್ನಿಸುತ್ತಿರುವ ಕಿಂಗ್ಪಿನ್ ಎಂದು ಬಹಿರಂಗವಾಗಿ ಆರೋಪಿಸಿದ್ದರು. ಅಂತಿಮವಾಗಿ ಯೋಗೇಶ್ವರ್ ಜೆಡಿಎಸ್ - ಕಾಂಗ್ರೆಸ್ನ ಅತೃಪ್ತ ಶಾಸಕರಿಂದ ರಾಜೀನಾಮೆ ಕೊಡಿಸಿ ದೋಸ್ತಿ ಸರ್ಕಾರ ಕೆಡವುದರ ಮೂಲಕ ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ತನ್ನ ಸೋಲಿನ ಸೇಡು ತೀರಿಸಿಕೊಂಡಿದ್ದರು.