ನನ್ನ ಮೇಲೆ ಕೆಲವರು ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ನಾನು ಹಿಂದೆಯೂ ಹೇಳಿದ್ದೇನೆ. ಈಗಲೂ ಹೇಳುತ್ತೇನೆ. ನಿಮ್ಮದೇ ಸರ್ಕಾರ ಇದೆ. ತನಿಖೆ ಮಾಡಿಸಿ ಎಂದು ಒತ್ತಾಯಿಸಿದ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ 

ಬೆಳಗಾವಿ(ಅ.18): ನನ್ನ ಮೇಲಿನ ಭ್ರಷ್ಟಾಚಾರ ಆರೋಪ ಸಂಬಂಧ ಯಾವುದೇ ತನಿಖೆಗೂ ನಾನು ಸಿದ್ಧ ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಕೆಲವರು ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ನಾನು ಹಿಂದೆಯೂ ಹೇಳಿದ್ದೇನೆ. ಈಗಲೂ ಹೇಳುತ್ತೇನೆ. ನಿಮ್ಮದೇ ಸರ್ಕಾರ ಇದೆ. ತನಿಖೆ ಮಾಡಿಸಿ ಎಂದು ಒತ್ತಾಯಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಳಗಾವಿ ಮಹಾನಗರ ಪಾಲಿಕೆಯನ್ನು ಸೂಪರ್‌ ಸೀಡ್‌ ಮಾಡುವ ಕುರಿತು ರಾಜ್ಯ ಸರ್ಕಾರ ನೋಟಿಸ್‌ ಜಾರಿಮಾಡಿದೆ. ಈಗಾಗಲೇ ಪಾಲಿಕೆ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ಸಮರ್ಪಕವಾಗಿ ಉತ್ತರ ನೀಡಿದ್ದಾರೆ. ಅ. 21 ರಂದು ನಡೆಯುವ ಪಾಲಿಕೆ ಸಾಮಾನ್ಯಸಭೆಯಲ್ಲಿ ಎಲ್ಲ ಆರೋಪಗಳಿಗೆ ನಾನು ಉತ್ತರ ಕೊಡುತ್ತೇನೆ ಎಂದರು.

ಇದು ಕೇವಲ ಟ್ರೇಲರ್, ಪಿಚ್ಚರ್‌ ಅಭಿ ಬಾಕಿ ಹೈ: ಸರ್ಕಾರಕ್ಕೆ ಖಡಕ್‌ ಎಚ್ಚರಿಕೆ ಕೊಟ್ಟ ಶ್ರೀಮಂತ ಪಾಟೀಲ

ಪಾಲಿಕೆಯ ಕೆಲ ಅಧಿಕಾರಿಗಳು ಕೆಲವರ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ. ಸರ್ಕಾರಕ್ಕೆ ತಪ್ಪು ವರದಿ ಕೊಟ್ಟಿದ್ದಾರೆ. ಪಾಲಿಕೆ ಸಾಮಾನ್ಯಸಭೆಯಲ್ಲಿ ಮಂಡಿಸಿದ ಠರಾವುಗಳ ಅಂಶಗಳನ್ನು ತಿರುಚಿದ್ದಾರೆ ಎಂದು ಪಾಲಿಕೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಬೆಳಗಾವಿಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಲು ಮೇಯರ್‌, ಉಪಮೇಯರ್‌ ತೆರಳದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಮೇಯರ್‌ ಹೋಗುತ್ತಾರೆ. ಅಧಿಕಾರಿಗಳು ಮಾಹಿತಿ ನೀಡಿದ್ದರೆ ಮೇಯರ್‌ ಹೋಗುತ್ತಾರೆ. ಆದರೆ, ಅಧಿಕಾರಿಗಳು ಎಷ್ಟು ಮಾಹಿತಿ ನೀಡಿದ್ದಾರೆ ಎನ್ನುವುದನ್ನು ನೀವೇ ಅಧಿಕಾರಿಗಳನ್ನು ಕೇಳಿ ಎಂದರು.

ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಶೇ. 40 ರಷ್ಟು ಕಮೀಷನ್‌ ಆರೋಪ ಮಾಡಿತ್ತು. ಕಾಂಗ್ರೆಸ್ ಸರ್ಕಾರ ಮೂರೇ ತಿಂಗಳಲ್ಲಿ ₹ 40 ಕೋಟಿ ಹಣ ಸಿಕ್ಕಿವೆ ಎಂದರೆ, ಈ ಹಣ ಯಾರದ್ದು? ಇದು ಎಷ್ಟು ಪರ್ಸೆಂಟೇಜ್‌ ಸರ್ಕಾರ? ಇದು ₹ 42 ಕೋಟಿ ಪರ್ಸೆಂಟೇಜ್‌ ಸರ್ಕಾರವಾ ಎಂದು ಪ್ರಶ್ನಿಸಿದ ಅಭಯ ಪಾಟೀಲ, ಇನ್ನು ಬಹಳಷ್ಟು ಭ್ರಷ್ಟಾಚಾರ ನಡೆಯುತ್ತಿದೆ. ಕೂಡಲೇ ಕೇಂದ್ರ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.